ADVERTISEMENT

ಶೈಕ್ಷಣಿಕ ಅಭಿವೃದ್ಧಿಗೆ ಶೇ 25ರಷ್ಟು ಅನುದಾನ

ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಅನುದಾನ: ಸಚಿವ ಮಧು ಬಂಗಾರಪ್ಪ ಭರವಸೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2024, 15:48 IST
Last Updated 2 ಆಗಸ್ಟ್ 2024, 15:48 IST
ತೋರಣಗಲ್ಲು ಹೋಬಳಿಯ ಜಿಂದಾಲ್ ವಿದ್ಯಾನಗರದ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಎಜ್ಯುಕಾನ್–2024’ ಎರಡನೇ ದಿನದ ಶೈಕ್ಷಣಿಕ ಸಮಾವೇಶವನ್ನು ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು
ತೋರಣಗಲ್ಲು ಹೋಬಳಿಯ ಜಿಂದಾಲ್ ವಿದ್ಯಾನಗರದ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಎಜ್ಯುಕಾನ್–2024’ ಎರಡನೇ ದಿನದ ಶೈಕ್ಷಣಿಕ ಸಮಾವೇಶವನ್ನು ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು   

ತೋರಣಗಲ್ಲು: ‘ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಸಮಗ್ರ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಶೇ 25ರಷ್ಟು ಅನುದಾನ ಮೀಸಲಿಡಲಾಗುವುದು’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಹೋಬಳಿಯ ಜಿಂದಾಲ್‌ನ ವಿದ್ಯಾನಗರದ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ವಿಭಾಗ ಹಾಗೂ ಜಿಂದಾಲ್ ಕಾರ್ಖಾನೆ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಎಜ್ಯುಕಾನ್ –2024’ರ ಎರಡನೇ ದಿನದ ಶೈಕ್ಷಣಿಕ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಅಧಿಕ ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗಿದೆ. ಇದರಿಂದ ಸರ್ಕಾರಿ ಶಾಲೆಗೆ ಬರುವ ಮಕ್ಕಳ ಸಂಖ್ಯೆ ಹೆಚ್ಚಳವಾಗಲಿದೆ. ಈಗಾಗಲೇ ರಾಜ್ಯದಲ್ಲಿ 42,500 ಅತಿಥಿ ಶಿಕ್ಷಕಕರನ್ನು ನೇಮಿಸಲಾಗಿದೆ. ಅದರಲ್ಲಿ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ 11,600 ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ’ ಎಂದು ಹೇಳಿದರು.

ADVERTISEMENT

‘ಸರ್ಕಾರಿ ಕಾಲೇಜುಗಳಿಗೂ ಸಿಇಟಿ, ನೀಟ್ ಸೇರಿದಂತೆ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅಗತ್ಯ ತರಬೇತಿ ನೀಡಲು ರಾಜ್ಯ ಸರ್ಕಾರವು 25 ಸಾವಿರ ಮಕ್ಕಳಿಗೆ ₹ 12ಕೋಟಿ ಅನುದಾನ ಮೀಸಲಿಟ್ಟಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಮರು ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು. ಮಕ್ಕಳಿಗೆ ಮಧ್ಯಾಹ್ನದ ಊಟದ ಜೊತೆಗೆ ವಾರಕ್ಕೆ ಆರು ದಿನವೂ ಮೊಟ್ಟೆ ವಿತರಿಸಲು ಕ್ರಮ ಕೈಗೊಳ್ಳಾಗಿದೆ’ ಎಂದರು.

ವಿಧಾನ ಪರಿಷತ್ ಸದಸ್ಯ ಸುಶಿಲ್ ನಮೋಶಿ, ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಆಯುಕ್ತ ಆಕಾಶ್, ಜಿಂದಾಲ್ ಕಾರ್ಖಾನೆಯ ಅಧ್ಯಕ್ಷ ಮುರುಗನ್, ಜಿಲ್ಲಾ, ತಾಲ್ಲೂಕು ಮಟ್ಟದ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪಾಲ್ಗೋಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.