ADVERTISEMENT

ತಿಮ್ಮಲಾಪುರದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 13:45 IST
Last Updated 15 ಫೆಬ್ರುವರಿ 2021, 13:45 IST

ವಿಜಯನಗರ (ಹೊಸಪೇಟೆ): ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್‌ ಮಾಲಪಾಟಿ ಅವರು ಫೆ. 20ರಂದು ತಾಲ್ಲೂಕಿನ ತಿಮ್ಮಲಾಪುರದಲ್ಲಿ ಗ್ರಾಮ ವಾಸ್ತವ್ಯ ಮಾಡುವರು.

‘ಅಂದು ಸ್ಥಳದಲ್ಲಿಯೇ ಸಾರ್ವಜನಿಕರ ಮನವಿ ಸ್ವೀಕರಿಸಿ ಬಗೆಹರಿಯುವುದಿದ್ದರೆ ಅಲ್ಲಿಯೇ ಬಗೆಹರಿಸುವರು. ಸೂಕ್ತ ಸಲಹೆ ನೀಡುವರು. ಸಾರ್ವಜನಿಕರ ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ತಿಳಿಸಿದರು.

ಈ ಸಂಬಂಧ ಸೋಮವಾರ ನಗರದ ತಾಲ್ಲೂಕು ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿದ ಅವರು, ‘ಫೆ.19ರಂದು ಗ್ರಾಮದಲ್ಲಿ ಸಾರ್ವಜನಿಕರಿಂದ ಮನವಿ ಸಂಗ್ರಹಿಸಿ ಸಂಬಂಧಪಟ್ಟ ಆಯಾ ಇಲಾಖೆಗಳಿಗೆ ಕಳಿಸಬೇಕು’ ಎಂದು ಸೂಚಿಸಿದರು.

ADVERTISEMENT

‘65 ವರ್ಷ ಮೇಲಿನ ಹಿರಿಯ ನಾಗರಿಕರು, ಅಂಗವಿಕಲರು, ನಿರ್ಗತಿಕರು, ವಿಧವೆಯರನ್ನು ಗುರುತಿಸಿ ಪಿಂಚಣಿ ಸೌಲಭ್ಯ ಪಡೆಯದೇ ಇರುವವರ ವಿವರಗಳನ್ನು ಪಡೆದು ದಾಖಲೆಗಳನ್ನು ಸಂಗ್ರಹಿಸಿ, ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಜಿಲ್ಲಾಧಿಕಾರಿಗಳು ಆದೇಶ ನೀಡಲಿದ್ದಾರೆ’ ಎಂದರು.

‘ಗ್ರಾಮದಲ್ಲಿ ಸರ್ಕಾರಿ ಜಮೀನು ಹಾಗೂ ಸಾರ್ವಜನಿಕ ಉದ್ದೇಶಗಳಿಗೆ ಕಾಯ್ದಿರಿಸಲಾಗಿರುವ ಜಮೀನಿಗಳು ಆಕ್ರಮವಾಗಿ ಒತ್ತುವರಿಯಾಗಿದ್ದಲ್ಲಿ ಅಂತಹ ಜಮೀನು ಗುರುತಿಸಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ದಿನನಿತ್ಯದ ನೀರಿನ ತೊಂದರೆ ಬಗ್ಗೆ ಪರಿಸ್ಥಿತಿಯನ್ನು ಅವಲೋಕಿಸಿ ಸಮಸ್ಯೆ ಇದ್ದಲ್ಲಿ ಟ್ಯಾಂಕರ್ ಮೂಲಕ ಅಥವಾ ಖಾಸಗಿ ಬೋರವೆಲ್‍ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದರು ತಿಳಿಸಿದರು.

ತಹಶೀಲ್ದಾರ್‌ ಎಚ್.ವಿಶ್ವನಾಥ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ್, ಮರಿಯಮ್ಮನಹಳ್ಳಿಯ ಕಂದಾಯ ಇನ್‌ಸ್ಪೆಕ್ಟರ್‌ ಅಂದಾನಗೌಡ, ತಿಮ್ಮಲಾಪುರ ಗ್ರಾಮ ಲೆಕ್ಕಿಗ ರಾಕೇಶ್, ಚಿಲಕನಹಟ್ಟಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುಳಾಬಾಯಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.