ಹೊಸಪೇಟೆ: ‘ಡಿ. 9ರ ನಂತರ ರಾಜ್ಯದಲ್ಲಿ ಮತ್ತೆ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂದು ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಹಗಲು ಕನಸು ಕಾಣುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ ವ್ಯಂಗ್ಯವಾಡಿದರು.
ಭಾನುವಾರ ಸಂಜೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾತ್ರಿ ಕಂಡ ಕನಸೇ ಈಡೇರುವುದಿಲ್ಲ. ದೇವೇಗೌಡರು ಕಾಣುತ್ತಿರುವ ಹಗಲು ಕನಸು ನನಸಾಗುವುದೇ’ ಎಂದು ಪ್ರಶ್ನಿಸಿದರು.
‘ಈ ಚುನಾವಣೆ ನಂತರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ ದಿನೇಶ ಗುಂಡೂರಾವ್ ಅವರು ಅವರ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ. ಇದುವರೆಗೆ ಖರ್ಗೆಯವರು ಪ್ರಚಾರಕ್ಕೆ ಬಂದಿಲ್ಲ. ಭಾನುವಾರ ಬೆಂಗಳೂರಿನಲ್ಲಿ ಅವರು ಸುದ್ದಿಗೋಷ್ಠಿ ನಡೆಸುತ್ತಿದ್ದರೆ, ಸಿದ್ದರಾಮಯ್ಯನವರು ಹೊರಗೆ ಕಾರಿನಲ್ಲಿಯೇ ಕುಳಿತುಕೊಂಡಿದ್ದರು. ಹೊಂದಾಣಿಕೆ ಕೊರತೆ, ಸಂಘಟನಾ ಶಕ್ತಿ ಇಲ್ಲದಿರುವುದರಿಂದ ಕಾಂಗ್ರೆಸ್ ದಯನೀಯ ಪರಿಸ್ಥಿತಿಯಲ್ಲಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.