ADVERTISEMENT

ಸದಾಶಿವ ಆಯೋಗದ ವರದಿ ಅಂಗೀಕಾರಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2013, 10:04 IST
Last Updated 3 ಡಿಸೆಂಬರ್ 2013, 10:04 IST

ಬಳ್ಳಾರಿ: ಪರಿಶಿಷ್ಟ ಜಾತಿಯ ಒಳ­ಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿ­ದಂತೆ  ನ್ಯಾ.ಎ.ಜೆ. ಸದಾಶಿವ ಆಯೋಗ ಸಲ್ಲಿಸಿರುವ ವರದಿಯನ್ನು ಸರ್ಕಾರ ಬೆಳಗಾವಿಯಲ್ಲಿ ನಡೆದಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನ­ದಲ್ಲಿ ಅಂಗೀಕರಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿ ಮುಖಂಡ­ರಾದ ಜೆ.ಎಂ. ಜಯಗೋಪಾಲ್ ಮನವಿ ಮಾಡಿದರು.

ನಗರದಲ್ಲಿ ಸೋಮವಾರ ಪತ್ರಿಕಾ­ಗೋಷ್ಠಿ­ಯಲ್ಲಿ ಈ ವಿಷಯ ತಿಳಿಸಿದ ಅವರು, ಹೊಲೆ– ಮಾದಿಗ ಸಮು­ದಾಯದ ಅಭ್ಯುದಯದ ಹಿನ್ನೆಲೆಯಲ್ಲಿ ನ್ಯಾ.ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಯಥಾವತ್ತಾಗಿ ಅಂಗೀಕರಿಸಬೇಕು. ಸಚಿವರು, ಎಲ್ಲ ಪಕ್ಷಗಳ ಶಾಸಕರು ಇದಕ್ಕೆ ಬೆಂಬಲ ಸೂಚಿಸುವ ಮೂಲಕ ಶತಮಾನ­ಗಳಿಂದ ತುಳಿತಕ್ಕೆ ಒಳಗಾಗಿರುವ ಸಮುದಾಯದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು  ಕೋರಿದರು.

ಪ್ರಸ್ತುತ ಒಳಮೀಸಲಾತಿ ನಿಯಮಗಳ ಅನ್ವಯ ಪರಿಶಿಷ್ಟ ಜಾತಿಯ ಕೆಲವು ದುರ್ಬಲ ಜನಾಂಗಗಳು ತೀವ್ರ ತೊಂದರೆಗೆ ಸಿಲುಕಿವೆ. ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳು ಇತರರ ಜೊತೆಗೆ ಪೈಪೋಟಿ ನಡೆಸಲು ಸಾಧ್ಯವಾಗದೆ ಅನ್ಯಾಯಕ್ಕೆ ಒಳಗಾಗಿವೆ. ಈ ತಾರತಮ್ಯ ನಿವಾರಿಸಬೇಕಾಗಿದೆ ಎಂದರು.

ಸಾಮಾಜಿಕ ನ್ಯಾಯವನ್ನು ಬೆಂಬಲಿಸುತ್ತಲೇ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಳಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದ ತಾರತಮ್ಯ ನಿವಾರಣೆ ನಿಟ್ಟಿನಲ್ಲಿ ವರದಿ ಅನುಷ್ಠಾನಕ್ಕೆ ಮುಂದಾಗುವ ಮೂಲಕ ತಮ್ಮ ಬದ್ಧತೆಯನ್ನು ಪ್ರದರ್ಶಿಸಬೇಕಿದೆ. ಒಂದೊಮ್ಮೆ ಪ್ರಸಕ್ತ ಅಧಿವೇಶನದಲ್ಲಿ ಈ ವರದಿಯನ್ನು ಅನುಷ್ಠಾನ­ಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗದಿದ್ದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೊಲೆ– ಮಾದಿಗ ಸಮುದಾಯದ ಜನರು ಕಾಂಗ್ರೆಸ್‌ ಪಕ್ಷವನ್ನು ಸಾರಾ­ಸಗಟಾಗಿ ತಿರಸ್ಕರಿಸುವ ಮೂಲಕ ತಕ್ಕ ಪಾಠ ಕಲಿಸುವುದು ಅನಿವಾರ್ಯ ವಾಗಲಿದೆ ಎಂದು ಅವರು ಎಚ್ಚರಿಸಿದರು.

ಸಮಿತಿಯ ಮುಖಂಡರಾದ ವೆಂಕಟೇಶಮೂರ್ತಿ, ವಿಘ್ನೇಶ್‌, ಪಾಲಿಕೆ ಸದಸ್ಯ ಎಂ.ರಮೇಶ, ನರಸಪ್ಪ, ವೆಂಕಟೇಶ, ಪಂಪಾಪತಿ, ಜೆ.ಸುಂಕಣ್ಣ, ಎಚ್‌.ರಮೇಶ್‌, ನಾಗರಾಜ, ಶ್ರೀನಿವಾಸ್‌, ಗುರ್ರಪ್ಪ, ಅನಿಲಕುಮಾರ, ರಾಮಚಂದ್ರಪ್ಪ, ಹುಲಿತೆಪ್ಪ, ತಾಯಣ್ಣ, ಡಿ.ವಿಜಯಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.