ಬಳ್ಳಾರಿ: ‘ಕೃಷಿ ಜ್ಞಾನವನ್ನು ನೇರವಾಗಿ ರೈತರಿಗೆ ತಲುಪಿಸುವುದು, ಜಮೀನುಗಳಿಗೆ ಕೊಂಡ್ಯೊಯುವುದು ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ದ ಮುಖ್ಯ ಉದ್ದೇಶ’ ಎಂದು ಬಳ್ಳಾರಿಯ ಹಗರಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಪಾಲಯ್ಯ.ಪಿ ಹೇಳಿದರು.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ, ಭಾರತೀಯ ಕೃಷಿ ಅನುಸಂಧಾನ ಪರಿಷತ್ ಸಹಯೋಗದಲ್ಲಿ, ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಅಂಗವಾಗಿ ಕಂಪ್ಲಿ ತಾಲ್ಲೂಕಿನ ನೆಲ್ಲುಡಿ, ಎಮ್ಮಿಗನೂರು ಗ್ರಾಮಗಳಲ್ಲಿ ಮಂಗಳವಾರ ಆಯೋಜಿಸಿದ್ದ ‘ವಿಜ್ಞಾನಿಗಳ ನಡೆ ರೈತರ ಕಡೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಹಗರಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳ ತಂಡ ಜೂನ್ 12ರವರೆಗೆ ಜಿಲ್ಲೆಯ ವಿವಿಧ ತಾಲ್ಲೂಕುಗಳ ಗ್ರಾಮಗಳಿಗೆ ಭೇಟಿ ನೀಡಿ ರೈತರಿಗೆ ಕೃಷಿ ಜ್ಞಾನ ಕುರಿತು ತಿಳುವಳಿಕೆ ನೀಡುವರು. ರೈತರು ಇದರ ಸದುಪಯೋಗ ಪಡೆಯಬೇಕು’ ಎಂದರು.
ಬೆಂಗಳೂರಿನ ಐಸಿಎಆರ್ನ ವಿಜ್ಞಾನಿ ಡಾ.ಡೇವಿಡ್ ಕೆ.ಜೆ ಮಾತನಾಡಿ, ಭತ್ತದ ಬೆಳೆಯಲ್ಲಿ ಸಮಗ್ರ ರೋಗ ಹಾಗೂ ಕೀಟ ನಿಯಂತ್ರಣ, ಸಾವಯವ ಕೃಷಿ ಪದ್ಧತಿಯಲ್ಲಿ ಜೈವಿಕ ಕೀಟನಾಶಕ ಹಾಗೂ ಸಸ್ಯಜನ್ಯ ಪಿಡೇನಾಶಕಗಳ ಬಳಕೆಯ ಕುರಿತು ಮಾಹಿತಿ ನೀಡಿದರು.
ವಿಜ್ಞಾನಿ ನವೀನ್ ಕುಮಾರ್.ಪಿ ಮಾತನಾಡಿ, ಅತಿಯಾದ ಪೀಡೆನಾಶಕಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಇದರಿಂದ ಆರೋಗ್ಯಕ್ಕೆ ಆಗುವ ಹಾನಿ ಬಗ್ಗೆ ರೈತರಲ್ಲಿ ಅರಿವು ಮೂಡಿಸಿದರು.
ಕಂಪ್ಲಿ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ ಜ್ಯೋತಿ.ಟಿ, ಕೃಷಿ ಇಲಾಖೆಯಲ್ಲಿ ಸಿಗುವ ಸವಲತ್ತುಗಳ ಬಗ್ಗೆ ಹಾಗು ರೈತರಿಗೆ ರಿಯಾಯಿತಿ ದರದಲ್ಲಿ ಕೀಟ ಮತ್ತು ರೋಗ ನಿರ್ವಹಣೆಗೆ ಬೇಕಾದ ಪರಿಕರಗಳ ಬಗ್ಗೆ ಮಾಹಿತಿ ನೀಡಿದರು.
ವಿವಿಧ ಗ್ರಾಮಗಳ ರೈತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.