ADVERTISEMENT

ಸರ್ಕಾರಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2020, 9:32 IST
Last Updated 4 ಜೂನ್ 2020, 9:32 IST

ಹೊಸಪೇಟೆ: 18 ತಿಂಗಳ ತುಟ್ಟಿಭತ್ಯೆ ಸ್ಥಗಿತಗೊಳಿಸಿರುವ ಆದೇಶ ಕೂಡಲೇ ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದವರು ಗುರುವಾರ ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಂತರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಸಲ್ಲಿಸಿದರು. ಇದಕ್ಕೂ ಮುನ್ನ ನೌಕರರು ಕಪ್ಪು ಪಟ್ಟಿ ಧರಿಸಿಕೊಂಡು ಕೆಲಸ ನಿರ್ವಹಿಸಿದರು. ಬಳಿಕ ತಾಲ್ಲೂಕು ಕಚೇರಿ ಎದುರು ಸಮಾವೇಶಗೊಂಡರು.

ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದುಪಡಿಸಿದ ಆದೇಶ ಹಿಂಪಡೆಯಬೇಕು. ವಿವಿಧ ಇಲಾಖೆಗಳ ಹುದ್ದೆ ಕಡಿತ ಪ್ರಸ್ತಾವ ಕೈಬಿಡಬೇಕು. ಸಚಿವಾಲಯದಲ್ಲಿನ 542 ಕಿರಿಯ ಸಹಾಯಕರ ಹುದ್ದೆ ಕಡಿತಗೊಳಿಸುವ ಪ್ರಸ್ತಾವ ಕೈಬಿಡಬೇಕು. ಕೊರೊನಾ ಬಿಕ್ಕಟ್ಟಿನಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ನೌಕರರಿಗೆ ಸುರಕ್ಷತಾ ಪರಿಕರ, ವಿಶೇಷ ಭತ್ಯೆ ನೀಡಬೇಕು. ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು. ಕಾರ್ಮಿಕ ವಿರೋಧಿ ನೀತಿ ಕೈಬಿಡಬೇಕು. ಮಂಜೂರಾಗಿ ಖಾಲಿ ಇರುವ 2.5 ಲಕ್ಷ ಕಾಯಂ ಹುದ್ದೆ ಭರ್ತಿ ಮಾಡಬೇಕು ಎನ್ನುವುದು ಪ್ರಮುಖ ಬೇಡಿಕೆಗಳಾಗಿವೆ.

ADVERTISEMENT

ಒಕ್ಕೂಟದ ಅಧ್ಯಕ್ಷ ನಾಗರಾಜ ಪತ್ತಾರ, ಮುಖಂಡರಾದ ತಾಯಪ್ಪ ನಾಯಕ, ಮರಡಿ ಜಂಬಯ್ಯ ನಾಯಕ, ಉಮೇಶ, ಧರ್ಮನಗೌಡ ಸೇರಿದಂತೆ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.