ADVERTISEMENT

16ರಂದು ಹೆದ್ದಾರಿ ತಡೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2013, 6:53 IST
Last Updated 11 ಡಿಸೆಂಬರ್ 2013, 6:53 IST

ಬಳ್ಳಾರಿ: ಕೃಷಿ ಕ್ಷೇತ್ರದ ಅಭ್ಯುದಯ­ವನ್ನು ಕಡೆಗಣಿಸಿರುವ ಕೇಂದ್ರ ಸರ್ಕಾರ, ವಿಶ್ವ ವಾಣಿಜ್ಯ ಸಂಘಟನೆಯ  ಶಿಫಾರಸಿನ ಮೇರೆಗೆ ಕೃಷಿಗೆ ನೀಡುವ ಸಹಾಯಧನ ಕಡಿತಗೊಳಿಸುವ ನಿರ್ಧಾರ ಕೈಗೊಂಡಿರುವುದನ್ನು ವಿರೋ­ಧಿಸಿ ಇದೇ 16ರಂದು ರಾಜ್ಯದಾದ್ಯಂತ ಹೆದ್ದಾರಿ ತಡೆದು ಪತಿಭಟಿಸಲು ಕರ್ನಾಟಕ ಪ್ರಾಂತ ರೈತ ಸಂಘ ನಿರ್ಧರಿಸಿದೆ.

ನಗರದಲ್ಲಿ ಮಂಗಳವಾರ ಪತ್ರಿಕಾ­ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಯು.ಬಸವರಾಜ್, ವಿದೇಶಿ ಕಂಪೆನಿಗಳ ಹಿತಾಸಕ್ತಿಯನ್ನು ಕಾಯುವ ನಿಟ್ಟಿನಲ್ಲಿ ಸಹಾಯಧನ ಸೌಲಭ್ಯ ಕಡಿತಗೊಳಿ­ಸುವ ಸರ್ಕಾರದ ನಿರ್ಧಾರದಿಂದ ರೈತ ಹಾಗೂ ಕೃಷಿ ಕೂಲಿಕಾರ ವರ್ಗಕ್ಕೆ ತೀವ್ರ ಹೊಡೆತ ಬೀಳಲಿದೆ. ಈ ಹಿನ್ನೆಲೆಯಲ್ಲಿ ಸಹಾಯ­ಧನ ಸೌಲಭ್ಯ ಮುಂದು­ವರಿಸುವಂತೆ ಆಗ್ರಹಿಸಿ  ರಾಜ್ಯದಾದ್ಯಂತ ಚಳವಳಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಇಂಡೋನೇಷ್ಯಾದ ಬಾಲಿಯಲ್ಲಿ ಇತ್ತೀಚೆಗೆ ನಡೆದ ಶೃಂಗಸಭೆಯಲ್ಲಿ ಭಾರತಕ್ಕೆ ನೀಡುತ್ತಿದ್ದ ಕೃಷಿ ಸಹಾಯ­ಧನ ರದ್ದುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ಈ  ಒಪ್ಪಂದವನ್ನು ಜಾರಿಗೊಳಿಸದಂತೆ ಕೇಂದ್ರ ಸರ್ಕಾರವನ್ನು ಕೋರಲಾಗುವುದು ಎಂದು ಅವರು ಹೇಳಿದರು. ಜಿಲ್ಲೆಯಲ್ಲಿ ಮಿತ್ತಲ್‌, ಬ್ರಹ್ಮಿಣಿ ಉಕ್ಕಿನ ಕಾರ್ಖನೆ ನಿರ್ಮಾಣಕ್ಕೆ ವಶಪಡಿಸಿಕೊಂಡಿರುವ ರೈತರ ಭೂಮಿಗೆ ಸೂಕ್ತ ಬೆಲೆ ನೀಡಬೇಕು ಎಂದು ಆಗ್ರಹಿಸಿ ಸಂಘದ ವತಿಯಿಂದ ಇದೇ 12ರಿಂದ ತಾಲ್ಲೂಕಿನ ಕುಡತಿನಿ ಗ್ರಾಮದಲ್ಲಿ ಅನಿರ್ದಿಷ್ಟಾವಧಿಯ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಈ ಕಾರ್ಖಾನೆಗಳನ್ನು ಸ್ಥಾಪಿಸಲು ರೈತರಿಂದ ಸಾವಿರಾರು ಎಕರೆ ಭೂಮಿಯನ್ನು ವಶಪಡಿಸಿಕೊಂಡು, ಸಮರ್ಪಕ ಬೆಲೆ ನೀಡಿಲ್ಲ. ಕೂಡಲೇ ಸರ್ಕಾರ ಮಧ್ಯಪ್ರವೇಶ ಮಾಡಿ, ರೈತರಿಗೆ ಸೂಕ್ತ ದರ ದೊರಕಿಸಿಕೊಡಲು ಮುಂದಾಗಬೇಕು ಎಂದು ಒತ್ತಾಯಿಸಿ ತಾಲೂಕಿನ ಕುಡತಿನಿ, ಕೊಳಗಲ್ಲು, ಹರಗಿನದೋಣಿ, ಸಿದ್ದಮ್ಮನಹಳ್ಳಿ ಗ್ರಾಮಗಳ ರೈತರು ಈ ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರ ತಿಳಿಸಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿ.ಎಸ್. ಶಿವಶಂಕರ್, ನಾಗದೇವಪ್ಪ, ಪೋಲಯ್ಯ, ಗವಿಸಿದ್ದಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.