ADVERTISEMENT

ಸುರೇಶ ಅಂಗಡಿ ಖಾತೆ ರಾಜ್ಯಕ್ಕೆ ಸಿಗಲಿ: ಆಗ್ರಹ

ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 7:49 IST
Last Updated 22 ಜೂನ್ 2021, 7:49 IST
ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ ಮುಖಂಡರು ಮಂಗಳವಾರ ಹೊಸಪೇಟೆಯಲ್ಲಿ ಉಪವಿಭಾಗಾಧಿಕಾರಿ ಕಚೇರಿಯ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು
ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ ಮುಖಂಡರು ಮಂಗಳವಾರ ಹೊಸಪೇಟೆಯಲ್ಲಿ ಉಪವಿಭಾಗಾಧಿಕಾರಿ ಕಚೇರಿಯ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ಕೇಂದ್ರ ಸರ್ಕಾರದ ಸಂಪುಟ ಪುನರ್ ರಚನೆಯಲ್ಲಿ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ರೈಲ್ವೆ ಖಾತೆ ರಾಜ್ಯ ಸಚಿವ ಸ್ಥಾನವನ್ನು ರಾಜ್ಯದವರಿಗೆ ನೀಡಬೇಕೆಂದು ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ ಆಗ್ರಹಿಸಿದೆ.

ಕೋವಿಡ್‌ನಿಂದ ಅಂಗಡಿ ಅವರು ಅಕಾಲಿಕ ನಿಧನ ಹೊಂದಿದ ನಂತರ ಆ ಖಾತೆಯನ್ನು ಹೊಸಬರಿಗೆ ಕೊಟ್ಟಿಲ್ಲ. ಆ ಖಾತೆ ರಾಜ್ಯದವರಿಗೆ ಕೊಟ್ಟರೆ ನ್ಯಾಯ ದೊರಕಿಸಿಕೊಟ್ಟಂತಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಇಡೀ ದೇಶದಲ್ಲಿಯೇ ಕರ್ನಾಟಕ ಮಾತ್ರ ರೈಲ್ವೆ ಯೋಜನೆಗಳಿಗೆ ಮೊದಲಿನಿಂದಲೂ ಸ್ಪಂದಿಸುತ್ತ ಬಂದಿದೆ. ಶೇ 50ರಷ್ಟು ಅನುದಾನದೊಂದಿಗೆ ಎಲ್ಲ ಕಾಮಗಾರಿಗಳನ್ನು ನಿರ್ವಹಿಸುತ್ತಿದೆ. ರೈಲ್ವೆಗೆ ಅಗತ್ಯ ಭೂಮಿ ನೀಡುತ್ತಿದೆ. ಆದರೆ, ಉಳಿದ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ರೈಲ್ವೆ ಯೋಜನೆಗಳು ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಹೊಂದುತ್ತಿಲ್ಲ ಎಂದು ಗೋಳು ತೋಡಿಕೊಂಡಿದ್ದಾರೆ.

ADVERTISEMENT

ಆಂಧ್ರ ಪ್ರದೇಶ, ತೆಲಂಗಾಣ, ಕೇರಳದಲ್ಲಿ ಶೇ 80ರಷ್ಟು ರೈಲು ಮಾರ್ಗ ವಿದ್ಯುದ್ದೀಕರಣಗೊಂಡಿದೆ. ಆದರೆ, ರಾಜ್ಯದಲ್ಲಿ ಶೇ 37ರಷ್ಟು ಪ್ರಗತಿಯಾಗಿದೆ. ರಾಜ್ಯದಲ್ಲಿ ಬಿಜೆಪಿಯ 26 ಸಂಸದರು ಆಯ್ಕೆಗೊಂಡಿದ್ದು, ಈ ಪೈಕಿ ಒಬ್ಬರಿಗೆ ಅಂಗಡಿ ಅವರಿಂದ ತೆರವಾಗಿರುವ ಖಾತೆ ಕೊಟ್ಟರೆ ಅಭಿವೃದ್ಧಿಗೆ ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ತಿಳಿಸಿದ್ದಾರೆ.

ಸಮಿತಿಯ ಅಧ್ಯಕ್ಷ ವೈ. ಯಮುನೇಶ, ವಿಶ್ವನಾಥ, ಸಣ್ಣ ಮಾರೆಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.