ಹೊಸಪೇಟೆ: ‘ಹಂಪಿ ಕನ್ನಡ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಐದು ಗ್ರಾಮಗಳನ್ನು ದತ್ತು ತೆಗೆದುಕೊಂಡು ಯೋಗ, ಸಾಹಿತ್ಯ, ಕಲೆ, ಕ್ರೀಡೆ, ಆರೋಗ್ಯ, ಶಿಕ್ಷಣ ಹಾಗೂ ಇನ್ನಿತರ ಚಟುವಟಿಕೆಗಳ ಮೂಲಕ ಅಲ್ಲಿನವರನ್ನು ಜಾಗೃತರಾಗಿಸುವ ಕಾರ್ಯಕ್ರಮ ರೂಪಿಸಲಾಗುತ್ತಿದೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸ.ಚಿ. ರಮೇಶ ತಿಳಿಸಿದರು.
ಬುಧವಾರ ವಿಶ್ವವಿದ್ಯಾಲಯದಲ್ಲಿ ನಡೆದ ಗ್ರಾಮ ದತ್ತು ಯೋಜನೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಈ ಯೋಜನೆಯ ಮೂಲಕ ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ, ತರಬೇತಿ ನೀಡಿ ಅವರನ್ನು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಗೌರವಿಸುವ ಕೆಲಸ ಮಾಡಲಾಗುವುದು’ ಎಂದರು.
’ನಮ್ಮಲ್ಲಿ ಆಧುನಿಕ ಹಾಗೂ ಸಾಂಪ್ರದಾಯಿಕ ಕೃಷಿ ಪದ್ಧತಿ ರೂಢಿಯಲ್ಲಿದೆ. ಇಂತಹ ಪದ್ಧತಿಗಳನ್ನು ವೈಜ್ಞಾನಿಕ ವಿಧಾನಗಳ ಮೂಲಕ ಸಂಪನ್ಮೂಲ ವ್ಯಕ್ತಿಗಳಿಂದ ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯವು ದತ್ತು ಪಡೆದ ಗ್ರಾಮಗಳ ಜನರಿಗೆ ಅರಿವು ಮೂಡಿಸಲಿದೆ’ ಎಂದು ತಿಳಿಸಿದರು.
ಕುಲಸಚಿವ ಎ. ಸುಬ್ಬಣ್ಣ ರೈ, ಲಲಿತಕಲೆಗಳ ನಿಕಾಯದ ಡೀನರಾದ ಕೆ. ರವೀಂದ್ರನಾಥ, ಯೋಗ ಅಧ್ಯಯನ ಕೇಂದ್ರ ನಿರ್ದೇಶಕ ಎಫ್.ಟಿ. ಹಳ್ಳಿಕೇರಿ, ಸಂಗೀತ ಮತ್ತು ನೃತ್ಯ ವಿಭಾಗದ ಮುಖ್ಯಸ್ಥ ಗೋವಿಂದ, ಗ್ರಾಮ ದತ್ತು ಯೋಜನೆಯ ಸದಸ್ಯ ಸಂಚಾಲಕ ಅಮರೇಶ ಯತಗಲ್, ಪಾಪಿನಾಯಕನಹಳ್ಳಿ, ಇಂಗಳಗಿ, ಮಲಪನಗುಡಿ, ಕಡ್ಡಿರಾಂಪುರ, ಸೀತಾರಾಮ ತಾಂಡಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಸ್ಥಳೀಯ ಶಾಲೆಯ ಮುಖ್ಯಶಿಕ್ಷಕರು, ಎಸ್.ಡಿ.ಎಂ.ಸಿ. ಅಧ್ಯಕ್ಷರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.