ಬಳ್ಳಾರಿ: ‘ಈ ಸಾಲಿನ ಬೆಳೆ ಸಮೀಕ್ಷೆ ಆರಂಭಗೊಂಡಿದ್ದು, ಸಮೀಕ್ಷೆಯು ಸರಿಯಾದ ಕ್ರಮದಲ್ಲಿ ಆಗಬೇಕು. ಸಮೀಕ್ಷೆ ಮಾಡುವವರಿಗೆ ಸೂಕ್ತ ತರಬೇತಿ ನೀಡಬೇಕು’ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅಧಿಕಾರಿಗಳಿಗೆ ಸೂಚಿಸಿದರು.
ಬೆಳೆ ಕಟಾವು ಪ್ರಯೋಗಗಳ ಪ್ರಗತಿ ಪರಿಶೀಲನೆ, ಜನನ-ಮರಣ ನಾಗರಿಕ ನೋಂದಣಿ ಪದ್ಧತಿ, ಬೆಳೆ ಕ್ಷೇತ್ರ ಮರು ಹೊಂದಾಣಿಕೆ ಹಾಗೂ ಇತರೆ ವಿಷಯಗಳ ಕುರಿತು ಅವರು ಮಂಗಳವಾರ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ನಡೆಸಿದರು.
‘ಈ ಸಾಲಿನಲ್ಲಿ ಜಿಲ್ಲೆಯಲ್ಲಿ ಈವರೆಗೆ ಶೇ 84ರಷ್ಟು ಬಿತ್ತನೆಯಾಗಿದೆ. ಮುಂಗಾರು ಹಂಗಾಮಿನ ಬೆಳೆವಾರು ಸಮೀಕ್ಷೆ ಮಾಡಲು ಐದು ತಾಲ್ಲೂಕುಗಳಿಗೆ ಕೃಷಿ, ತೋಟಗಾರಿಕೆ, ಕಂದಾಯ ಮತ್ತು ಆರ್ಡಿಪಿಆರ್ ಇಲಾಖೆಗಳಿಂದ 1760 ಜನಮೂಲ ಕಾರ್ಯಕರ್ತರನ್ನು ಹಂಚಿಕೆ ಮಾಡಲಾಗಿದೆ. ಇಲ್ಲಿಯವರೆಗೆ 1704 ಪ್ರಯೋಗ ನಡೆದಿವೆ. ಮುಖ್ಯವಾಗಿ ಬೆಳೆ ಸಮೀಕ್ಷೆಯಲ್ಲಿ ಫಾರಂ-1 ಕಡ್ಡಾಯವಾಗಿ ಭರ್ತಿ ಮಾಡಬೇಕು’ ಎಂದು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಕೃಷಿ ಜಂಟಿ ನಿರ್ದೇಶಕ ಸೋಮಸುಂದರ್, ತೋಟಗಾರಿಕೆ, ಮಹಾನಗರ ಪಾಲಿಕೆ, ಡಿಡಿಎಲ್ಆರ್ ಅಧಿಕಾರಿಗಳು ಸೇರಿದಂತೆ ಎಲ್ಲಾ ತಾಲ್ಲೂಕಿನ ತಹಶೀಲ್ದಾರು ಮತ್ತು ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
‘ಜನನ– ಮರಣ ನೋಂದಣಿ ಆಗಲಿ’
ಜಿಲ್ಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯು ಯಾವುದೇ ಕಾರಣಕ್ಕೂ ವಿಳಂಬವಾಗದೇ ನಿಗದಿತ ಸಮಯದಲ್ಲಿ ಜರುಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎನ್.ಕೆ.ಪತ್ರಿಬಸಪ್ಪ ಮಾತನಾಡಿ 2025ರ ಜನವರಿಯಿಂದ ಜುಲೈ ವರೆಗೆ ಗಂಡು-8817 ಹೆಣ್ಣು-8281 ಸೇರಿ ಒಟ್ಟು 17098 ನೋಂದಣಿಯಾಗಿವೆ. 2025ರ ಜನವರಿಯಿಂದ ಜುಲೈ ವರೆಗೆ ಗಂಡು-4667 ಹೆಣ್ಣು-3213 ಮತ್ತು ಲಿಂಗತ್ವ ಅಲ್ಪಸಂಖ್ಯಾತರು-3 ಸೇರಿದಂತೆ ಒಟ್ಟು 7883 ಮರಣ ನೋಂದಣಿಯಾಗಿವೆ ಎಂದು ಸಭೆಗೆ ತಿಳಿಸಿದರು.
ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ-ಸಂಸ್ಥೆಗಳಲ್ಲಿ ಜನನ ಮತ್ತು ಮರಣಕ್ಕೆ ಸಂಬಂಧಿಸಿದಂತೆ ಒಟ್ಟು 3388 ಪ್ರಕರಣಗಳು ನೋಂದಣಿಗೆ ಬಾಕಿ ಇದ್ದು ಖಾಸಗಿ ಆರೋಗ್ಯ ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.