
ಬಳ್ಳಾರಿ: ‘ಜೀವ ರಕ್ಷಣೆಗೆ ಅಗತ್ಯವಾದ ಪ್ರಥಮ ಚಿಕಿತ್ಸಾ ಕೌಶಲವನ್ನು ಯುವ ರೆಡ್ ಕ್ರಾಸ್ನ ಮೂಲಕ ಪ್ರತಿಯೊಬ್ಬರು ಪಡೆಯಬೇಕು. ಈ ಮೂಲಕ ಜೀವ ರಕ್ಷಣೆ ಮಾಡಬೇಕು’ ಎಂದು ಭಾರತೀಯ ಯುವ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಶಾಖೆ ಉಪಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದರು.
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಬುಧವಾರ ವಿವಿ ಆವರಣದಲ್ಲಿ ಆಯೋಜಿಸಿದ್ದ ‘ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.
‘ರೆಡ್ ಕ್ರಾಸ್ ಸೇವೆಗೆ 4 ಬಾರಿ ನೊಬೆಲ್ ಪುರಸ್ಕಾರ ಲಭಿಸಿದೆ. 190 ರಾಷ್ಟ್ರಗಳಲ್ಲಿ ಶಾಖೆಗಳನ್ನು ಹೊಂದಿದೆ. ಮಾನವೀಯ ಮೌಲ್ಯಗಳನ್ನು ವಿಶ್ವಕ್ಕೆ ತಿಳಿಸುವುದು ರೆಡ್ ಕ್ರಾಸ್ನ ಮೂಲ ಉದ್ದೇಶ. ವಿಷಮ ಪರಿಸ್ಥಿತಿಯಲ್ಲಿ ಧೈರ್ಯ ಮತ್ತು ಕ್ಷಿಪ್ರ ನಿರ್ಧಾರ ತೆಗೆದುಕೊಳ್ಳಲು ರೆಡ್ಕ್ರಾಸ್ ತರಬೇತಿ ಪಡೆಯುವುದರಿಂದ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಸಮಾಜಮುಖಿ ಸೇವೆಗಳತ್ತ ತಮ್ಮನ್ನು ತೊಡಗಿಸಿಕೊಳ್ಳಬೇಕು’ ಎಂದು ಕರೆ ನೀಡಿದರು.
ನಿರ್ವಹಣಾಶಾಸ್ತ್ರದ ಡೀನ್ ಪ್ರೊ ಸದ್ಯೋಜಾತಪ್ಪ ಎಸ್. ಮಾತನಾಡಿ, ‘ವಿದ್ಯಾರ್ಥಿಗಳು ದೃಢವಿಶ್ವಾಸದಿಂದ ಕಲಿಕೆ, ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಕ್ರಮಬದ್ಧ ಜೀವನಶೈಲಿ ತಮ್ಮದಾಗಿಸಿಕೊಂಡು ರೆಡ್ಕ್ರಾಸ್ ಮಾದರಿಯ ಮೌಲ್ಯಯುತ ಸೇವೆಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ತಿಳಿಸಿದರು.
ರಾಜ್ಯಗಳಿಂದ ಬಳ್ಳಾರಿಗೆ ಆಗಮಿಸಿ 11 ದಿನಗಳ ರೆಡ್ಕ್ರಾಸ್ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದ ಶಿಬಿರಾರ್ಥಿಗಳಿಗೆ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಿಸಲಾಯಿತು.
ರೆಡ್ಕ್ರಾಸ್ ಸಂಸ್ಥೆ ಬಳ್ಳಾರಿ ಶಾಖೆಯ ಕಾರ್ಯದರ್ಶಿ ಎಂ. ಎ ಶಕೀಬ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ಕಾರ್ಯದರ್ಶಿ ಉಮಾಕಾಂತ್, ವಿ.ವಿಯ ಯುವ ರೆಡ್ಕ್ರಾಸ್ ಸಮನ್ವಯಾಧಿಕಾರಿ ರಾಜೇಂದ್ರ ಪ್ರಸಾದ್ ಎನ್. ಎಲ್. ವೇದಿಕೆಯಲ್ಲಿದ್ದರು.
ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಶಶಿಧರ್ ಕೆಲ್ಲೂರ್ ನಿರೂಪಿಸಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.