ADVERTISEMENT

ಜನರನ್ನು ಸಂಕಷ್ಟಕ್ಕೆ ತಳ್ಳಿದ ಬಿಜೆಪಿ: ಮೊಹಮ್ಮದ್‌ ಇಮಾಮ್‌ ನಿಯಾಜಿ

ತೈಲ ದರ ಏರಿಕೆ ವಿರೋಧಿಸಿ 7ರಂದು ಬೈಸಿಕಲ್‌ ಜಾಥಾ

​ಪ್ರಜಾವಾಣಿ ವಾರ್ತೆ
Published 5 ಜುಲೈ 2021, 12:10 IST
Last Updated 5 ಜುಲೈ 2021, 12:10 IST
ಹೊಸಪೇಟೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮೊಹಮ್ಮದ್‌ ಇಮಾಮ್‌ ನಿಯಾಜಿ ಮಾತನಾಡಿದರು
ಹೊಸಪೇಟೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮೊಹಮ್ಮದ್‌ ಇಮಾಮ್‌ ನಿಯಾಜಿ ಮಾತನಾಡಿದರು   

ಹೊಸಪೇಟೆ (ವಿಜಯನಗರ): ‘ಪೆಟ್ರೋಲ್‌, ಡೀಸೆಲ್‌, ಅಡುಗೆ ಎಣ್ಣೆ ಸೇರಿದಂತೆ ಇತರೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿ ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ಜನರನ್ನು ಸಂಕಷ್ಟಕ್ಕೆ ತಳ್ಳಿದ್ದು, ಸರ್ಕಾರದ ಜನವಿರೋಧಿ ಧೋರಣೆ ಖಂಡಿಸಿ ಬುಧವಾರ (ಜು.7) ನಗರದಲ್ಲಿ ಬೈಸಿಕಲ್‌ ಜಾಥಾ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ಇಮಾಮ್‌ ನಿಯಾಜಿ ತಿಳಿಸಿದರು.

ನಗರದಲ್ಲಿ ಸೋಮವಾರ ನಡೆದ ಬ್ಲಾಕ್‌ ಕಾಂಗ್ರೆಸ್‌ ಸಭೆಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 10.30ಕ್ಕೆ ನಗರದ ಸಾಯಿಬಾಬಾ ವೃತ್ತದಿಂದ ಆರಂಭಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಲಾಗುವುದು. ಶಾಸಕರಾದ ಪಿ.ಟಿ. ಪರಮೇಶ್ವರ ನಾಯ್ಕ, ಜೆ.ಎನ್‌. ಗಣೇಶ್‌, ಭೀಮಾ ನಾಯ್ಕ, ಯು.ಟಿ. ಖಾದರ್‌, ವಿಧಾನ ಪರಿಷತ್‌ ಸದಸ್ಯ ವಿಜಯ್‌ ಸಿಂಗ್‌, ಕಾಂಗ್ರೆಸ್‌ ಮುಖಂಡ ಸಂತೋಷ್‌ ಲಾಡ್‌, ಕಾಂಗ್ರೆಸ್‌ ಪದಾಧಿಕಾರಿಗಳು ಪಾಲ್ಗೊಳ್ಳುವರು’ ಎಂದು ಹೇಳಿದರು.

‘ಕೋವಿಡ್‌ ಸಂಕಷ್ಟದ ಪರಿಸ್ಥಿತಿಯಲ್ಲಿ ಅಡುಗೆ ಎಣ್ಣೆ, ತೈಲ ದರ ಏರಿಸಿರುವುದರಿಂದ ಎಲ್ಲ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ. ಜನಸಾಮಾನ್ಯರು ಬದುಕಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಕೊರೊನಾಕ್ಕಿಂತಲೂ ಬೆಲೆ ಹೆಚ್ಚಳದಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಆದರೆ, ರಾಜ್ಯ, ಕೇಂದ್ರ ಸರ್ಕಾರ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ’ ಎಂದು ಆರೋಪಿಸಿದರು.

ADVERTISEMENT

ಸಭೆಯಲ್ಲಿ ಮುಖಂಡರಾದ ಗುಜ್ಜಲ್ ನಾಗರಾಜ್, ಕೆ.ಎಂ. ಹಾಲಪ್ಪ, ಸಿದ್ದನಗೌಡ, ವೆಂಕಟರಮಣ, ರಾಮನಗೌಡ, ಚಿದಾನಂದಪ್ಪ, ಗುಜ್ಜಲ್ ರಘು, ನಿಂಬಗಲ್ ರಾಮಕೃಷ್ಣ, ವಿಜಯಕುಮಾರ್, ವೆಂಕೋಬಣ್ಣ, ಕಮಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಸೋಮಪ್ಪ, ಎಲ್. ತೇಜಾ ನಾಯ್ಕ, ಡಿ. ಕುಬೇರ್, ಕೆ. ಗೌಸ್, ತಿಮ್ಮಪ್ಪ ಯಾದವ್, ಅಣ್ಣಾಮಲೈ, ನನ್ನೆಮ್ಮ, ಮುನ್ನಿ ಕಾಸಿಂ, ಆಲಂ ಬಾಷಾ, ಜಾವೀದ್ ನವಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.