ADVERTISEMENT

ಶಾಂತಿಯುತ ಚುನಾವಣೆಗೆ ಸಕಲ ಸಿದ್ಧತೆ

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ.ವಿ. ರಾಮಪ್ರಸಾದ್‌ ಮನೋಹರ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2018, 10:26 IST
Last Updated 28 ಮಾರ್ಚ್ 2018, 10:26 IST

ಬಳ್ಳಾರಿ: ‘ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ನಿಗದಿ ಮಾಡಿದ್ದು, ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ’ ಎಂದು ಜಿಲ್ಲಾ ಚುನವಾಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ.ವಿ. ರಾಮಪ್ರಸಾದ್‌ ಮನೋಹರ್‌ ತಿಳಿಸಿದರು.

’ಮತಗಟ್ಟೆಗಳನ್ನು ಸಿದ್ಧಪಡಿಸುವ ಕಾರ್ಯ ಭರದಿಂದ ನಡೆದಿದೆ. ವೃದ್ಧರು ಮತ್ತು ಅಂಗವಿಕಲರಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಮತಗಟ್ಟೆಗಳ ದುರಸ್ತಿ ಕಾರ್ಯವನ್ನು ಮಾ.31ರ ಒಳಗೆ ಪೂರ್ಣಗೊಳಿಸುವಂತೆ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗಕ್ಕೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ’ ಎಂದು ನಗರದ ತಮ್ಮ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶಾಂತಿ ಭಂಗಕ್ಕೆ ದುಬಾರಿ ದಂಡ: ಬಳ್ಳಾರಿ: ಹಿಂದಿನ ಚುನಾವಣೆಯಲ್ಲಿ ನಡೆದಿರುವ ಶಾಂತಿ ಭಂಗ ಘಟನೆಗಳಿಗೆ ಸಂಬಂಧಿಸಿ ಜಿಲ್ಲೆಯಲ್ಲಿ 1234 ಮಂದಿ ವಿರುದ್ಧ ಸಿಆರ್‌ಪಿಸಿ 107 ಪ್ರಕರಣ ದಾಖಲಿಸಲಾಗಿದ್ದು, 194 ಮಂದಿಯಿಂದ ಬಾಂಡ್‌ ಪಡೆಯಲಾಗಿದೆ. ಉಳಿದವರಿಂದಲೂ ಬಾಂಡ್‌ ಪಡೆಯಲಾಗುವುದು. ಶಾಂತಿ ಭಂಗ ಮಾಡುವು
ದಿಲ್ಲ ಎಂದು ಬರೆದುಕೊಡುವವರು ಆಸ್ತಿ ವಿವರ ಕೊಡಬೇಕು. ದುಬಾರಿ ಶುಲ್ಕ ಪಾವತಿಸಬೇಕು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.‘ನ್ಯಾಯಾಲಯ ಜಾಮೀನು ರಹಿತ ವಾರಂಟ್‌ ನೀಡಿರುವ 461 ಮಂದಿಯನ್ನು ಶೀಘ್ರವೇ ಬಂಧಿಸಲಾಗುವುದು’ ಎಂದರು.

ADVERTISEMENT

67 ತಂಡ: ಚುನಾವಣೆ ಕಾರ್ಯ ಸುಸೂತ್ರವಾಗಿ ನಡೆಯಬೇಕು ಎಂಬ ಆಶಯದಿಂದ ವಿಡಿಯೊ ಜಾಗೃತ ದಳ ಹಾಗೂ ವೀಕ್ಷಣಾ ತಂಡ, ಜಾಗೃತ ದಳ, ಅಂಕಿ ಅಂಶಗಳ ಮೇಲ್ವಿಚಾರಣಾ ದಳ, ಲೆಕ್ಕ ಪರಿಶೋಧಕ ದಳ, ದೂರು ನಿರ್ವಹಣಾ ಮತ್ತು ನಿಯಂತ್ರಣ ಕೋಶ ಸೇರಿದಂತೆ 67 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಇಂದಿ
ನಿಂದಲೇ ಕಾರ್ಯಾರಂಭ ಮಾಡಲಿವೆ’ ಎಂದು ಅವರು ಹೇಳಿದರು.

ಸೂಕ್ಷ್ಮ ಮತಗಟ್ಟೆ: ‘ಜಿಲ್ಲೆಯಲ್ಲಿ ಸೂಕ್ಷ್ಮ ಎಂದು ಗುರುತಿಸಲಾಗಿರುವ ಮತಗಟ್ಟೆಗಳಲ್ಲಿ ವಿಡಿಯೊ ಚಿತ್ರೀಕರಣ ಮಾಡಲಾಗುವುದು. ಅರೆಸೇನಾ ಪಡೆ ಹಾಗೂ ಮೈಕ್ರೋ ವೀಕ್ಷಕರನ್ನು ನಿಯೋಜಿಸಲಾಗುವುದು’ ಎಂದರು.

ಮಾಹಿತಿ ಪುಸ್ತಕ ಬಿಡುಗಡೆ: ಇದುವರೆಗಿನ ವಿಧಾನಸಭಾ ಚುನಾವಣೆ ಕುರಿತ ಮಾಹಿತಿ ಪುಸ್ತಕವನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದ ಅವರು ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಅವರಿಗೆ ಪ್ರತಿಗಳನ್ನು ನೀಡಿದರು.

ಮತದಾನ ಹೆಚ್ಚಿಸುವ ಯತ್ನ: ‘ಜಿಲ್ಲೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಶೇ 90ಕ್ಕೆ ಹೆಚ್ಚಿಸುವ ಪ್ರಯತ್ನ ನಡೆದಿದೆ. ಅದಕ್ಕಾಗಿ ಮತದಾರರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.

ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿಯ ಅಧ್ಯಕ್ಷರೂ ಆಗಿರುವ ಅವರು, ‘ಹಿಂದಿನ ಚುನಾವಣೆಯಲ್ಲಿ ಶೇ 74ರಷ್ಟು ಮತದಾನ ನಡೆದಿತ್ತು. ಈ ಬಾರಿ ಆ ಪ್ರಮಾಣ ಹೆಚ್ಚಿಸುವುದಕ್ಕಾಗಿ ಸಮಿತಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ’ ಎಂದರು.

ಮತದಾರರ ಪಟ್ಟಿಗೆ ಸೇರ್ಪಡೆ: ಏ.24ವರೆಗೆ ವಿಸ್ತರಣೆ ಈಗಾಗಲೇ ಮತದಾರರ ಪರಿಷ್ಕೃತ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆದರೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಏ.24ರವರೆಗೂ ಆಸಕ್ತರು ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಪರಿಶೀಲಿಸಿ ಅವರ ಹೆಸರನ್ನು ಪಟ್ಟಿಗೆ ಸೇರಿಸುವ ಅಥವಾ ತಿರಸ್ಕರಿಸುವ ಕಾರ್ಯ ಅಬಾಧಿತವಾಗಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ವಿ. ರಾಮಪ್ರಸಾದ್‌ ಮನೋಹರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.