ADVERTISEMENT

ಪರೀಕ್ಷೆಗೆ ಸ್ನೇಹಮಯ ವಾತಾವರಣ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್

ದ್ವಿತೀಯ ಪಿಯುಸಿಗೆ 15,652, ಎಸ್‌ಎಸ್‌ಎಲ್‌ಸಿಗೆ 23,271 ವಿದ್ಯಾರ್ಥಿಗಳು: ಡಿ.ಸಿ ಮಾಹಿತಿ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2026, 2:25 IST
Last Updated 20 ಫೆಬ್ರುವರಿ 2026, 2:25 IST
ಪಿಯುಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿ ನೀಡುತ್ತಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌ ಕೆ., ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮದ್‌ ಝುಬೇರ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮದ್‌ ಹ್ಯಾರಿಸ್‌ ಸುಮೇರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಮನ್‌ ಡಿ.ಪಿ ಇದ್ದರು. 
ಪಿಯುಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿ ನೀಡುತ್ತಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌ ಕೆ., ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮದ್‌ ಝುಬೇರ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮದ್‌ ಹ್ಯಾರಿಸ್‌ ಸುಮೇರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಮನ್‌ ಡಿ.ಪಿ ಇದ್ದರು.    

ಬಳ್ಳಾರಿ: ‘ಜಿಲ್ಲೆಯಲ್ಲಿ ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ 15,652 ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 23,271 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಭಯದ ವಾತಾವರಣ ಹೋಗಲಾಡಿಸಿ, ಸ್ನೇಹಮಯ ವಾತಾವರಣ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಹೇಳಿದರು.

ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಕುರಿತು ಅವರು ಗುರುವಾರ ಸುದ್ದಿಗೋಷ್ಠಿ ನಡೆಸಿದರು.

ದ್ವಿತೀಯ ಪಿಯುಸಿ: ‘ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರುವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿದೆ. 13,286 ಹೊಸ ಅಭ್ಯರ್ಥಿಗಳು (ಬಾಲಕರು-5,580 ಮತ್ತು ಬಾಲಕಿಯರು-7,706), 1,899 ಮರು ಪರೀಕ್ಷಾರ್ಥಿಗಳು, 467 ಖಾಸಗಿ ಅಭ್ಯರ್ಥಿಗಳು ಇದ್ದಾರೆ. ಬಳ್ಳಾರಿ ನಗರದಲ್ಲಿ 12, ಸಿರುಗುಪ್ಪ 3, ಸಂಡೂರು 2, ಕಂಪ್ಲಿ 2 ಮತ್ತು ಕುರುಗೋಡು 1 ಸೇರಿದಂತೆ ಒಟ್ಟು 20 ಪರೀಕ್ಷಾ ಕೇಂದ್ರಗಳಿವೆ’ ಎಂದು ತಿಳಿಸಿದರು. 

ADVERTISEMENT

ಎಸ್‌ಎಸ್‌ಎಲ್‌ಸಿ: ‘ಎಸ್ಎಸ್ಎಲ್‌ಸಿ ಪರೀಕ್ಷೆ-1 ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿವೆ. ಜಿಲ್ಲೆಯಲ್ಲಿ 326 ಶಾಲೆಗಳಿಂದ ಒಟ್ಟು 23,271 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಇವರಲ್ಲಿ 19,722 ಹೊಸ ಅಭ್ಯರ್ಥಿಗಳು, 2,009 ಮರು ಪರೀಕ್ಷಾರ್ಥಿಗಳು, 1,328 ಖಾಸಗಿ ಅಭ್ಯರ್ಥಿಗಳು, 212 ಖಾಸಗಿ ಮರು ಪರೀಕ್ಷಾರ್ಥಿಗಳಿದ್ದಾರೆ. 65 ಪರೀಕ್ಷಾ ಕೇಂದ್ರಗಳಿವೆ’ ಎಂದು ತಿಳಿಸಿದರು.

ಪರೀಕ್ಷಾ ಅಕ್ರಮದಲ್ಲಿ ತೊಡಗುವ ಯಾವುದೇ ಅಧಿಕಾರಿ, ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್ ಮಾತನಾಡಿ, ‘ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತದೆ. ಈ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು, ಸೈಬರ್ ಸೆಂಟರ್‌ಗಳನ್ನು ಮುಚ್ಚಲು ಆದೇಶಿಸಲಾಗುತ್ತದೆ’ ಎಂದು ಹೇಳಿದರು.

‘ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ತಪ್ಪು ಮಾಹಿತಿಯನ್ನು ತಡೆಯಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ನಿಗಾವಹಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಸುಳ್ಳು ಪ್ರಚಾರ ಮಾಡುವ ಖಾತೆಗಳನ್ನು ಗುರುತಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು. ಪರೀಕ್ಷೆಗಳು ಸುರಕ್ಷಿತವಾಗಿ ನಡೆಯಲು ಎಲ್ಲರ ಸಹಕಾರ ಅಗತ್ಯ’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಮಾತನಾಡಿ, ‘ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಮೂಲಕ ಕಣ್ಗಾವಲು ಇಡಲಾಗುತ್ತದೆ. ಪರೀಕ್ಷಾ ಕೇಂದ್ರಗಳ ಒಳಗಡೆ, ಹೊರಗಡೆ ಮತ್ತು ಪ್ರಾಚಾರ್ಯರ ಕೊಠಡಿಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ ಇದ್ದರು.

‘ಭಯ ನಿವಾರಣೆಗೆ ಆದ್ಯತೆ’

‘ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಅಧಿಕಾರಿಯನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಪರೀಕ್ಷಾ ಕೇಂದ್ರಗಳಲ್ಲಿ ಸ್ನೇಹಮಯಿ ವಾತಾವರಣ ಕಲ್ಪಿಸಿದೆ. ಆದರೆ ಎಲ್ಲಿಯೂ ಅಕ್ರಮ ಚಟುವಟಿಕೆ ನಡೆಯಲು ಅವಕಾಶ ನೀಡುವುದಿಲ್ಲ.

ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಕೆಕೆಆರ್‌ಟಿಸಿ ಮತ್ತು ನಗರ ಸಾರಿಗೆ ಬಸ್‌ಗಳಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಮತ್ತು ಹಿಂದಿರುಗಲು ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ’ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಎಂದರು. ‘ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಗಾಳಿ ಬೆಳಕು ಸ್ವಚ್ಛತೆ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿರುವಂತೆ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಿಗೆ ಸೂಚಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.