ಹೊಸಪೇಟೆ: ವಿಜಯನಗರ ಜಿಲ್ಲೆ ರಚನೆ ಸಂಬಂಧ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಬೇಕೆಂದು ಹಂಪಿ ಹೇಮಕೂಟ ಗಾಯತ್ರಿ ಪೀಠದ ದಯಾನಂದಪುರಿ ಸ್ವಾಮೀಜಿ ಆಗ್ರಹಿಸಿದರು.
ಈ ಸಂಬಂಧ ಬುಧವಾರ ಅವರು ನಗರದಲ್ಲಿ ಪಾದಯಾತ್ರೆ ನಡೆಸಿ, ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಎಚ್. ವಿಶ್ವನಾಥ್ ಅವರಿಗೆ ಸಲ್ಲಿಸಿ ಒತ್ತಾಯಿಸಿದರು.
‘ಚಾರಿತ್ರಿಕವಾಗಿ ವಿಜಯನಗರ ಕಾಲವನ್ನು ದಕ್ಷಿಣ ಭಾರತದ ಸುವರ್ಣಯುಗ ಎಂದು ಕರೆಯಲಾಗುತ್ತದೆ. ಅದರ ಹೆಸರಿನಲ್ಲಿ ಜಿಲ್ಲೆ ರಚನೆ ಮಾಡುವುದು ಸೂಕ್ತ. ಇದರಿಂದ ಪಶ್ಚಿಮ ತಾಲ್ಲೂಕುಗಳ ಜನರಿಗೆ ಅನುಕೂಲವಾಗುತ್ತದೆ’ ಎಂದು ತಿಳಿಸಿದರು.
‘ಆಡಳಿತದ ಅನುಕೂಲಕ್ಕಾಗಿ ಈ ಹಿಂದೆಯೇ ಕೊಪ್ಪಳ, ಗದಗ, ಹಾವೇರಿ, ದಾವಣಗೆರೆ ಸೇರಿದಂತೆ ಇತರೆ ಜಿಲ್ಲೆಗಳನ್ನು ರಚಿಸಲಾಗಿದೆ. ಅದೇ ರೀತಿ ವಿಜಯನಗರ ಜಿಲ್ಲೆಯಾದರೆ ಬಳ್ಳಾರಿ ಜಿಲ್ಲಾ ಕೇಂದ್ರದಿಂದ ಬಹಳ ದೂರದಲ್ಲಿರುವ ಗ್ರಾಮಗಳ ಜನರಿಗೆ ಅನುಕೂಲವಾಗುತ್ತದೆ. ಜನರ ಹಿತಕ್ಕಾಗಿ ಆದಷ್ಟು ಶೀಘ್ರ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿದರು.
ವಿಜಯನಗರ ಜಿಲ್ಲಾ ಹೋರಾಟ ಸಮಿತಿಯ ಮುಖಂಡರಾದ ವೈ.ಯಮುನೇಶ್, ಗುಜ್ಜಲ ನಾಗರಾಜ್, ನಿಂಬಗಲ್ ರಾಮಕೃಷ್ಣ, ಹನುಮಂತಪ್ಪ, ವೆಂಕಟೇಶ್, ಸಣ್ಣ ಮಾರೆಪ್ಪ, ರಮೇಶ್, ವಿಶ್ವನಾಥ ಕೌತಾಳ್, ಅಗಳಿ ಬಾಸ್ಕರ್, ಕೊಳಗದ ಕೀರ್ತಿ, ಆಂಜನೇಯಲು, ಪರಗಿ ಶ್ರೀಶೈಲ, ಸತೀಶ, ಕೊಳಗದ ವೆಂಕಟೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.