ಕಮಲಾಪುರ (ಹೊಸಪೇಟೆ/ವಿಜಯನಗರ): ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಸಂಜೆ ನಡೆದ 30ನೇ ‘ನುಡಿಹಬ್ಬ’ದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ನಾಲ್ವರಿಗೆ ಡಿ.ಲಿಟ್ ಪದವಿ ಪ್ರದಾನ ಮಾಡಿದರು.
ಚಿತ್ರದುರ್ಗ ಶಿವಮೂರ್ತಿ ಮುರುಘಾ ಶರಣರು, ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ, ಕೆಂಪೇಗೌಡ ಅಧ್ಯಯನ ಕೇಂದ್ರದ ಮುಖ್ಯಸ್ಥ ಬಿ.ಎಸ್. ಪುಟ್ಟಸ್ವಾಮಿ ಹಾಗೂ ಪರಿಸರ ಹೋರಾಟಗಾರ ಕಲ್ಕುಳಿ ವಿಠ್ಠಲ ಹೆಗಡೆ ಅವರಿಗೆ ಪದವಿ ಪ್ರದಾನ ಮಾಡಿ ಗೌರವಿಸಿದರು.
ಮುರುಘಾ ಶರಣರು ‘ವಚನ ಸಂಸ್ಕೃತಿಯ ಸಮುದಾಯ, ತತ್ವ ಮತ್ತು ಸಮಕಾಲೀನ ಸಂದರ್ಭ’, ಪದ್ಮರಾಜ ದಂಡಾವತಿ ಅವರು ‘ಮುದ್ರಣ ಮಾಧ್ಯಮ; ಸಮಕಾಲೀನ ವಿದ್ಯಮಾನಗಳು’, ಕಲ್ಕುಳಿ ವಿಠಲ್ ಹೆಗ್ಗಡೆ ಅವರು ‘ಮಳೆನಾಡು ಅಧ್ಯಯನ’ ಮತ್ತು ಬಿ.ಎಸ್. ಪುಟ್ಟಸ್ವಾಮಿ ಅವರು ‘ಹಳೇ ಮೈಸೂರಿನ ಒಕ್ಕಲಿಗರ ಸ್ಥಿತ್ಯಂತರಗಳು’ ಕುರಿತು ಪ್ರಬಂಧ ಮಂಡಿಸಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು 1387 ವಿದ್ಯಾರ್ಥಿಗಳಿಗೆ ಪಿಎಚ್.ಡಿ. ಸೇರಿದಂತೆ ವಿವಿಧ ಪದವಿ ಪ್ರದಾನ ಮಾಡಿದರು. ಕುಲಪತಿ ಪ್ರೊ.ಸ.ಚಿ. ರಮೇಶ, ಕುಲಸಚಿವ ಪ್ರೊ.ಎ. ಸುಬ್ಬಣ್ಣ ರೈ, ವಿವಿಧ ನಿಕಾಯಗಳ ಡೀನ್, ಸಿಂಡಿಕೇಟ್ ಸದಸ್ಯರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.