ಸಿರುಗುಪ್ಪ: ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ನದಿಗೆ ನೀರು ಹರಿಬಿಟ್ಟಿದರಿಂದ ಭತ್ತ ನಾಟಿ ಮಾಡುವ ರೈತರ ಪಂಪಸೆಟ್ಗಳಿಗೆ ನಿತ್ಯ ಹತ್ತು ತಾಸು ವಿದ್ಯುತ್ ಸರಬರಾಜು ಮಾಡಬೇಕು’ ಎಂದು ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಒತ್ತಾಯಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹದಿಂದಾಗಿ ಜಮೀನುಗಳಿಗೆ ನೀರು ನುಗ್ಗಿ ಭತ್ತ, ಇತರ ಬೆಳೆಗಳು ಹಾಳಾಗಿವೆ. ಸರ್ಕಾರವು ಕೂಡಲೇ ರೈತರಿಗೆ ಪರಿಹಾರ ಒದಗಿಸಬೇಕು.ಇನ್ನು ತಾಲೂಕಿನಲ್ಲಿ ನಿರೀಕ್ಷಿತ ಮಳೆಯಾಗದೆ ಮುಂಗಾರಿನಲ್ಲಿ ಬಿತ್ತಿದ ಬೆಳೆಯು ನೀರಿಲ್ಲದೆ ಒಣಗುತ್ತಿದೆ. ವೇದಾವತಿ ನದಿಗೆ ಕಾಲುವೆ ಮೂಲಕ ನೀರು ಹರಿಸಬೇಕು’ ಎಂದು ಸರ್ಕಾರಕ್ಕೆ ಮನವಿ ಮಾಡಿದರು.
‘ಕಂಪ್ಲಿ ತಾಲ್ಲೂಕಿನಲ್ಲಿ ಪ್ರವಾಹ ಪೀಡಿತ ಗ್ರಾಮಕ್ಕೆ ಕಾಳಜಿ ಕೇಂದ್ರ ಸುಮಾರು ಒಂದು ಕಿ.ಮೀ ದೂರದಲ್ಲಿದೆ. ಇದನ್ನು ವಸತಿ ಸಮೀಪದಲ್ಲಿ ಪ್ರಾರಂಭಿಸಿಬೇಕು’ ಎಂದು ಒತ್ತಾಯಿಸಿದರು.
‘ತೆಕ್ಕಲಕೋಟೆ ಪಟ್ಟಣಕ್ಕೆ ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜು ಮಾಡಲಾಗುತ್ತಿದೆ. ಕಾಲುವೆ ನೀರನ್ನು ಶುದ್ಧೀಕರಣ ಮಾಡದೆ ಕುಡಿಯಲು ಪೂರೈಸಲಾಗುತ್ತಿದೆ. ಇದಕ್ಕೆ ಅಲ್ಲಿನ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ’ ಎಂದು ಟೀಕಿಸಿದರು.
ಸುದ್ದಿಗಾರೊಂದಿಗೆ ಮಾತನಾಡಿ, ತಾಲ್ಲೂಕಿನಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ರೋಗ ಹೆಚ್ಚಾಗುತ್ತಿದ್ದು, ಹತೋಟಿ ಕ್ರಮಕೈಗೊಳ್ಳಬೇಕು, ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ಸ್ವಚ್ಛತೆ ಮಾಯವಾಗಿದೆ ಎಂದು ಆರೋಪಿಸಿದರು.
‘ತೆಕ್ಕಲಕೋಟೆ ಪ.ಪಂ ಮುಖ್ಯ ಅಧಿಕಾರಿಗಳು ಚುನಾಯಿತ ಪ್ರತಿನಿಧಿಗಳ ಅನುಮತಿ ಇಲ್ಲದೆ ಪಶು ಆಸ್ಪತ್ರೆಯ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಿದ್ದಾರೆ. ಬಸ್ ನಿಲ್ದಾಣದಲ್ಲಿ ನಿರ್ಮಿಸಿದ್ದರೆ ಸಾರ್ವಜನಿಕರಿಗೆ ಉಪಯುಕ್ತವಾಗುತ್ತಿತ್ತು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.