ADVERTISEMENT

ಬೀದಿ ಬದಿ ವ್ಯಾಪಾರಿಗಳ ತೆರವಿಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 24 ಜೂನ್ 2019, 11:08 IST
Last Updated 24 ಜೂನ್ 2019, 11:08 IST
ಜೆ.ಡಿ.ಎಸ್‌. ಮುಖಂಡ ದೀಪಕ್‌ ಕುಮಾರ್‌ ಸಿಂಗ್‌ ಅವರು ಬೀದಿ ಬದಿಯ ವ್ಯಾಪಾರಿಗಳೊಂದಿಗೆ ಮಾತನಾಡುತ್ತಿರುವುದು–ಪ್ರಜಾವಾಣಿ ಚಿತ್ರ
ಜೆ.ಡಿ.ಎಸ್‌. ಮುಖಂಡ ದೀಪಕ್‌ ಕುಮಾರ್‌ ಸಿಂಗ್‌ ಅವರು ಬೀದಿ ಬದಿಯ ವ್ಯಾಪಾರಿಗಳೊಂದಿಗೆ ಮಾತನಾಡುತ್ತಿರುವುದು–ಪ್ರಜಾವಾಣಿ ಚಿತ್ರ   

ಹೊಸಪೇಟೆ: ನಗರದ ಕೇಂದ್ರ ಬಸ್‌ ನಿಲ್ದಾಣ ಬಳಿಯ ಬೀದಿ ಬದಿಯ ವ್ಯಾಪಾರಿಗಳನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸಬಾರದು ಎಂದು ಜೆ.ಡಿ.ಎಸ್‌. ಮುಖಂಡ ದೀಪಕ್‌ ಕುಮಾರ್‌ ಸಿಂಗ್‌ ಆಗ್ರಹಿಸಿದರು.

ಮುಖ್ಯರಸ್ತೆಯ ವಿಭಜಕಕ್ಕೆ ಗ್ರಿಲ್‌ಗಳನ್ನು ಅಳವಡಿಸಿ, ಬೀದಿ ಬದಿಯ ವ್ಯಾಪಾರಿಗಳನ್ನು ತೆರವುಗೊಳಿಸಲು ನಗರಸಭೆ ಉದ್ದೇಶಿಸಿದೆ. ಈ ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಿಂಗ್‌, ಅಲ್ಲಿನ ವ್ಯಾಪಾರಿಗಳಿಗೆ ಧೈರ್ಯ ತುಂಬಿದರು.

‘ಯಾರೂ ಕೂಡ ಹೆದರುವ ಅಗತ್ಯವಿಲ್ಲ. ನಿಮ್ಮೊಂದಿಗೆ ನಾನು ಹಾಗೂ ನಮ್ಮ ಪಕ್ಷ ಇದೆ. ನಿಮ್ಮ ವ್ಯಾಪಾರಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆಯುವೆ‘ ಎಂದು ಸಿಂಗ್‌, ವ್ಯಾಪಾರಿಗಳಿಗೆ ಹೇಳಿದರು.

ADVERTISEMENT

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವ್ಯಾಪಾರಿಗಳು ಅನೇಕ ವರ್ಷಗಳಿಂದ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದಾರೆ. ಅವರನ್ನು ಏಕಾಏಕಿ ಒಕ್ಕಲೆಬ್ಬಿಸಿದರೆ ಅವರ ಕುಟುಂಬ ಬೀದಿಗೆ ಬೀಳುತ್ತದೆ. ಬೀದಿ ಬದಿಯ ವ್ಯಾಪಾರಿಗಳಿಗೆ ಯಾವುದೇ ಕಾರಣಕ್ಕೂ ತೊಂದರೆ ಉಂಟು ಮಾಡಬಾರದು ಎಂದು ನ್ಯಾಯಾಲಯವೇ ಹೇಳಿದೆ. ಹೀಗಿರುವಾಗ ಅವರನ್ನು ತೆರವುಗೊಳಿಸಿದರೆ ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗುತ್ತದೆ‘ ಎಂದರು.

‘ಇಂದು ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ನಗರಸಭೆ ಪೌರಾಯುಕ್ತರು ಊರಲ್ಲಿ ಇಲ್ಲ. ಅವರು ಬಂದ ನಂತರ, ಈ ಕುರಿತು ಚರ್ಚಿಸಿ ಮುಂದುವರೆಯಲಾಗುವುದು‘ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.