ADVERTISEMENT

ಬಳ್ಳಾರಿ: ಚುನಾವಣೆಗೆ ಸಿದ್ಧ, ಮತದಾನಕ್ಕೆ ಕ್ಷಣಗಣನೆ

ವಿಜಯನಗರ ಕ್ಷೇತ್ರದಲ್ಲಿ 238 ಮತಗಟ್ಟೆ; 1,480 ಸಿಬ್ಬಂದಿ ನಿಯೋಜನೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2018, 12:20 IST
Last Updated 2 ನವೆಂಬರ್ 2018, 12:20 IST
ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವವರು ಶುಕ್ರವಾರ ಹೊಸಪೇಟೆಯ ಲಿಟ್ಲ್‌ ಫ್ಲವರ್‌ ಶಾಲೆಯಿಂದ ಮತಯಂತ್ರಗಳೊಂದಿಗೆ ಮತಗಟ್ಟೆಗಳಿಗೆ ತೆರಳಿದರು–ಪ್ರಜಾವಾಣಿ ಚಿತ್ರ
ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವವರು ಶುಕ್ರವಾರ ಹೊಸಪೇಟೆಯ ಲಿಟ್ಲ್‌ ಫ್ಲವರ್‌ ಶಾಲೆಯಿಂದ ಮತಯಂತ್ರಗಳೊಂದಿಗೆ ಮತಗಟ್ಟೆಗಳಿಗೆ ತೆರಳಿದರು–ಪ್ರಜಾವಾಣಿ ಚಿತ್ರ   

ಹೊಸಪೇಟೆ: ಶನಿವಾರ ನಡೆಯಲಿರುವ ಬಳ್ಳಾರಿ ಲೋಕಸಭೆ ಉಪಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

ಚುನಾವಣಾ ಆಯೋಗವು ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಕಳೆದ ಸಲದಂತೆ ಈ ಸಲವೂ ಪಿಂಕ್‌ ಮತಗಟ್ಟೆಗಳನ್ನು ನಿರ್ಮಿಸಲಾಗಿದೆ. ಅಂಗವಿಕಲರಿಗೆ ಗಾಲಿ ಕುರ್ಚಿಗಳ ವ್ಯವಸ್ಥೆ ಮಾಡಲಾಗಿದೆ.

ಶುಕ್ರವಾರ ಇಲ್ಲಿನ ಲಿಟ್ಲ್‌ ಫ್ಲವರ್‌ ಶಾಲೆಯಿಂದ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿ ಎಲೆಕ್ಟ್ರಾನಿಕ್‌ ಮತಯಂತ್ರಗಳೊಂದಿಗೆ ಮತಗಟ್ಟೆಗಳತ್ತ ಹೆಜ್ಜೆ ಹಾಕಿದರು.

ADVERTISEMENT

ವಿಜಯನಗರ ಕ್ಷೇತ್ರದಲ್ಲಿ 238 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 1,480 ಜನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಒಂದು ವಾರದಿಂದ ಸಿಬ್ಬಂದಿಗೆ ತರಬೇತಿ ನೀಡಿದ ಚುನಾವಣಾ ಆಯೋಗದ ಅಧಿಕಾರಿಗಳು, ಶುಕ್ರವಾರ ವಿ.ವಿ. ಪ್ಯಾಟ್‌, ಶಾಯಿ, ದಾರ, ಗುಂಡುಪಿನ್‌ಗಳನ್ನು ನೀಡಿದರು. ಒಂದು ಮತಗಟ್ಟೆಗೆ ಅಧಿಕಾರಿ ಸೇರಿದಂತೆ ಐದು ಜನ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಭದ್ರತೆಗೆ ಪೊಲೀಸರು ಹಾಗೂ ಸಿ.ಆರ್‌.ಪಿ.ಎಫ್‌. ಯೋಧರನ್ನು ನೇಮಿಸಲಾಗಿದೆ. ಮತಗಟ್ಟೆ ಹಾಗೂ ಭದ್ರತಾ ಸಿಬ್ಬಂದಿ ಬಸ್ಸುಗಳಲ್ಲಿ ಮತಗಟ್ಟೆಗಳಿಗೆ ತೆರಳಿದರು.

‘ಸಿಬ್ಬಂದಿಯನ್ನು ಮತಗಟ್ಟೆಗಳಿಗೆ ಕರೆದೊಯ್ಯಲು ಸಾರಿಗೆ ಸಂಸ್ಥೆ ಹಾಗೂ ಖಾಸಗಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಮತಗಟ್ಟೆಗಳ ಮೇಲೆ 21 ಸೆಕ್ಟರ್‌ ಅಧಿಕಾರಿಗಳು ನಿಗಾ ವಹಿಸುವರು. ಶಾಂತಿ ಹಾಗೂ ಸುವ್ಯವಸ್ಥೆಯಿಂದ ಚುನಾವಣೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ತಾಲ್ಲೂಕಿನ ಕಮಲಾಪುರದಲ್ಲಿ ಆರು ಅತಿ ಸೂಕ್ಷ್ಮ ಮತಗಟ್ಟೆಗಳಿವೆ. ಜನ ಮನೆಯಲ್ಲಿ ಕೂರದೆ ಮತಗಟ್ಟೆಗಳಿಗೆ ಬಂದು ಹಕ್ಕು ಚಲಾಯಿಸಬೇಕು’ ಎಂದು ಉಪವಿಭಾಗಾಧಿಕಾರಿ ಪಿ.ಎನ್‌. ಲೋಕೇಶ್‌ ಮನವಿ ಮಾಡಿದರು.

ತಹಶೀಲ್ದಾರ್‌ ಬಿ.ವಿ. ಗಿರೀಶ್‌ಬಾಬು, ಉಪ ತಹಶೀಲ್ದಾರ್‌ ರಮೇಶ್‌ ನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.