ಹೊಸಪೇಟೆ: ಇಲ್ಲಿನ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಬಿಡಿಸಿಸಿ) ನಿರ್ದೇಶಕರಾಗಿ ಅರಣ್ಯ ಸಚಿವ ಆನಂದ್ ಸಿಂಗ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಆನಂದ್ ಸಿಂಗ್ ಅವರು ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ಹಾಗೂ ಇತರೆ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳ ಕ್ಷೇತ್ರದ ಮೂಲಕ ಚುನಾವಣೆಗೆ ಸ್ಪರ್ಧಿಸಿದ್ದರು.
‘ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಡಿ. 31 ಕೊನೆಯ ದಿನವಾಗಿತ್ತು. ಜ. 1ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗಿದ್ದು, ಆನಂದ್ ಸಿಂಗ್ ಅವರ ನಾಮಪತ್ರ ಕ್ರಮಬದ್ಧವಾಗಿದೆ. ಇವರನ್ನು ಹೊರತುಪಡಿಸಿ ಬೇರೆ ಯಾರೊಬ್ಬರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜ. 8ರಂದು ಮತದಾನ ನಡೆಸುವ ಅಗತ್ಯ ಇರುವುದಿಲ್ಲ’ ಎಂದು ತಹಶೀಲ್ದಾರ್ ಎಚ್. ವಿಶ್ವನಾಥ್ ಭಾನುವಾರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ನವೆಂಬರ್ನಲ್ಲಿ ಆನಂದ್ ಸಿಂಗ್ ಅವರು ಹೊಸಪೇಟೆ ತಾಲ್ಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಮೂಲಕ ಸಹಕಾರ ರಂಗಕ್ಕೆ ಕಾಲಿರಿಸಿದ್ದರು. ಈಗ ಅವರ ದೃಷ್ಟಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಗಾದಿಯ ಮೇಲೆ ನೆಟ್ಟಿದೆ. ಬರುವ ದಿನಗಳಲ್ಲಿ ಡಿಸಿಸಿ ಬ್ಯಾಂಕ್ ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದ್ದಾರೆ ಎಂಬ ಗುಸುಗುಸು ಚರ್ಚೆ ಸಹಕಾರ ಕ್ಷೇತ್ರದಲ್ಲಿ ನಡೆಯುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.