ಬಳ್ಳಾರಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ಆರಂಭಿಸಬೇಕಾಗಿ ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಮಾಡುತ್ತಿರುವ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಮಾದವ ರೆಡ್ಡಿ
ಬಳ್ಳಾರಿ: ‘ಬಳ್ಳಾರಿ ಜಿಲ್ಲೆಯಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಇದೆ. ಹೀಗಾಗಿ ಕೋಲ್ಡ್ ಸ್ಟೋರೇಜ್ ಜತೆಗೆ ಮಾರುಕಟ್ಟೆಯನ್ನೂ ನಿರ್ಮಾಣ ಮಾಡಲಾಗುವುದು’ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದ್ದಾರೆ.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಸಚಿವರು, ‘ಮಾರುಕಟ್ಟೆ ನಿರ್ಮಾಣಕ್ಕೆ ಎಪಿಎಂಸಿಯಿಂದ ₹5 ಕೋಟಿ ಅನುದಾನ ನೀಡಲಿದ್ದು, ಇತರ ಮೂಲಗಳಿಂದ ಅಗತ್ಯ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು. ಶಾಸಕ ನಾರಾ ಭರತ್ರೆಡ್ಡಿ ಅವರೂ ನೆರವಿನ ಭರವಸೆ ನೀಡಿದ್ದಾರೆ’ ಎಂದರು.
‘ಈಗ ಮಾರುಕಟ್ಟೆ ನಿರ್ಮಾಣಕ್ಕೆ ಗುರುತಿಸಿರುವ 23 ಎಕರೆ ಪ್ರದೇಶ ಸಾಲದು. ಭವಿಷ್ಯದ ದೃಷ್ಟಿಯಿಂದ ಕನಿಷ್ಟ 50 ಎಕರೆಯಲ್ಲಿ ನಿರ್ಮಾಣ ಮಾಡುವುದು. ಎಪಿಎಂಸಿ ಸಚಿವನಾಗಿ ಈ ಜಿಲ್ಲೆಯಲ್ಲಿ ಚಿಲ್ಲಿ ಮಾರುಕಟ್ಟೆಯನ್ನು ನಿರ್ಮಾಣ ಮಾಡುವೆ’ ಎಂದು ಹೇಳಿದರು.
ಕಳೆದ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಪೂರ್ವದಲ್ಲಿ ವಾರ್ಷಿಕ ಸುಮಾರು ₹600ರಿಂದ ₹680ಕೋಟಿ ಆದಾಯ ಇತ್ತು. ಕಾಯ್ದೆ ತಿದ್ದುಪಡಿ ನಂತರ ಆದಾಯ ₹180 ಕೋಟಿ ರೂ.ಗಳಿಗೆ ಕುಸಿಯಿತು. ನಮ್ಮ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಎಪಿಎಂಸಿ ಕಾಯ್ದೆಯನ್ನು ಮರು ಸ್ಥಾಪನೆ ಮಾಡಿದ ನಂತರ ಆದಾಯದಲ್ಲಿ ಏರಿಕೆಯಾಗಿದ್ದು, ಈ ವರ್ಷ ₹450 ಕೋಟಿ ಸಂಗ್ರಹವಾಗುವ ವಿಶ್ವಾಸ ಇದೆ. ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೂ ಅನುಕೂಲವಾಗಿದೆ ಎಂದರು.
ರಾಜ್ಯದಲ್ಲಿ ಎಪಿಎಂಸಿ ಸುಮಾರು ₹23 ಸಾವಿರ ಕೋಟಿ ಮೌಲ್ಯದ ಆಸ್ತಿ ಹೊಂದಿದೆ. ಈ ಆಸ್ತಿಯನ್ನು ಉಳಿಸಿಕೊಳ್ಳುವುದಷ್ಟೇ ಅಲ್ಲ. ಆರ್ಥಿಕವಾಗಿ ಮತ್ತಷ್ಟು ಬಲಶಾಲಿಯಾಗಿ ಮಾಡಬೇಕಿದೆ. ಲಾಭ ಮಾಡುವ ಉದ್ದೇಶ ಅಲ್ಲದಿದ್ದರೂ ಆರ್ಥಿಕವಾಗಿ ಸಬಲ ಇರುವಂತೆ ನೋಡಿಕೊಳ್ಳಬೇಕಿದೆ ಎಂದು ಹೇಳಿದರು.
ಬಳ್ಳಾರಿ ಜಿಲ್ಲೆಯಲ್ಲಿ ಅತ್ಯಧಿಕ ಕೋಲ್ಡ್ ಸ್ಟೋರೇಜ್ ಇವೆ. ಹಾಗಾಗಿ ಸರ್ಕಾರದಿಂದ ನಿರ್ಮಾಣ ಮಾಡುವುದು ಬೇಡ ಎಂದು ಕೆಲವರು ಸಲಹೆ ನೀಡಿದ್ದಾರೆ. ಆದರೆ ಖಾಸಗಿ ಕೋಲ್ಡ್ ಸ್ಫೋರೇಜ್ಗಳ ಮಾಲೀಕರು ರೈತರನ್ನು ಶೋಷಣೆ ಮಾಡುವ ಸಾಧ್ಯತೆ ಇರುತ್ತದೆ. ಸಹಕಾರಿ ತತ್ವ ಅಥವಾ ಸರ್ಕಾರದಿಂದ ನಿರ್ಮಾಣ ಮಾಡಿದರೆ ಸ್ಪರ್ಧಾತ್ಮಕ ಬೆಲೆಯನ್ನು ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ವಿಜಯಪುರದಲ್ಲಿ ಸಹಕಾರಿ ತತ್ವದ ಮೇಲೆ ಕೋಲ್ಡ್ ಸ್ಟೋರೇಜ್ ನಿರ್ಮಾಣ ಮಾಡಲಾಗಿದ್ದು, ಚನ್ನಾಗಿ ನಡೆಯುತ್ತಿದೆ ಎಂದರು.
ಶಾಸಕ ನಾರಾ ಭರತ್ರೆಡ್ಡಿ ಅವರು ಮಾತನಾಡಿ, ಚಿಲ್ಲಿ ಮಾರುಕಟ್ಟೆ ನಿರ್ಮಾಣಕ್ಕೆ ಎಪಿಎಂಸಿ ಸಚಿವ ಶಿವಾನಂದ ಪಾಟೀಲ ಅವರೊಂದಿಗೆ ಕೈ ಜೋಡಿಸಲಾಗುವುದು. ಸಂಸ್ಥೆಯ ಇತರ ಬೇಡಿಕೆಗಳ ಈಡೇರಿಕೆಗೂ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಬಳ್ಳಾರಿ ಮಾದರಿಯಲ್ಲಿ ರಾಜ್ಯದ ಎಲ್ಲ ಎಪಿಎಂಸಿಗಳಲ್ಲಿ ರೈತರಿಗೆ ಉಚಿತವಾಗಿ ಊಟ ವಸತಿ ಕಲ್ಪಿಸುವ ಯೋಜನೆ ಅನುಷ್ಠಾನಕ್ಕೆ ತರುವ ಪ್ರಯತ್ನ ಮಾಡಲಾಗುವುದು. ಈ ಉದ್ದೇಶಕ್ಕೆ ವಾಣಿಜ್ಯೋದ್ಯಮ ಸಂಸ್ಥೆಗಳ ಸಹಕಾರ ಪಡೆಯಲಾಗುವುದುಶಿವಾನಂದ ಪಾಟೀಲ, ಕೃಷಿ ಮಾರುಕಟ್ಟೆ ಸಚಿವ
ಬಳ್ಳಾರಿ ಎಪಿಎಂಸಿಯ ಅವ್ಯವಸ್ಥೆ ಇತ್ತೀಚಿನ ಉಪ ಲೋಕಾಯುಕ್ತಾ ಭೇಟಿ ವೇಳೆ ಬಯಲಾದ ಅಕ್ರಮದ ವಿಚಾರವಾಗಿ ಸಚಿವ ಶಿವಾನಂದ ಪಾಟೀಲ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಎಪಿಎಂಸಿ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಕೇಳಲಾದ ಪ್ರತಿ ದಾಖಲೆಯನ್ನು ತಂದು ಕೊಡುವುದಾಗಿಯೂ ಪರಿಶೀಲಿಸುವುದಾಗಿಯೂ ಹೇಳುತ್ತಿದ್ದ ಕಾರ್ಯದರ್ಶಿ ನಂಜುಂಡಸ್ವಾಮಿ ಅವರ ನಡೆಯನ್ನು ಟೀಕಿಸಿದರು. ಕೆಲಸ ಮಾಡಲಾಗದಿದ್ದರೆ ನಿವೃತ್ತಿ ಪಡೆಯುವಂತೆ ತಾಕೀತು ಮಾಡಿದರು.
ಈ ಬಾರಿ ಎಷ್ಟು ದವಸ ಧಾನ್ಯ ಅವಕವಾಗಿದೆ ಎಷ್ಟು ಸೆಸ್ ಸಂಗ್ರವಾಗಿದೆ ಎಂಬುದರ ಕುರಿತು ಮಾಹಿತಿ ಒದಗಿಸಿದ ಕಾರ್ಯದರ್ಶಿ ಮಾತಿಗೆ ಅಸಮಾಧಾನ ಗೊಂಡ ಸಚಿವ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಂದ ತನಿಖೆ ಮಾಡಿಸಲು ಆದೇಶಿಸಿದರು. ಹೆಚ್ಚು ದೂರುಗಳನ್ನು ಎದುರಿಸುತ್ತಿರುವ ಸಿಬ್ಬಂದಿ ಶರಣಬಸವ ಅವರ ಅಮಾನತಿಗೆ ಸೂಚಿಸಿದರು. ಕಮಿಷನ್ ಏಜೆಂಟರು ಮಳಿಗೆ ಬಾಡಿಗೆ ಪಡೆದಿರುವವರ ಮೇಲೆ ನಿಯಂತ್ರಣ ಸಾಧಿಸುವಂತೆಯೂ ಅವರು ಕಾರ್ಯದರ್ಶಿಗೆ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.