ಹೊಸಪೇಟೆ (ವಿಜಯನಗರ): ನರೇಗಾ ಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ವಿತರಿಸಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಗುರುವಾರ ನಗರದ ಎಪಿಎಂಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ 12 ದಿನಗಳ ಅವಧಿಯಲ್ಲಿ ಮೂವರು ಉದ್ಯೋಗ ಖಾತ್ರಿ ಕಾರ್ಮಿಕರು ಮೃತಪಟ್ಟಿದ್ದಾರೆ. ಅವರಿಗೆ ಜಿಲ್ಲಾ ಪಂಚಾಯಿತಿಯಿಂದ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.
ಮುಂಗಾರು ಬಿತ್ತನೆಗೆ ರೈತರಿಗೆ ರಿಯಾಯಿತಿ ದರದಲ್ಲಿ ಗುಣಮಟ್ಟದ ಬೀಜ, ರಸಗೊಬ್ಬರ ವಿತರಿಸಬೇಕು. ಪರಿಶಿಷ್ಟರಿಗೆ ಪಿವಿಸಿ ಪೈಪ್, ತಾಡಪಾಲ್ ನೀಡಬೇಕು. ಬೆಳೆ ಖರೀದಿ ಕೇಂದ್ರಗಳನ್ನು ತೆರೆಯಬೇಕು. ಕೆಲ ರಸಗೊಬ್ಬರ ಅಂಗಡಿಗಳಲ್ಲಿ ದುಪ್ಪಟ್ಟು ಬೆಲೆಗೆ ಗೊಬ್ಬರ ಮಾರಾಟ ಮಾಡಲಾಗುತ್ತಿದ್ದು, ಸಂಬಂಧಿಸಿದವರು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಸಂಘಟನೆಯ ತಾಲ್ಲೂಕು ಅಧ್ಯಕ್ಷ ಜಿ. ಕೆರೆ ಹನುಮಂತ, ಪ್ರಧಾನ ಕಾರ್ಯದರ್ಶಿ ಎನ್. ಯಲ್ಲಾಲಿಂಗ, ಖಜಾಂಚಿ ಕೆ. ಕೆರೆ ಹನುಮಂತ, ಉಪಾಧ್ಯಕ್ಷರಾದ ಬಾಣದ ರಾಮಣ್ಣ, ಬಾಣದ ನಾಗರಾಜ, ರಾಜಾಪುರ ಕಣಿಮೆಪ್ಪ, ಸಹ ಕಾರ್ಯದರ್ಶಿಗಳಾದ ಬಿ. ತಾಯಪ್ಪ, ಕಣಿಮೆಪ್ಪ, ಭೀಮಜ್ಜ, ಅನ್ವೇರಿ ಸ್ವಾಮಿ, ಎಂ. ನಾಗರಾಜ, ಹೇಮಣ್ಣ, ಕಟಿಗಿ ಮಾರುತಿ, ಮರಡಿ ತಿಮ್ಮಯ್ಯ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.