ADVERTISEMENT

ಅಯೋಧ್ಯೆಯಲ್ಲಿ ಮಂದಿರ ಶಿಲಾನ್ಯಾಸ: ಹಂಪಿಯಲ್ಲಿ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2020, 9:08 IST
Last Updated 5 ಆಗಸ್ಟ್ 2020, 9:08 IST
ಹಂಪಿಗೆ ಹೊಂದಿಕೊಂಡಿರುವ ಅಂಜನಾದ್ರಿ ಬೆಟ್ಟದ ಮೇಲೆ ನಡೆಯುತ್ತಿರುವ ಶ್ರೀರಾಮನ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಭಕ್ತರು
ಹಂಪಿಗೆ ಹೊಂದಿಕೊಂಡಿರುವ ಅಂಜನಾದ್ರಿ ಬೆಟ್ಟದ ಮೇಲೆ ನಡೆಯುತ್ತಿರುವ ಶ್ರೀರಾಮನ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಭಕ್ತರು   
""

ಹೊಸಪೇಟೆ: ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮ ಮಂದಿರದ ಶಿಲಾನ್ಯಾಸದ ಪ್ರಯುಕ್ತ ರಾಮನ ಭಕ್ತರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಬುಧವಾರ ಇಲ್ಲಿನ ಹಂಪಿಯಲ್ಲಿ ಹಮ್ಮಿಕೊಂಡಿರುವ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನ, ಕೋದಂಡರಾಮ ದೇವಸ್ಥಾನ, ಉದ್ದಾನ ವೀರಭದ್ರೇಶ್ವರ ದೇವಸ್ಥಾನ, ಚಕ್ರತೀರ್ಥದ ರಾಮ–ಲಕ್ಷ್ಮಣ ದೇವಸ್ಥಾನ, ಹಂಪಿಗೆ ಹೊಂದಿಕೊಂಡಿರುವ ಅಂಜನಾದ್ರಿ ಬೆಟ್ಟದಲ್ಲಿ ಹೋಮ, ಹವನ, ಪೂಜೆ ಹಾಗೂ ವಿಶೇಷ ಪ್ರಾರ್ಥನೆಗಳು ಜರುಗುತ್ತಿವೆ.

ಸ್ಥಳೀಯರು ಸೇರಿದಂತೆ ಅನ್ಯ ಜಿಲ್ಲೆಯವರು ಪೂಜೆಯಲ್ಲಿ ಪಾಲ್ಗೊಂಡಿದ್ದರು. ವಿಶ್ವ ಹಿಂದೂ ಪರಿಷತ್‌, ಬಜರಂಗ ದಳ, ಶ್ರೀರಾಮ ಸೇನೆ ಕಾರ್ಯಕರ್ತರೂ ಇದ್ದಾರೆ. ಜಿಲ್ಲಾ ಬಿಜೆಪಿಯಿಂದ ನಗರದ ಎಲ್ಲ ವಾರ್ಡ್‌ಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಬೂತ್‌ ಮಟ್ಟದ ಕಾರ್ಯಕರ್ತರು ಭಾಗವಹಿಸಿದ್ದಾರೆ.

ADVERTISEMENT

ರಾಮಾಯಣದಲ್ಲಿ ಹಂಪಿಯ ಕಿಷ್ಕಿಂದೆ, ಅಂಜನಾದ್ರಿ ಬೆಟ್ಟ, ಪಂಪಾ ಸರೋವರ, ರಘುನಾಥ ಮಾಲ್ಯವಂತ ಪರ್ವತ, ಸುಗ್ರೀವ ಗುಹೆ, ಸೀತೆಯ ಸೆರಗು, ಋಷಿಮುಖ ಪರ್ವತದ ಉಲ್ಲೇಖವಿದೆ. ರಾಮ–ಲಕ್ಷ್ಮಣ ಓಡಾಡಿದ ಪವಿತ್ರ ಜಾಗ ಎನ್ನುವುದು ಭಕ್ತರ ನಂಬಿಕೆ. ಈ ಸ್ಥಳಗಳನ್ನು ಕಣ್ತುಂಬಿಕೊಳ್ಳುವುದಕ್ಕಾಗಿಯೇ ನಿತ್ಯವೂ ವಿವಿಧ ಕಡೆಗಳಿಂದ ನೂರಾರು ಜನ ಬಂದು ಹೋಗುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.