
ಬಳ್ಳಾರಿ: ನಗರದ ಮುಂಡ್ರಿಗಿ ಕೈಗಾರಿಕಾ ಪ್ರದೇಶದಲ್ಲಿರುವ ‘ದೀಪ್ತಿ ಕಾಟನ್ ಮಿಲ್’ನಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು, ಭಾರಿ ಪ್ರಮಾಣದ ಹತ್ತಿ ದಾಸ್ತಾನು ನಾಶವಾಗಿದೆ.
ವೆಂಕಟೇಶ್ ಎಂಬುವವರ ಮಾಲೀಕತ್ವದ ಮಿಲ್ನಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಬಂದು ಬೆಂಕಿ ಆರಿಸುವ ಕಾರ್ಯ ಆರಂಭಿಸಿತು. ಸಂಜೆ ಹೊತ್ತಿಗೆ ಬೆಂಕಿ ನಿಯಂತ್ರಣಕ್ಕೆ ಬಂದಿತು ಎಂದು ಅಗ್ನಿ ಶಾಮಕ ದಳದ ಸಿಬ್ಬಂದಿ ತಿಳಿಸಿದರು.
ಘಟನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. ಆದರೆ, ತನಿಖೆ ಬಳಿಕವೇ ನಿಖರವಾದ ಕಾರಣ ತಿಳಿದು ಬರಲಿದೆ. ಅಗ್ನಿ ಅವಘಡದಿಂದ ಆಗಿರುವ ನಷ್ಟದ ಮೌಲ್ಯಮಾಪನ ಇನ್ನೂ ಆಗಿಲ್ಲ ಎಂದು ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿ ತಿಳಿಸಿದರು.
ಅಗ್ನಿ ಆಕಸ್ಮಿಕದಲ್ಲಿ ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.