ಬಳ್ಳಾರಿ: ‘ರೈತ ಉತ್ಪಾದಕರ ಸಂಸ್ಥೆಗಳಿಗೆ (ಎಫ್ಪಿಒ) ಬಾಕಿ ಇರುವ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕು’ ಎಂದು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಆಗ್ರಹಿಸಿದೆ.
ಈ ಕುರಿತ ಮನವಿ ಪತ್ರವನ್ನು ಮೋರ್ಚಾದ ಪ್ರಮುಖರು ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿದರು.
‘ಎಫ್ಪಿಒಗಳಿಂದ ರಾಜ್ಯದಲ್ಲಿ ರೈತರಿಗೆ ಅನುಕೂಲವಾಗಿದೆ. ಕೃಷಿ ಪರಿಕರಗಳನ್ನು ರೈತರೇ ಖರೀದಿಸಲು ಎಫ್ಪಿಒಗಳು ನೆರವಾಗಿವೆ. ಬೆಳೆಗಳನ್ನು ಸಂರಕ್ಷಿಸಿ ಜಾಗತಿಕ ಮಟ್ಟದಲ್ಲಿ ಮಾರಾಟ ಮಾಡಲು ಅನುವು ಮಾಡಿಕೊಡುತ್ತಿತ್ತು. ದಲ್ಲಾಳಿಗಳ ತೊಂದರೆ ಇರುತ್ತಿರಲಿಲ್ಲ. ಹಿಂದೆ ಬಿ.ಎಸ್ ಯಡಿಯೂರಪ್ಪ ಸರ್ಕಾರ ಎಫ್ಪಿಒಗಳಿಗೆ ₹150 ಕೋಟಿ ಅನುದಾನ ನೀಡಿತ್ತು. ಕಾಂಗ್ರೆಸ್ ಸರ್ಕಾರ ಇವುಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಹೀಗಾಗಿ ಮುಚ್ಚುವ ಹಂತ ತಲುಪಿವೆ’ ಎಂದು ಆರೋಪಿಸಿದರು.
‘ರಾಜ್ಯ ಸರ್ಕಾರ ಕೃಷಿ ಸಮ್ಮಾನ್, ವಿದ್ಯಾನಿಧಿ, ರೈತ ಶಕ್ತಿ, ಕೃಷಿ ಭೂ ಸಿರಿ ಯೋಜನೆಗಳನ್ನು ನಿಲ್ಲಿಸಿದೆ. ಬರ ಪರಿಹಾರದಲ್ಲೂ ತಾರತಮ್ಯ ಮಾಡಲಾಗುತ್ತಿದೆ. ಹಾಲಿನ ಪ್ರೋತ್ಸಾಹ ಧನ ನೀಡುತ್ತಿಲ್ಲ. ಗೋ ರಕ್ಷಣೆ ಮಾಡುತ್ತಿಲ್ಲ. ಇ-ಸ್ಟಾಂಪ್ ಮತ್ತು ಕಾಗದ ಪತ್ರಗಳ ದರ ಐದು ಪಟ್ಟು ಏರಿದೆ. ಬೆಳೆ ಮಾರಾಟ, ಸರಬರಾಜು, ಸಾಗಣೆಗೆ ತೆರಿಗೆ ಹಾಕಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಈ ಸಮಸ್ಯೆಗಳನ್ನು ಸರ್ಕಾರ ಕೂಡಲೇ ಬಗೆಹರಿಸಬೇಕು. ಇಲ್ಲವಾದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು’ ಎಂದು ರೈತ ಮೋರ್ಚಾ ಮುಖಂಡರು ಎಚ್ಚರಿಕೆ ನೀಡಿದರು.
ಇದಕ್ಕೂ ಮೊದಲು ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಮೋರ್ಚಾ ಮುಖಂಡರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಗಣಪಾಲ್ ಐನಾಥರೆಡ್ಡಿ ರೆಡ್ಡಿ ಸೇರಿದಂತೆ ಹಲವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.