ಹೊಸಪೇಟೆ(ವಿಜಯನಗರ): ಕಾಲೇಜು ಶಿಕ್ಷಣ ಇಲಾಖೆಯ ಸುತ್ತೋಲೆ ಪ್ರಕಾರ ರಾಜ್ಯದ ಎಲ್ಲಾ ಅತಿಥಿ ಉಪನ್ಯಾಸಕರನ್ನು ಪ್ರಸಕ್ತ ಸಾಲಿನಲ್ಲಿ ಸೇವೆಗೆ ಸೇರಿಸಿಕೊಳ್ಳಬೇಕು ಎಂದು ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ಆಗ್ರಹಿಸಿದೆ.
‘ಕಳೆದ ಸೆಮಿಸ್ಟರ್ ನಲ್ಲಿ ಅತಿಥಿ ಉಪನ್ಯಾಸಕರಿಗೆ ಸರಿಯಾದ ವೇತನ ಸಿಕ್ಕಿರಲಿಲ್ಲ. ಆರ್ಥಿಕ ಮುಗ್ಗಟ್ಟಿಗೆ ಸಿಲುಕಿ ಕೆಲ ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅನೇಕರು ಸಂಕಷ್ಟದಲ್ಲಿದ್ದಾರೆ. ಎಷ್ಟೋ ಅತಿಥಿ ಉಪನ್ಯಾಸಕರು ಹಣ್ಣು-ಹಂಪಲು, ತರಕಾರಿ ಮಾರುತ್ತ ಜೀವನ ಸಾಗಿಸುತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ. ಆರ್ಥಿಕ ಹೊರೆಯ ಜೊತೆಯಲ್ಲಿ ಮಾನಸಿಕ ಒತ್ತಡವೂ ಅವರನ್ನು ತೀವ್ರವಾಗಿ ಕುಗ್ಗಿಸಿದೆ’ ಎಂದು ಸಮಿತಿಯ ಮುಖಂಡ ಹುಲುಗಪ್ಪ ಆರೋಪಿಸಿದ್ದಾರೆ.
‘2020-21 ನೇ ಸಾಲಿನ ಸೆಮಿಸ್ಟರ್ಗಳಿಗೆ ಅತಿಥಿ ಉಪನ್ಯಾಸಕರನ್ನು ಸೇವೆಗೆ ಸೇರಿಸಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ಮೇ. 07ರಂದೇ ಸುತ್ತೋಲೆ ಹೊರಡಿಸಿದ್ದರೂ ಇದುವರೆಗೆ ಅತಿಥಿ ಉಪನ್ಯಾಸಕರನ್ನು ಸೇವೆಗೆ ಸೇರಿಸಿಕೊಂಡಿಲ್ಲ. ಆಫ್ಲೈನ್ ತರಗತಿಗಳು ಪ್ರಾರಂಭವಾಗುವವರೆಗೂ ಸೂಕ್ತ ವೇತನ ನೀಡಿ ಆನ್ಲೈನ್ ತರಗತಿಗಳಿಗೆ ಅತಿಥಿ ಉಪನ್ಯಾಸಕರ ಸೇವೆಯನ್ನು ಬಳಸಿಕೊಳ್ಳುವ ಜೊತೆಗೆ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.