ಬಳ್ಳಾರಿ: ‘ಗ್ಯಾರಂಟಿ ಯೋಜನೆಗಳು ಜನರ ಮನ್ನಣೆಗೆ ಪಾತ್ರವಾಗಿವೆ. ಬಳ್ಳಾರಿ ಜಿಲ್ಲೆಯಲ್ಲಿ ಉತ್ತಮವಾಗಿ ಅನುಷ್ಠಾನಗೊಂಡಿದೆ’ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯ ಒಟ್ಟು 54.49 ಲಕ್ಷ ಫಲಾನುಭವಿಗಳಿಗೆ ಸಹಾಯಧನ ನೆರವು ತಲುಪಿದೆ. ನೋಂದಾಯಿಸಿಕೊಂಡ ಫಲಾನುಭವಿಗಳಿಗೆ ಹಣ ಪಾವತಿಯಾಗದ ಬಗ್ಗೆ ದೂರುಗಳಿವೆ. ಅವರಿಗೆ ಸೂಕ್ತ ಮಾಹಿತಿ ನೀಡಲು ಹಾಗೂ ಇತ್ಯರ್ಥಕ್ಕೆ ಗ್ರಾ.ಪಂ ವ್ಯಾಪ್ತಿಯಲ್ಲಿ ವಿಶೇಷ ಶಿಬಿರ ಆಯೋಜಿಸಬೇಕು ಎಂದು ತಾಪಂ ಇ.ಒ.ಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯ ಒಟ್ಟು 1.81 ಕೋಟಿ ಪಡಿತರ ಚೀಟಿಗಳಿಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿ, ಜೋಳ ವಿತರಿಸಲಾಗಿದೆ ಎಂದು ಆಹಾರ ಇಲಾಖೆಯ ಉಪನಿರ್ದೇಶರು ಸಭೆಗೆ ತಿಳಿಸಿದರು.
ಜಿಲ್ಲೆಯಲ್ಲಿ ಕಾಳಸಂತೆಯಲ್ಲಿ ಪಡಿತರ ಅಕ್ಕಿ ಸಾಗಣೆ ಮಾಡುವವರು ಕಂಡುಬಂದರೆ ಎಫ್ಐಆರ್ ದಾಖಲಿಸಬೇಕು ಎಂದು ಚಿದಾನಂದಪ್ಪ ಸೂಚಿಸಿದರು.
ಗೃಹಜ್ಯೋತಿ ಯೋಜನೆಯು ಶೇ.95 ಪ್ರಗತಿಯಾಗಿದೆ ಎಂದು ಜೆಸ್ಕಾಂ ಅಧಿಕಾರಿಗಳು ಸಭೆಗೆ ತಿಳಿಸಿದರು.
ಯುವ ನಿಧಿ ಯೋಜನೆ ಮೂಲಕ 8,647 ಅರ್ಹ ಅಭ್ಯರ್ಥಿಗಳಿಗೆ ₹16.72 ಕೋಟಿ ಹಣಕಾಸು ನೆರವು ತಲುಪಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಹಟ್ಟಪ್ಪ ತಿಳಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ‘ಉದ್ಯೋಗ ಮೇಳಗಳಲ್ಲಿ ‘ಯುವ ನಿಧಿ’ ಯೋಜನೆ ಕುರಿತು ಹೆಚ್ಚು ಪ್ರಚಾರ ನೀಡಬೇಕು’ ಎಂದು ಸೂಚನೆ ನೀಡಿದರು.
ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸಲಾಗಿದೆ. ಯೋಜನೆ ಜಾರಿಯಾದಾಗಿನಿಂದ ಇಲ್ಲಿಯವರೆಗೆ ₹207.20 ಕೋಟಿ ವೆಚ್ಚವಾಗಿದೆ ಎಂದು ಕೆಕೆಆರ್ಟಿಸಿ ಬಳ್ಳಾರಿ ವಿಭಾಗದ ಅಧಿಕಾರಿಗಳು ಸಭೆಗೆ ತಿಳಿಸಿದರು.
ಇದಕ್ಕೆ ಜಿಪಂ ಸಿಇಒ, ‘ಬಳ್ಳಾರಿ ಜಿಲ್ಲೆಯು ಗಡಿಭಾಗವಾಗಿರುವುದರಿಂದ ಸಾಕಷ್ಟು ಮಹಿಳಾ ಪ್ರಯಾಣಿಕರು ಸಂಚರಿಸುತ್ತಾರೆ. ಈ ಸಂದರ್ಭದಲ್ಲಿ ಪೂರಕ ದಾಖಲೆ ಪರಿಶೀಲಿಸಿ ಟಿಕೆಟ್ ನೀಡಬೇಕು. ನಿಗಮಕ್ಕೂ ಒಳ್ಳೆಯ ಆದಾಯ ಬರುತ್ತಿರುವುದರಿಂದ ಹೊಸ ಬಸ್ಗಳ ಖರೀದಿಗೆ ಯೋಜನೆ ರೂಪಿಸಬೇಕು’ ಎಂದು ತಿಳಿಸಿದರು.
ಕುರುಗೋಡು ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇರುವುದನ್ನು ತಾಲ್ಲೂಕು ಅಧ್ಯಕ್ಷರು ಸಭೆಯ ಗಮನಕ್ಕೆ ತಂದರು. ಕೂಡಲೇ ಪರಿಶೀಲಿಸುವಂತೆ ಜಿ.ಪಂ ಸಿಇಒ ಅಧಿಕಾರಿಗಳಿಗೆ ತಿಳಿಸಿದರು.
ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಮಾತನಾಡಿ, ‘ಗ್ಯಾರೆಂಟಿ ಅನುಷ್ಠಾನದ ಕುರಿತು ತಾ.ಪಂ ಮಟ್ಟದಲ್ಲಿಯೂ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು ಎಂದು ಸರ್ಕಾರದ ನಿರ್ದೇಶನವಿದೆ. ತಾಲ್ಲೂಕು ಅಧ್ಯಕ್ಷರ ನೇತೃತ್ವದಲ್ಲಿ ಎಲ್ಲಾ ತಾಲ್ಲೂಕಿನಲ್ಲಿ 3-4 ಗ್ರಾಮ ಪಂಚಾಯಿತಿ ಫಲಾನುಭವಿಗಳ ಸಮಸ್ಯೆ ಕುರಿತು ಗ್ರಾಮ ಸಭೆ ಅಥವಾ ಇನ್ನಿತರೆ ಪೂರಕ ಸಭೆ ಜರುಗಿಸಲು ಸೂಕ್ತ ಕಾರ್ಯಯೋಜನೆ ರೂಪಿಸಬೇಕು. ತಾಲ್ಲೂಕು ಸಮಿತಿ ರಚಿಸಬೇಕು’ ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ಜಿಲ್ಲಾ, ತಾಲೂಕು ಪದಾಧಿಕಾರಿಗಳು ಸಭೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.