ಹೊಸಪೇಟೆ: ‘ಮೈತುಂಬ ಭ್ರಷ್ಟಾಚಾರ ಪ್ರಕರಣಗಳೇ ಮೆತ್ತಿಕೊಂಡಿರುವ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರು ನಾಳೆ ಜೈಲಿಗೆ ಹೋದರೂ ಆಶ್ಚರ್ಯ ಪಡಬೇಕಿಲ್ಲ’ ಎಂದು ಶಾಸಕ ಬಿ. ಶ್ರೀರಾಮುಲು ಹೇಳಿದರು.
ಬಳ್ಳಾರಿ ಲೋಕಸಭೆ ಉಪಚುನಾವಣೆ ನಿಮಿತ್ತ ಶುಕ್ರವಾರ ನಗರದಲ್ಲಿ ಹಮ್ಮಿಕೊಂಡಿದ್ದ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಶಿವಕುಮಾರ ಅವರು ಬಳ್ಳಾರಿ ಜಿಲ್ಲೆಯ ಭವಿಷ್ಯ ಬದಲಿಸುವ ಮಾತುಗಳನ್ನು ಆಡುತ್ತಿದ್ದಾರೆ. ಆದರೆ, ಅವರ ಭವಿಷ್ಯದ ಬಗ್ಗೆ ಅವರಿಗೆ ಗೊತ್ತಿಲ್ಲ. ರೊಕ್ಕದ ಅಹಂನಿಂದ ಅವರು ಮೆರೆದಾಡುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಅದು ನಡೆಯೊಲ್ಲ’ ಎಂದರು.
‘ಶಿವಕುಮಾರ ಅವರು ಸಮಾಜಕ್ಕೆ ಏನು ಕೊಡುಗೆ ನೀಡಿದ್ದಾರೆ. ಒಂದಾದರೂ ಜನಪರ ಹೋರಾಟ ಮಾಡಿದ್ದಾರೆಯೇ? ಅಕ್ರಮವಾಗಿ ಸಂಪಾದಿಸಿದ ಹಣದಿಂದ ಬಳ್ಳಾರಿಯಲ್ಲಿ ಚುನಾವಣೆ ಮಾಡಲು ಹೊರಟಿದ್ದಾರೆ. ಆದರೆ, ಉಪಚುನಾವಣೆಯಲ್ಲಿ ಕನಕಪುರದ ಶಿವಕುಮಾರ ಅವರು ತಮ್ಮ ಪಕ್ಷದ ಅಭ್ಯರ್ಥಿಯನ್ನು ಹೇಗೆ ಗೆಲ್ಲಿಸುತ್ತಾರೆ ಎಂಬುದನ್ನು ನಾನು ನೋಡುತ್ತೇನೆ. ಈ ಚುನಾವಣೆ ನನ್ನ ಪಾಲಿಗೆ ಅಗ್ನಿ ಪರೀಕ್ಷೆ ಇದ್ದಂತೆ. ಅದನ್ನು ಸವಾಲಾಗಿ ಸ್ವೀಕರಿಸಿದ್ದೇನೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.