ಹೊಸಪೇಟೆ: ‘ದೇಶದ ಸಂವಿಧಾನವು ಎಲ್ಲರಿಗೂ ಸಮಾನ ಅವಕಾಶಗಳನ್ನು ಕೊಟ್ಟಿದೆ. ಅತಿ ಬಡ ಕುಟುಂಬದಲ್ಲಿ ಜನಿಸಿದ ಎ.ಪಿ.ಜೆ. ಅಬ್ದುಲ್ ಕಲಾಂ ಅವರು ರಾಷ್ಟ್ರಪತಿಯಾಗಲು ಸಾಧ್ಯವಾಗಿರುವುದೇ ಅದಕ್ಕೆ ಸಾಕ್ಷಿ’ ಎಂದು ರಾಜ್ಯ ಕಾನೂನು ವಿಶ್ವವಿದ್ಯಾಲಯದ ಡೀನ್ ಚಿದಾನಂದ ಎಸ್. ಪಾಟೀಲ ತಿಳಿಸಿದರು.
ಗಣರಾಜ್ಯೋತ್ಸವದ ಅಂಗವಾಗಿ ತಾಲ್ಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಸಂವಿಧಾನ ಪರಿಕಲ್ಪನೆ’ ಕುರಿತು ಉಪನ್ಯಾಸ ನೀಡಿದರು.
’ನಮ್ಮ ಸಂವಿಧಾನವು ಬರೀ ಅಧಿಕಾರವನ್ನು ನಿಯಂತ್ರಿಸದೆ ದೇಶವನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಂಡು ಹೋಗುತ್ತಿದೆ. ಭಾರತ ಸಂವಿಧಾನ ಪಾಶ್ಚಾತ್ಯ ದೇಶಗಳ ಸಂವಿಧಾನಕ್ಕಿಂತ ಶ್ರೇಷ್ಠ ಹಾಗೂ ಭಿನ್ನವಾದದ್ದು. ದೇಶದ ಪ್ರಜೆಗಳಿಗೆ ಸಂಪೂರ್ಣವಾದ ಸ್ವಾತಂತ್ರ್ಯವನ್ನು ಕಲ್ಪಿಸಿದೆ. ಆದರೆ, ರಾಷ್ಟ್ರಕ್ಕೆ ಧಕ್ಕೆ ಬಂದ ಸಂದರ್ಭದಲ್ಲಿ ಮಾತ್ರ ಅದನ್ನು ನಿರ್ಬಂಧಿಸುವ ಕೆಲಸ ಮಾಡುತ್ತದೆ’ ಎಂದು ಹೇಳಿದರು.
‘ಪಾಶ್ಚಾತ್ಯ ದೇಶಗಳ ಸಂವಿಧಾನದ ಪ್ರಮುಖ ಗುರಿ ಅಧಿಕಾರವನ್ನು ನಿಯಂತ್ರಿಸುವುದಾಗಿದೆ. ಆದರೆ, ಭಾರತದ ಸಂವಿಧಾನ ಪರಿಸ್ಥಿತಿಗೆ ಅನುಗುಣವಾಗಿ ತಿದ್ದುಪಡಿ ಮಾಡಿ ದೇಶದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತಿದೆ’ ಎಂದರು.
ಕುಲಪತಿ ಪ್ರೊ. ಮಲ್ಲಿಕಾ ಎಸ್. ಘಂಟಿ ಮಾತನಾಡಿ, ‘ಯುವಜನತೆ ಅಜ್ಞಾನ, ಮೌಢ್ಯಕ್ಕೆ ಬಲಿಯಾಗುತ್ತಿದ್ದಾರೆ. ಅದರಿಂದ ದೂರ ಉಳಿದು ಸಂವಿಧಾನದಿಂದ ಮನದ ಜ್ಯೋತಿ ಬೆಳಗಿಸಿಕೊಳ್ಳಬೇಕು’ ಎಂದು ತಿಳಿಸಿದರು.
ಕುಲಸಚಿವ ಅಶೋಕಕುಮಾರ ರಂಜೇರೆ, ಉಪಕುಲಸಚಿವ ಎ. ವೆಂಕಟೇಶ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ವೆಂಕಟಗಿರಿ ದಳವಾಯಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.