ಬಳ್ಳಾರಿ: ಕೋಮುದ್ವೇಷ ಹರಡಿ, ಧರ್ಮಗಳ ಮಧ್ಯೆ ಒಡಕು ಮೂಡಿಸುವ ಬಿಜೆಪಿಯನ್ನು ಮಹಿಳಾ ಮತದಾರರು ಮತ್ತು ಜನಸಾಮಾನ್ಯರು ತಿರಸ್ಕರಿಸಬೇಕು ಎಂದುಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ರಾಜ್ಯ ಘಟಕದ ಉಪಾಧ್ಯಕ್ಷೆ ಕೆ.ಎಸ್.ವಿಮಲ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಬಿಜೆಪಿಯನ್ನು ಸೋಲಿಸಬಲ್ಲ ಸಮರ್ಥ ಅಭ್ಯರ್ಥಿಗೆ ಮತ ಹಾಕಿ. ಕೋಮು ಶಕ್ತಿಯನ್ನು ಅಧಿಕಾರದಿಂದ ದೂರ ಇಡಿ ಎಂದು ಮನವಿ ಮಾಡಿದರು.
ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಶಾಸನಸಭೆಗಳಲ್ಲಿ ಶೇ 33ರಷ್ಟು ಮಹಿಳಾ ಮೀಸಲಾತಿ ಮಸೂದೆಯನ್ನು ಯಾವುದೇ ಸರ್ಕಾರ ಜಾರಿಗೆ ತರಲು ಪ್ರಯತ್ನಿಸಲಿಲ್ಲ. ಬಿಜೆಪಿ ಬಹುಮತ ಪಡೆದ ಪಕ್ಷವಾದರೂ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಲಿಲ್ಲ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರ 68 ಬೇಡಿಕೆಗಳ ಪಟ್ಟಿಯನ್ನು ರಾಜಕೀಯ ಪಕ್ಷಗಳಿಗೆ ನೀಡಿದ್ದು, ಪ್ರಣಾಳಿಕೆಯಲ್ಲಿ ಸೇರಿಸುವಂತೆ ಒತ್ತಾಯಿಸಲಾಗಿದೆ ಎಂದರು.
ಅಭಿವೃದ್ಧಿಯನ್ನು ಮಾನದಂಡವಾಗಿ ಇಟ್ಟುಕೊಂಡು ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಸರ್ಕಾರವು ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸಲಿಲ್ಲ. ಮೇಲ್ವರ್ಗದವರಿಗೆ ಶೇ 10 ಮೀಸಲಾತಿ ನೀಡುವ ಮಸೂದೆಗೆ ಸುಲಭವಾಗಿ ಅಂಗೀಕಾರ ನೀಡಿತು. ಪುರುಷ ಪ್ರಧಾನ ಪಾಳೆಗಾರಿಕೆಯಲ್ಲಿ ಮಹಿಳಾ ಮೀಸಲಾತಿ ಒಪ್ಪಿಕೊಳ್ಳದ ಸ್ಥಿತಿ ಬಂದಿದೆ ಎಂದು ದೂರಿದರು.
ಸಂಘಟನೆಯಜಿಲ್ಲಾ ಘಟಕದ ಅಧ್ಯಕ್ಷೆ ಚಂದ್ರಕುಮಾರಿ, ಸದಸ್ಯರಾದ ಪ್ರಭಾವತಿ, ಜಾನಕಿ, ಭಾಗ್ಯ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.