ADVERTISEMENT

ವಿಜಯನಗರ ಜಿಲ್ಲೆಗೆ ಆಗ್ರಹಿಸಿ ಪಂಜಿನ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2019, 14:26 IST
Last Updated 27 ಸೆಪ್ಟೆಂಬರ್ 2019, 14:26 IST
ವಿಜಯನಗರ ಜಿಲ್ಲಾ ಹೋರಾಟ ಸಮಿತಿ ಕಾರ್ಯಕರ್ತರು ಶುಕ್ರವಾರ ಸಂಜೆ ಹೊಸಪೇಟೆಯಲ್ಲಿ ಪಂಜಿನ ಮೆರವಣಿಗೆ ನಡೆಸಿದರು–ಪ್ರಜಾವಾಣಿ ಚಿತ್ರ
ವಿಜಯನಗರ ಜಿಲ್ಲಾ ಹೋರಾಟ ಸಮಿತಿ ಕಾರ್ಯಕರ್ತರು ಶುಕ್ರವಾರ ಸಂಜೆ ಹೊಸಪೇಟೆಯಲ್ಲಿ ಪಂಜಿನ ಮೆರವಣಿಗೆ ನಡೆಸಿದರು–ಪ್ರಜಾವಾಣಿ ಚಿತ್ರ   

ಹೊಸಪೇಟೆ: ಹೊಸಪೇಟೆ ಜಿಲ್ಲಾ ಕೇಂದ್ರವಾಗಿಟ್ಟುಕೊಂಡು ನೂತನ ವಿಜಯನಗರ ಜಿಲ್ಲೆ ರಚಿಸಬೇಕೆಂದು ಆಗ್ರಹಿಸಿ ವಿಜಯನಗರ ಜಿಲ್ಲಾ ಹೋರಾಟ ಸಮಿತಿಯ ಕಾರ್ಯಕರ್ತರು ಶುಕ್ರವಾರ ಸಂಜೆ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಿದರು.

ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ರೋಟರಿ ವೃತ್ತದ ವರೆಗೆ ರ್‍ಯಾಲಿ ನಡೆಸಿದರು. ಅನಂತರ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಹೋರಾಟ ಸಮಿತಿ ಮುಖಂಡ ನಿಂಬಗಲ್‌ ರಾಮಕೃಷ್ಣ, ‘2007ರಿಂದ ನೂತನ ಜಿಲ್ಲೆ ರಚನೆ ಸಂಬಂಧ ಹೋರಾಟ ನಡೆಸುತ್ತಿದ್ದೇವೆ. ಅನೇಕ ಹೋರಾಟಗಾರರು ಈಗ ನಮ್ಮ ನಡುವೆ ಇಲ್ಲ. ತಡವಾಗಿಯಾದರೂ ಸರ್ಕಾರ ಸ್ಪಂದಿಸಿ ಹೆಜ್ಜೆ ಇಟ್ಟಿರುವುದು ಸೂಕ್ತವಾಗಿದೆ. ಇದು ಹೋರಾಟ ಸಮಿತಿಗೆ ಸಂದ ದೊಡ್ಡ ಜಯವಾಗಿದೆ. ಶೀಘ್ರವೇ ಜಿಲ್ಲೆ ಘೋಷಿಸಲು ಸಿ.ಎಂ. ಕ್ರಮ ಕೈಗೊಳ್ಳಬೇಕು. ಅಲ್ಲಿಯವರೆಗೆ ಹೋರಾಟ ಮುಂದುವರೆಯಲಿದೆ’ ಎಂದರು.

ADVERTISEMENT

‘ಹೊಸಪೇಟೆ, ಹರಪನಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಕೊಟ್ಟೂರು ಹಾಗೂ ಕಂಪ್ಲಿ ತಾಲ್ಲೂಕುಗಳನ್ನು ಒಳಗೊಂಡ ಹೊಸ ಜಿಲ್ಲೆಯ ಉದಯವಾದರೆ ಪಶ್ಚಿಮ ತಾಲ್ಲೂಕುಗಳ ಸಮಗ್ರ ಅಭಿವೃದ್ಧಿಯಾಗುತ್ತದೆ. ಜಿಲ್ಲಾ ಕೇಂದ್ರವಾಗಲು ಅಗತ್ಯ ಸೌಕರ್ಯಗಳು ಹೊಸಪೇಟೆ ನಗರದಲ್ಲಿವೆ. ಹಾಗಾಗಿ ಇದನ್ನೇ ಕೇಂದ್ರವಾಗಿಟ್ಟುಕೊಂಡು ಜಿಲ್ಲೆ ರಚಿಸಬೇಕು’ ಎಂದು ಹಕ್ಕೊತ್ತಾಯ ಮಾಡಿದರು.

ಮುಖಂಡರಾದ ಗುಜ್ಜಲ್‌ ನಾಗರಾಜ, ವೈ. ಯಮುನೇಶ್‌, ಸಿ.ಎನ್‌. ಸುಧಾ, ಜೆ. ಸಲೀಂ, ತಾರಿಹಳ್ಳಿ ವೆಂಕಟೇಶ, ಎಂ. ಶಾಮಪ್ಪ, ಶಾಂತಮ್ಮ, ಪಿ.ಆರ್‌. ಶ್ವೇತಾ, ಎನ್‌. ರಾಮಚಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.