ಹಗರಿಬೊಮ್ಮನಹಳ್ಳಿ: ಪಟ್ಟಣದಲ್ಲಿರುವ ವಿಜಯನಗರ ಕುರಿ ಮತ್ತು ಜಾನುವಾರು ಮಾರುಕಟ್ಟೆಯಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಅಧ್ಯಕ್ಷ ಹೊಸಮನಿ ಮಂಜುನಾಥ ನೇತೃತ್ವದಲ್ಲಿ ತಹಶೀಲ್ದಾರ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಕುರುಬ ಸಮಾಜದ ಹಿರಿಯ ಮುಖಂಡ ಮುಟುಗನಹಳ್ಳಿ ಕೊಟ್ರೇಶ್ ಮಾತನಾಡಿ, ಇಲ್ಲಿನ ಜಾನುವಾರು ಮಾರುಕಟ್ಟೆ ರಾಜ್ಯದಲ್ಲಿಯೇ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಇಲ್ಲಿನ ಮಾರುಕಟ್ಟೆಯಿಂದ ಪುರಸಭೆಗೆ ಲಕ್ಷಾಂತರ ರೂಪಾಯಿ ಆದಾಯ ಬರುತ್ತದೆ. ಆದರೂ ಇಲ್ಲಿಗೆ ಬರುವ ರೈತರಿಗೆ, ಕುರಿ ಸಾಕಣೆದಾರರಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಿಲ್ಲ ಎಂದು ಕಿಡಿಕಾರಿದರು.
ಶುದ್ಧ ಕುಡಿಯುವ ನೀರು, ಶೌಚಾಲಯ ತುರ್ತಾಗಿ ಕಲ್ಪಿಸಬೇಕು, ಹೈಮಾಸ್ಟ್ ದೀಪ, ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದರು.
ಅಧ್ಯಕ್ಷ ಹೊಸಮನಿ ಮಂಜುನಾಥ ಮಾತನಾಡಿ, ಬಿಸಿಲು ಮತ್ತು ಮಳೆಯಲ್ಲಿ ರಕ್ಷಿಸಿಕೊಳ್ಳಲು ಕೊಠಡಿಗಳನ್ನು ನಿರ್ಮಿಸಬೇಕು. ಈ ಕುರಿತಂತೆ ಪುರಸಭೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕತ್ತಲಲ್ಲಿ ಇರುವ ಮಾರುಕಟ್ಟೆಯಲ್ಲಿ ಬೆಳಕಿನ ವ್ಯವಸ್ಥೆ ಮಾಡಬೇಕು. ಸಂಬಂಧಿಸಿದ ಪುರಸಭೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.
ತಹಶೀಲ್ದಾರ್ ಆರ್.ಕವಿತಾ ಅವರಿಗೆ ಮನವಿ ಸಲ್ಲಿಸಿದರು. ಶೀಘ್ರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾರುಕಟ್ಟೆಗೆ ತೆರಳಿ ಸಮಸ್ಯೆ ಪರಿಶೀಲಿಸಲಾಗುವುದು, ಮೂಲ ಸೌಕರ್ಯ ಕಲ್ಪಿಸುವಂತೆ ಸೂಚಿಸಲಾಗುವುದು ಎಂದು ತಹಶೀಲ್ದಾರ್ ತಿಳಿಸಿದರು.
ಮುಖಂಡರಾದ ಹ್ಯಾಳ್ಯಾದ ಚನ್ನಬಸಪ್ಪ, ಉಮಾಶಂಕರ್, ಕೆ.ನಾಗೇಂದ್ರ, ನಿಂಗರಾಜ ಹೊಸಮನಿ, ಪಿ.ಮೇಘರಾಜ, ಕೆ.ಕನಕಪ್ಪ, ಕೆ.ಸೋಮಪ್ಪ, ರಮೇಶ್, ಜಿ.ವೀರೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.