ADVERTISEMENT

ಸದೃಢ ಆರೋಗ್ಯಕ್ಕೆ ಉತ್ತಮ ಜೀವನ ಶೈಲಿ ಮುಖ್ಯ

ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2025, 6:12 IST
Last Updated 18 ನವೆಂಬರ್ 2025, 6:12 IST
ವಿಶ್ವ ಮಧುಮೇಹ ದಿನ ಅಂಗವಾಗಿ ಮಧುಮೇಹ ಮತ್ತು ಯೋಗಕ್ಷೇಮ ಎಂಬ ಘೋಷವಾಕ್ಯದಡಿ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜನಜಾಗೃತಿ ವಾಕಥಾನ್‌ಗೆ ಪಾಲಿಕೆ ಆಯುಕ್ತ ಮಂಜುನಾಥ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಮೇಶ್‌ ಬಾಬು ಮತ್ತಿತರರು ಚಾಲನೆ ನೀಡಿದರು. 
ವಿಶ್ವ ಮಧುಮೇಹ ದಿನ ಅಂಗವಾಗಿ ಮಧುಮೇಹ ಮತ್ತು ಯೋಗಕ್ಷೇಮ ಎಂಬ ಘೋಷವಾಕ್ಯದಡಿ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜನಜಾಗೃತಿ ವಾಕಥಾನ್‌ಗೆ ಪಾಲಿಕೆ ಆಯುಕ್ತ ಮಂಜುನಾಥ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಮೇಶ್‌ ಬಾಬು ಮತ್ತಿತರರು ಚಾಲನೆ ನೀಡಿದರು.    

ಬಳ್ಳಾರಿ: ‘ನಿಯಮಿತವಾಗಿ ದೇಹ ದಂಡನೆ, ಪೌಷ್ಠಿಕ ಆಹಾರ ಸೇವನೆ ಮೂಲಕ ಜೀವನ ಶೈಲಿ ಬದಲಾಯಿಸಿಕೊಳ್ಳಬೇಕು’ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ಹೇಳಿದರು.

ವಿಶ್ವ ಮಧುಮೇಹ ದಿನ ಅಂಗವಾಗಿ ಮಧುಮೇಹ ಮತ್ತು ಯೋಗಕ್ಷೇಮ ಎಂಬ ಘೋಷವಾಕ್ಯದಡಿ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜನಜಾಗೃತಿ ವಾಕಥಾನ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಮಧುಮೇಹ ಎನ್ನುವ ಅನಿಯಂತ್ರಿತ ಖಾಯಿಲೆ ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರಿಗೂ ಬರುತ್ತದೆ. ಮಧುಮೇಹ ಬಂದ ಬಳಿಕ ಚಿಕಿತ್ಸೆ ಪಡೆಯುವುದಕ್ಕಿಂತ, ಕಾಯಿಲೆ ಬರುವುದಕ್ಕೆ ಮೊದಲೇ ನಿಯಂತ್ರಣ ಮಾಡುವುದು ಉತ್ತಮ’ ಎಂದು ಅವರು ಹೇಳಿದರು. 

ADVERTISEMENT

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು  ಮಾತನಾಡಿ, ‘ರಾಜ್ಯ ಸರ್ಕಾರವು ಗೃಹ-ಆರೋಗ್ಯ ಯೋಜನೆ ರೂಪಿಸಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆ ಮನೆಗೆ ತೆರಳಿ ಜನರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಿ, ಸೂಕ್ತ ಚಿಕಿತ್ಸೆ ನೀಡಿ, ಉಚಿತವಾಗಿ ಔಷದೋಪಚಾರ ಮಾಡಲಾಗುತ್ತದೆ. ದಿನನಿತ್ಯ ಪೌಷ್ಠಿಕ ಆಹಾರ ಸೇವನೆಯ ಬಗ್ಗೆ ಕಾಳಜಿ ವಹಿಸಬೇಕು’ ಎಂದು ತಿಳಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ‘ಪ್ರಪಂಚದಾದ್ಯಂತ ಮಧುಮೇಹ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಪ್ರತಿ ಐದು ಜನರಲ್ಲಿ ಒಬ್ಬರಿಗೆ ಮಧುಮೇಹ ಕಂಡುಬರುತ್ತದೆ. ದಿನನಿತ್ಯ ನಾವು ಬದುಕುವ ಜೀವನದಲ್ಲಿ ಮಧುಮೇಹದ ಬಗ್ಗೆ ಜಾಗೃತಿ ಹೊಂದುವುದು ಅತೀ ಅವಶ್ಯಕವಾಗಿದೆ’ ಎಂದು ಹೇಳಿದರು.

ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್ ಕೆ.ಜಿ, ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಬಳ್ಳಾರಿ ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಶಾಂತಮ್ಮ ಸೇರಿದಂತೆ ವೈದ್ಯಾಧಿಕಾರಿಗಳು, ಸಿಬ್ಬಂದಿ ಹಾಗೂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.