ಹೊಸಪೇಟೆ (ವಿಜಯನಗರ): ಇಲ್ಲಿನ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಂಗಳವಾರ ಉಚಿತವಾಗಿ ಟ್ಯಾಬ್ಲೆಟ್ ಪಿ.ಸಿ.ಗಳನ್ನು ವಿತರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರ ಆಪ್ತ ಸಹಾಯಕ ಧರ್ಮೇಂದ್ರ ಸಿಂಗ್ ಅವರು ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ವಿತರಿಸಿ, ‘ಆಧುನಿಕ ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಭವಿಷ್ಯವನ್ನು ಸುಂದರವಾಗಿ ಕಟ್ಟಿಕೊಳ್ಳಬಹುದು. ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸರ್ಕಾರ ಹಲವು ಬಗೆಯಲ್ಲಿ ನೆರವಾಗುತ್ತಿದೆ’ ಎಂದರು.
‘ಸರ್ಕಾರದ ಯೋಜನೆಯನ್ನು ಸಮರ್ಪಕವಾಗಿ ಸದುಪಯೋಗ ಪಡಿಸಿಕೊಂಡು ಉಜ್ವಲ ಬದುಕು ಕಟ್ಟಿಕೊಳ್ಳಬೇಕು. ಅದರ ಮೂಲಕ ಸತ್ಪ್ರಜೆಗಳಾಗಿ ಯುಜನತೆ ಬೆಳೆಯಬೇಕಾಗಿದೆ. ನಮ್ಮ ಸಂಸ್ಕೃತಿಯನ್ನು ಕಾಪಾಡುವ ಗುರುತರ ಹೊಣೆ ಇಂದಿನ ಯುವಜನಾಂಗದ್ದಾಗಿದೆ. ಯುವಜನಾಂಗ ಯಾರಿಗೂ ನಿರಾಸೆ ಮಾಡಬಾರದು’ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಬಿ.ಜಿ.ಕನಕೇಶಮೂರ್ತಿ, ‘ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಆನ್ಲೈನ್ ತರಗತಿಗಳು ಅನಿವಾರ್ಯ. ಕಾಲೇಜಿನ ಪ್ರಥಮ ವರ್ಷದ 862 ವಿದ್ಯಾರ್ಥಿಗಳಿಗೆ ಸರ್ಕಾರದ ಈ ಯೋಜನೆಯ ಈ ಸೌಲಭ್ಯದಿಂದ ತುಂಬಾ ಅನುಕೂಲವಾಗಿದೆ. ಖನಿಜ ನಿಧಿ ಅಡಿಯಲ್ಲಿ ಒದಗಿಸಿರುವ ಡಿಜಿಟಲ್ ತರಗತಿ ಕೊಠಡಿಗಳು, ಸ್ಮಾರ್ಟ್ ಕ್ಲಾಸ್ ರೂಂಗಳು, ಕಂಪ್ಯೂಟರ್ ಪ್ರಯೋಗಾಲಯ ಇವೆಲ್ಲವೂ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗೆ ಪೂರಕವಾಗಿವೆ’ ಎಂದು ತಿಳಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಜಯಂತಿ ಲಾಲ್ ಜೈನ್ ಪಿ., ಮಧುರ ಚನ್ನಶಾಸ್ತ್ರಿ, ಸಾಲಿ ಬಸವರಾಜ, ಪ್ರೊ.ಯು.ರಾಘವೇಂದ್ರ ರಾವ್, ರೇಖಾರಾಣಿ, ಪ್ರಾಧ್ಯಾಪಕರಾದ ಪಾಟೀಲ್ ನಟರಾಜ್, ಟಿ.ಎಚ್.ಬಸವರಾಜ್, ಡಿ.ಎಂ.ಮಲ್ಲಿಕಾರ್ಜುನಯ್ಯ, ದೈಹಿಕ ಶಿಕ್ಷಣ ನಿರ್ದೇಶಕ ಮಂಜುನಾಥ ಆರೆಂಟನೂರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.