ADVERTISEMENT

ಬಳ್ಳಾರಿ | ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆಗೆ ವೇಗ ನೀಡಿ: ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2025, 7:35 IST
Last Updated 1 ಅಕ್ಟೋಬರ್ 2025, 7:35 IST
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರೀಶೀಲನೆ ವೇಳೆ ಅಧಿಕಾರಿಗಳೊಂದಿಗೆ ಚರ್ಚಿಸುತ್ತಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌ ಕೆ. ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮದ್‌ ಝುಬೇರ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮದ್‌ ಹ್ಯಾರಿಸ್‌ ಸುಮೇರ್‌ ಇದ್ದರು. 
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರೀಶೀಲನೆ ವೇಳೆ ಅಧಿಕಾರಿಗಳೊಂದಿಗೆ ಚರ್ಚಿಸುತ್ತಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌ ಕೆ. ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮದ್‌ ಝುಬೇರ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮದ್‌ ಹ್ಯಾರಿಸ್‌ ಸುಮೇರ್‌ ಇದ್ದರು.    

ಬಳ್ಳಾರಿ: ‘ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಜಿಲ್ಲೆಯಲ್ಲಿ ಗುರುತಿಸಲಾದ 3.85 ಲಕ್ಷ ಮನೆಗಳ ಪೈಕಿ 1.45 ಲಕ್ಷ ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಈವರೆಗೆ ಶೇ.38 ರಷ್ಟು ಪ್ರಗತಿಯಾಗಿದ್ದು, ರಾಜ್ಯದ ಕ್ರಮಾಂಕದಲ್ಲಿ 15 ನೇ ಸ್ಥಾನದಲ್ಲಿದ್ದೇವೆ. ಸಮೀಕ್ಷೆಗೆ ಇನ್ನೂ ವೇಗ ನೀಡಬೇಕು’ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ನಿರ್ದೇಶನ ನೀಡಿದ್ದಾರೆ. 

ಸಮೀಕ್ಷೆಯ ನೋಡಲ್ ಅಧಿಕಾರಿಗಳೊಂದಿಗೆ ಪ್ರಗತಿ ಸಭೆ ನಡೆಸಿ ಅವರು ಮಾತನಾಡಿದರು. ‘ ಸಮೀಕ್ಷೆ ಆರಂಭಗೊಂಡು 8 ದಿನಗಳಾಗಿವೆ. ಇನ್ನುಳಿದ ದಿನಗಳಲ್ಲಿ ನಿಗದಿತ ಗುರಿ ತಲುಪಲು ಮತ್ತು ಜಿಲ್ಲೆಯನ್ನು ರಾಜ್ಯದಲ್ಲಿಯೇ ಮುಂಚೂಣಿಯಲ್ಲಿರಸಲು ಸೂಕ್ತ ತಾಂತ್ರಿಕ ಯೋಜನೆ ರೂಪಿಸಿ ಗಣತಿದಾರರಿಗೆ ಸೂಕ್ತ ಮಾರ್ಗದರ್ಶನ ಮಾಡಬೇಕು’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಸಂಡೂರು ಮತ್ತು ಬಳ್ಳಾರಿ ತಾಲ್ಲೂಕುಗಳಿಂದ ನಿರೀಕ್ಷಿತ ಫಲಿತಾಂಶ ಲಭಿಸುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ ಅವರು, ಅಧಿಕಾರಿಗಳು ಜೊತೆಗೂಡಿ ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು’ ಎಂದು ತಿಳಿಸಿದರು.

ADVERTISEMENT

ಸಂಡೂರು ಭಾಗದಲ್ಲಿ 79 ಸಾವಿರ ಮನೆಗಳ ಪೈಕಿ ತೋರಣಗಲ್ಲು ಮತ್ತು ವಡ್ಡು ಗ್ರಾಮಗಳ ತಲಾ 10 ಸಾವಿರ ಮನೆಗಳಿದ್ದು, ಅದರಲ್ಲಿ ತೋರಣಗಲ್ಲಿನಲ್ಲಿ ಜಿಂದಾಲ್ ವ್ಯಾಪ್ತಿಯಲ್ಲಿ 6 ಟೌನ್ ಶಿಪ್‌ಗಳಿವೆ. ಇಲ್ಲಿ ಸಮೀಕ್ಷಾ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದೆ. ಹಾಗಾಗಿ ಟೌನ್ ಶಿಪ್ ಗಳಲ್ಲಿ ಶಿಬಿರ (ಕ್ಯಾಂಪ್) ಆಯೋಜಿಸುವ ಮೂಲಕ ಮನೆಗಳನ್ನು ಸಮೀಕ್ಷಾ ಕಾರ್ಯಕ್ಕೆ ಒಳಪಡುವಂತೆ ತಿಳಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊಹಮದ್‌ ಹ್ಯಾರೀಸ್ ಸುಮೈರ್ ಮಾತನಾಡಿ, ಸಂಡೂರಿನ ತೋರಣಗಲ್ಲು ಮತ್ತು ವಡ್ಡು ಗ್ರಾಮಗಳಲ್ಲಿ ಹೊರ ರಾಜ್ಯದಿಂದ ಬಂದು ಒಂದು ಮನೆಯಲ್ಲಿ 10 ಕ್ಕೂ ಹೆಚ್ಚು ಜನ ವಾಸವಿರುತ್ತಾರೆ. ಅಲ್ಲಿ ಒಬ್ಬರ ಆಧಾರ್ ಕಾರ್ಡ್ ಮಾಹಿತಿ ಪಡೆದುಕೊಂಡು ಗಣತಿ ನಡೆಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಆಸ್ಪದ ನೀಡುವಂತಿಲ್ಲ ಎಂದು ಸಂಡೂರು ತಾಲ್ಲೂಕು ತಹಶೀಲ್ದಾರರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ, ‘ಬಳ್ಳಾರಿ ಮಹಾನಗರ ವ್ಯಾಪ್ತಿಯಲ್ಲಿ ಪ್ರತಿ ಎರಡು ವಾರ್ಡ್ ಗಳಿಗೆ ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿಯನ್ನು ಸಮೀಕ್ಷಾ ಕಾರ್ಯದ ಮೇಲ್ವಿಚಾರಣೆಗಾಗಿ ನೋಡೆಲ್ ಅಧಿಕಾರಿಯನ್ನಾಗಿ ನೇಮಿಸಿದೆ. ಆದರೂ ಪ್ರಗತಿ ಕಾಣುತ್ತಿಲ್ಲ. ಅಧಿಕಾರಿಗಳು ನಿಲ್ಯಕ್ಷ ತೋರದೇ ಕಾಳಜಿ ವಹಿಸಿ ಕೆಲಸ ಮಾಡಬೇಕು. ಸ್ಪಂದಿಸದಿರುವ ಸೂಪರ್ ವೈಸರ್ ಗಳ ಮಾಹಿತಿ ನೀಡಬೇಕು’ ಎಂದು ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮದ್‌ ಎನ್.ಝುಬೇರ್, ಸಹಾಯಕ ಆಯುಕ್ತ ಪಿ.ಪ್ರಮೋದ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಡಿಎಂಎಫ್ ವಿಶೇಷಾಧಿಕಾರಿ ಲೋಕೇಶ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಮತ್ತಿತರರು ಇದ್ದರು. 

ಅಮಾನತಿಗೆ ಶಿಫಾರಸು ಮಾಡಿ 
ಸಭೆಯಲ್ಲಿ ಮಾತನಾಡಿದ ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ‘ನಗರ ವ್ಯಾಪ್ತಿಯಲ್ಲಿ ಒಟ್ಟು 171 ಗಣತಿದಾರರಿದ್ದು ಅದರಲ್ಲಿ ಕೇವಲ 36 ಗಣತಿದಾರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಉಳಿದವರು ಸ್ಪಂದಿಸುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು ಅಂತಹವರನ್ನು ಗುರುತಿಸಿ ಅಮಾನತ್ತಿಗೆ ಶಿಫಾರಸ್ಸು ಮಾಡಬೇಕು. ಇನ್ನಿತರೆ ಸಿಬ್ಬಂದಿ ಇದಲ್ಲಿ ಅವರನ್ನು ನಿಯೋಜನೆ ಮಾಡಿಕೊಳ್ಳಬೇಕು. ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯವರೊಂದಿಗೆ ಸಮನ್ವತೆ ಸಾಧಿಸಬೇಕು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.