ಕೊಟ್ಟೂರು: ಪಟ್ಟಣದಲ್ಲಿ ಇತ್ತೀಚಿಗೆ ನಕಲಿ ಪತ್ರಕರ್ತರ ಹಾವಳಿ ಮಿತಿ ಮೀರಿದ್ದು, ಅವರನ್ನು ಕೂಡಲೇ ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಕಾರ್ಯನಿರತ ಪತ್ರಕರ್ತ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಜಿ.ಕೆ. ಅಮರೀಶ್ ಮತ್ತು ಪಿಎಸ್ಐ ಗೀತಾಂಜಲಿ ಶಿಂಧೆ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ದೇವರಮನಿ ಸುರೇಶ್, ‘ನಕಲಿ ಪತ್ರಕರ್ತರು ಸರ್ಕಾರಿ ಇಲಾಖಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಇದರಿಂದ ನೈಜ ಪತ್ರಕರ್ತರ ಗೌರವಕ್ಕೆ ಧಕ್ಕೆಯಾಗುತ್ತಿದೆ’ ಎಂದರು.
‘ವಾರ್ತೆ ಮತ್ತು ಪ್ರಚಾರ ಇಲಾಖೆಯಲ್ಲಿ ನೋಂದಣಿಯಾಗದ ಪತ್ರಿಕೆಯ ಪತ್ರಕರ್ತರನ್ನು ಪರಿಶೀಲಿಸಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಅನಧಿಕೃತವಾಗಿ ವಾಹನಗಳ ಮೇಲೆ ಪ್ರೆಸ್ ಎಂದು ನಮೂದಿಸಿ ಓಡಾಡುತ್ತಿರುವುದು ಕಂಡು ಬಂದಿದ್ದು, ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು’ ಎಂದು ಮನವಿ ಮಾಡಿದರು.
ಸಂಘದ ಪದಾಧಿಕಾರಿಗಳಾದ ಉಜ್ಜಿನಿ ರುದ್ರಪ್ಪ, ಜಿ.ಸೋಮಶೇಖರ, ಎಸ್.ಎಂ.ಗುರುಪ್ರಸಾದ್, ಬದ್ದಿ ಮಂಜುನಾಥ್, ಎಚ್.ನಾಗರಾಜ್, ಚಿಗಟೇರಿ ಕೊಟ್ರೇಶ್, ಬಂದಾತರ ಪ್ರಕಾಶ, ರವಿಕುಮಾರ, ಹ್ಯಾಳ್ಯಾ ಕೊಟ್ರೇಶ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.