ಹೊಸಪೇಟೆ: ‘ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕೌಶಲ ವೃದ್ಧಿಸುವ ಉದ್ದೇಶದಿಂದ ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ವ್ಯಾಪ್ತಿಯ ವಾಣಿಜ್ಯ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಇದೇ 8ರಂದು ‘ವಾಣಿಜ್ಯ ಹಬ್ಬ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ’ ಎಂದು ನಗರದ ವಿಜಯನಗರ ಕಾಲೇಜಿನ ಪ್ರಾಚಾರ್ಯ ಡಾ.ಎಸ್.ಎಸ್. ಪೊಲೀಸ್ಪಾಟೀಲ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ಕಾಲೇಜಿನ ಆವರಣದಲ್ಲಿ ನಡೆಯುವ ಈ ‘ವಾಣಿಜ್ಯ ಹಬ್ಬ’ದಲ್ಲಿ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ವ್ಯಾಪ್ತಿಯ ಅಂದಾಜು 30 ಕಾಲೇಜಿನ ವಾಣಿಜ್ಯ ವಿಭಾಗದ ಪದವಿ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದು, ಪ್ರತಿ ಕಾಲೇಜಿನಿಂದ 10 ರಂತೆ ಒಟ್ಟು 300 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ’ ಎಂದರು.
‘ಒಂದು ದಿನ ನಡೆಯುವ ಈ ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ವಿಷಯಗಳಿಗೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಅಲ್ಲದೆ ಸಾಂಸ್ಕೃತಿಕ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ’ ಎಂದರು.
‘ಮಾರ್ಕೇಟಿಂಗ್, ಹಣಕಾಸು, ವಿದ್ಯಾರ್ಥಿಗಳ ಮಾನಸಿಕ ಸಾಮರ್ಥ್ಯಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳು ನಡೆಯಲಿವೆ. ಅಲ್ಲದೆ ಸಾಂಪ್ರದಾಯಿಕ ಉಡುಪು, ನೃತ್ಯ, ನಾಟಕ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸ್ಪರ್ಧೆಗಳು ಜರುಗಲಿವೆ’ ಎಂದು ಹೇಳಿದರು.
‘ವಾಣಿಜ್ಯ ಹಬ್ಬದ ಉದ್ಘಾಟನಾ ಸಮಾರಂಭ ಅಂದು ಬೆಳಿಗ್ಗೆ 9ಗಂಟೆಗೆ ನಡೆಯಲಿದ್ದು, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಲಂ ಗುರುಬಸವರಾಜು ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜೆಎಸ್ಡ್ಲೂ ಸ್ಟೀಲ್ಸ್ನ ಉಪಪ್ರಧಾನ ವ್ಯವಸ್ಥಾಪಕ ಡಾ.ವಿನೋದ್ ನೊವಾಲ್ ಪಾಲ್ಗೊಳ್ಳಲಿದ್ದಾರೆ’ ಎಂದು ಪೊಲೀಸ್ ಪಾಟೀಲ್ ತಿಳಿಸಿದರು.
‘ಕಾರ್ಯಕ್ರಮದಲ್ಲಿ ವಿವೀ ಸಂಘದ ಪದಾಧಿಕಾರಿಗಳಾದ ಕೆ.ಎಂ.ಮಹೇಶ್ವರಸ್ವಾಮಿ, ಎಚ್.ಎಂ.ಗುರುಸಿದ್ದಸ್ವಾಮಿ, ಜೆ.ನೇಪಾಕ್ಷಪ್ಪ, ಎಸ್.ಹಿಮಂತರಾಜ್, ಸಾಲಿ ಸಿದ್ದಯ್ಯ ಸ್ವಾಮಿ, ಗುಡೆಕೋಟೆ ನಾಗರಾಜ, ಎಂ.ವಿರೂಪಾಕ್ಷಯ್ಯ, ಜವಳಿ ವೀರೇಶ್, ಎಂ.ವಿಜಯಕುಮಾರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು.
‘ಸಮಾರೋಪ ಸಮಾರಂಭ ಅದೆ ದಿನ ಸಂಜೆ 7.30ಕ್ಕೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಸಮಾಜ ಸೇವಕಿ ಲತಾ ವಿನೋದ್ ನೊವಾಲ್ ಸೇರಿದಂತೆ ಹಲವರು ಗಣ್ಯರು ಪಾಲ್ಗೊಳ್ಳಲಿದ್ದಾರೆ’ ಎಂದು ಪ್ರಾಚಾರ್ಯರು ತಿಳಿಸಿದರು. ವಿಜಯನಗರ ಕಾಲೇಜಿನ ಸ್ಥಳೀಯ ಆಡಳಿತ ಮಂಡಳಿಯ ಅಧ್ಯಕ್ಷ ಸಾಲಿ ಸಿದ್ದಯ್ಯ ಸ್ವಾಮಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.