ADVERTISEMENT

ಫುಟ್‌ಪಾತ್‌ ಅತಿಕ್ರಮಣನಗರಸಭೆಯಿಂದ ತೆರವು

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 7:35 IST
Last Updated 8 ಜನವರಿ 2021, 7:35 IST
ಹೊಸಪೇಟೆಯ ಬಳ್ಳಾರಿ ರಸ್ತೆಯಲ್ಲಿ ಶುಕ್ರವಾರ ನಗರಸಭೆ ಸಿಬ್ಬಂದಿ ಜೆಸಿಬಿಯಿಂದ ಪಾದಚಾರಿ ಮಾರ್ಗದ ಅತಿಕ್ರಮಣ ತೆರವುಗೊಳಿಸಿದರು. ಸ್ಥಳದಲ್ಲಿ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು
ಹೊಸಪೇಟೆಯ ಬಳ್ಳಾರಿ ರಸ್ತೆಯಲ್ಲಿ ಶುಕ್ರವಾರ ನಗರಸಭೆ ಸಿಬ್ಬಂದಿ ಜೆಸಿಬಿಯಿಂದ ಪಾದಚಾರಿ ಮಾರ್ಗದ ಅತಿಕ್ರಮಣ ತೆರವುಗೊಳಿಸಿದರು. ಸ್ಥಳದಲ್ಲಿ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು   

ಹೊಸಪೇಟೆ: ನಗರದ ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗ ಅತಿಕ್ರಮಿಸಿಕೊಂಡು ನಿರ್ಮಿಸಿರುವ ಕಟ್ಟಡಗಳ ತೆರವು ಕಾರ್ಯಾಚರಣೆ ನಗರಸಭೆ ಕೈಗೆತ್ತಿಕೊಂಡಿದೆ.

ನಗರದ ಮೇನ್‌ ಬಜಾರ್‌ನಿಂದ ಬಳ್ಳಾರಿ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕಾರ್ಯಾಚರಣೆ ಕೈಗೆತ್ತಿಕೊಂಡಿರುವ ನಗರಸಭೆಯ ಸಿಬ್ಬಂದಿ ಶುಕ್ರವಾರ ಅಲ್ಲಿನ ಪಾದಚಾರಿ ಮಾರ್ಗದ ಮೇಲೆ ನಿರ್ಮಿಸಿದ ಕಟ್ಟೆ ತೆರವುಗೊಳಿಸಿದರು. ಅಲ್ಲಿ ವಹಿವಾಟು ನಡೆಸದಂತೆ ಸೂಚಿಸಿದರು.

ಇನ್ನು ಕಾಲೇಜು ರಸ್ತೆ, ಟಿ.ಬಿ. ಡ್ಯಾಂ ರಸ್ತೆ, ಸ್ಟೇಶನ್‌ ರಸ್ತೆ, ಬಸ್‌ ನಿಲ್ದಾಣ ರಸ್ತೆಯ ಪಾದಚಾರಿ ಮಾರ್ಗದ ಮೇಲೆ ಇಟ್ಟಿದ್ದ ಗೂಡಂಗಡಿಗಳನ್ನು ತೆರವುಗೊಳಿಸಿದರು. ಪಾದಚಾರಿಗಳಿಗೆ ತೊಂದರೆಯಾಗುವ ರೀತಿಯಲ್ಲಿ ವ್ಯಾಪಾರ ವಹಿವಾಟು ನಡೆಸಿದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ADVERTISEMENT

‘ಪಾದಚಾರಿ ಮಾರ್ಗ ಇರುವುದು ಜನರ ಓಡಾಟಕ್ಕಾಗಿ. ಆದರೆ, ಅದರ ಮೇಲೆಯೇ ಹಲವರು ವಹಿವಾಟು ನಡೆಸುತ್ತಿದ್ದಾರೆ. ಮತ್ತೆ ಕೆಲವರು ಅತಿಕ್ರಮಿಸಿಕೊಂಡಿದ್ದಾರೆ. ಅತಿಕ್ರಮಿಸಿರುವುದನ್ನು ತೆರವುಗೊಳಿಸಲಾಗುತ್ತಿದೆ. ಮೊದಲ ಹಂತದಲ್ಲಿ ಎಲ್ಲರಿಗೂ ತಿಳಿವಳಿಕೆ ಮೂಡಿಸಲಾಗುವುದು. ಇದೇ ಧೋರಣೆ ಮುಂದುವರೆಸಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ನಗರಸಭೆ ಪೌರಾಯುಕ್ತ ಮನ್ಸೂರ್‌ ಅಲಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪಾದಚಾರಿ ಮಾರ್ಗ ಅತಿಕ್ರಮಿಸಿ ವ್ಯವಹಾರ ನಡೆಸಲಾಗುತ್ತಿದೆ ಎಂದು ಇತ್ತೀಚೆಗೆ ‘ಪ್ರಜಾವಾಣಿ’ ವರದಿ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.