ADVERTISEMENT

ನಿರುದ್ಯೋಗ ಭತ್ಯೆಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2023, 11:22 IST
Last Updated 20 ಮಾರ್ಚ್ 2023, 11:22 IST
ಡಿವೈಎಫ್‌ಐ ಕಾರ್ಯಕರ್ತರು ಹೊಸಪೇಟೆ ತಹಶೀಲ್ದಾರ್‌ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು
ಡಿವೈಎಫ್‌ಐ ಕಾರ್ಯಕರ್ತರು ಹೊಸಪೇಟೆ ತಹಶೀಲ್ದಾರ್‌ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು   

ಹೊಸಪೇಟೆ (ವಿಜಯನಗರ): ಉದ್ಯೋಗ ಸೃಷ್ಟಿಸಿ, ಕಲ್ಪಿಸುವವರೆಗೆ ನಿರುದ್ಯೋಗ ಭತ್ಯೆ ನೀಡಬೇಕೆಂದು ಆಗ್ರಹಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್‌ (ಡಿವೈಎಫ್‌ಐ) ಜಿಲ್ಲಾ ಸಮಿತಿಯವರು ನಗರದಲ್ಲಿ ಸೋಮವಾರ ಪ್ರತಿಭಟನಾ ರ್‍ಯಾಲಿ ನಡೆಸಿದರು.

ನಗರದ ಶ್ರಮಿಕ ಭವನದಿಂದ ತಹಶೀಲ್ದಾರ್‌ ಕಚೇರಿ ವರೆಗೆ ರ್‍ಯಾಲಿ ನಡೆಸಿ, ಬಳಿಕ ಮನವಿ ಪತ್ರ ಸಲ್ಲಿಸಿದರು. ಜಿಲ್ಲಾ ಕಾರ್ಯದರ್ಶಿ ಈಡಿಗರ ಮಂಜುನಾಥ ಮಾತನಾಡಿ, ಮಾನವ ಸಂಪನ್ಮೂಲದಲ್ಲಿ ಭಾರತ ಮುಂಚೂಣಿಯಲ್ಲಿ ಇದೆ. ಅದನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಉದ್ಯೋಗ ಸೃಷ್ಟಿ ಆಗಬೇಕಿತ್ತು. ಬದಲಾಗಿ ಬಂಡವಾಳಶಾಹಿಗಳು ಮಾನವ ಸಂಪನ್ಮೂಲ ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದರು.

ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ಭರವಸೆಯಾಗಿಯೇ ಉಳಿದಿದೆ. ಭದ್ರತೆ, ಉದ್ಯೋಗ ಇಲ್ಲದೆ ಯುವಕರು ದಾರಿ ತಪ್ಪುತ್ತಿದ್ದಾರೆ. ಕೋಮು ಗಲಭೆಗಳಲ್ಲಿ ಮುಳುಗಿ ತಮ್ಮ ಹಕ್ಕುಗಳನ್ನು ಕೇಳುವುದನ್ನು ಮರೆತಿದ್ದಾರೆ. ಯುವಕರಿಗೆ ಉದ್ಯೋಗ ಕಲ್ಪಿಸುವವರೆಗೆ ನಿರುದ್ಯೋಗ ಭತ್ಯೆ ನೀಡಬೆಕೆಂದು ಒತ್ತಾಯಿಸಿದರು.

ADVERTISEMENT

ಜಿಲ್ಲಾಧ್ಯಕ್ಷ ವಿ. ಸ್ವಾಮಿ ಮಾತನಾಡಿ, ಯುವಕರಿಗೆ ಉದ್ಯೋಗ ನೀಡುವ ಬದಲು ಪಕೋಡ ಮಾರಿ ಎಂದು ಹೇಳಲಾಗುತಿದೆ. ಉದ್ಯೋಗ ಸಂವಿಧಾನ ಮೂಲಭೂತ ಹಕ್ಕಾಗಬೇಕು. ಇತ್ತೀಚೆಗೆ ನಗರದ ಬಿಡಿಸಿಸಿ ಬ್ಯಾಂಕ್ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಹಗರಣದ ತನಿಖೆ ನಡೆಸಿ, ಅರ್ಹರಿಗೆ ಉದ್ಯೋಗಗಳನ್ನು ಕೊಡಬೇಕೆಂದು ಆಗ್ರಹಿಸಿದರು.

ಬಿಸಾಟಿ ಸೂರಿ, ಮಂಜುನಾಥ್ ಸಿ., ದುರ್ಗೇಶ್, ಶಿವರಾಜ್, ಹೇಮಂತ್, ಹೊನ್ನೂರ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.