ಹೊಸಪೇಟೆ: 'ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ ಜ. 24ರಂದು ನಗರದ ಪ್ರಿಯದರ್ಶಿನಿ ಪ್ರೈಡ್ ಹೋಟೆಲ್ ನಲ್ಲಿ ಹಮ್ಮಿಕೊಳ್ಳಾಗಿದೆ' ಎಂದು ಮಹಿಳಾ ಮೋರ್ಚಾ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷೆ ಕವಿತಾ ಈಶ್ವರ್ ಸಿಂಗ್ ತಿಳಿಸಿದರು.
ಅಂದು ಬೆಳಿಗ್ಗೆ 10.30ಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆ ಡಿ. ಪುರಂದೇಶ್ವರಿ ಕಾರ್ಯಕ್ರಮ ಉದ್ಘಾಟಿಸುವರು. ಕಾರ್ಯಕ್ರಮಕ್ಕೂ ಮುನ್ನ ನಗರದ ಅಮರಾವತಿ ಅತಿಥಿ ಗೃಹದಿಂದ ಸಮಾರಂಭ ನಡೆಯುವ ಸ್ಥಳದವರೆಗೆ ಮಹಿಳಾ ಕಾರ್ಯಕರ್ತೆಯರಿಂದ ಬೈಕ್ ರ್ಯಾಲಿ ನಡೆಯಲಿದೆ ಎಂದು ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಜೀ,ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ಮಹಿಳಾ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷೆ ಗೀತಾ ವಿವೇಕಾನಂದ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಶಶಿಕಲಾ ಜೊಲ್ಲೆ, ಪ್ರವಾಸೋದ್ಯಮ ಖಾತೆ ಸಚಿವ ಆನಂದ್ ಸಿಂಗ್, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳೆ, ಸಂಸದ ವೈ.ದೇವೇಂದ್ರಪ್ಪ ಸೇರಿದಂತೆ ಕಾರ್ಯಕಾರಿಣಿಯ 81 ಜನ ಸದಸ್ಯರು ಪಾಲ್ಗೊಳ್ಳುವರು ಎಂದು ವಿವರಿಸಿದರು.
ಪಕ್ಷದ ಸಂಘಟನೆ, ಮಹಿಳೆಯರ ಪರ ಹೆಚ್ಚಿನ ಕಾರ್ಯಕ್ರಮ ರೂಪಿಸಿ ಅವರನ್ನು ಪಕ್ಷದತ್ತ ಆಕರ್ಷಿಸುವುದು, ಸುಕನ್ಯಾ ಸಮೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಪಕ್ಷ ಕೊಟ್ಟಿರುವ ಕೆಲಸ ಸೇರಿದಂತೆ ಇತರೆ ವಿಚಾರಗಳ ಕುರಿತು ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆಯಲಿದೆ. ಕಾರ್ಯಕ್ರಮದ ಹಿಂದಿನ ದಿನ (ಜ.23) ಪಕ್ಷದ ಬೈಠಕ್ ಕೂಡ ನಡೆಯಲಿದೆ. ಈಗಾಗಲೇ ಇಡೀ ನಗರವನ್ನು ಪಕ್ಷದ ಧ್ವಜಗಳ ಮೂಲಕ ಕೇಸರಿಮಯಗೊಳಿಸಲಾಗಿದೆ' ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ, ಮಂಡಲ ಅಧ್ಯಕ್ಷ ಬಸವರಾಜ ನಾಲತ್ವಾಡ, ಪ್ರಧಾನ ಕಾರ್ಯದರ್ಶಿಗಳಾದ ಮೇಟಿ ಶಂಕರ್, ಜೀವರತ್ನಂ, ಮಾಧ್ಯಮ ಉಸ್ತುವಾರಿ ನಾಗರಾಜ, ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ವಿಜಯಲಕ್ಷ್ಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ. ಸುಗುಣಾ, ಮಂಡಲ ಅಧ್ಯಕ್ಷೆ ಭಾರತಿ ಪಾಟೀಲ, ಜ್ಯೋತಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.