ADVERTISEMENT

ಹೊಸಪೇಟೆ | ಸಹಾಯ ಧನಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2020, 7:26 IST
Last Updated 5 ಜೂನ್ 2020, 7:26 IST
   

ಹೊಸಪೇಟೆ: ರಾಜ್ಯ ಸರ್ಕಾರ ಘೋಷಿಸಿರುವ ಸಹಾಯ ಧನ ತಕ್ಷಣವೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್‌ ನೇತೃತ್ವದಲ್ಲಿ ಕಾರ್ಮಿಕರು ಶುಕ್ರವಾರ ಇಲ್ಲಿನ ಕಾರ್ಮಿಕ ಇಲಾಖೆಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಂತರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿ ಹೆಸರಿಗೆ ಬರೆದ ಮನವಿ ಪತ್ರವನ್ನು ಸ್ಥಳೀಯ ಅಧಿಕಾರಿಗೆ ಸಲ್ಲಿಸಿದರು.

‘ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಈಡಾದ ಕಾರ್ಮಿಕರಿಗೆ ರಾಜ್ಯ ಸರ್ಕಾರ ₹ 5,000 ಸಹಾಯ ಧನ ಘೋಷಿಸಿದೆ. ಆದರೆ, ಇದುವರೆಗೆ ಆ ನಿಟ್ಟಿನಲ್ಲಿ ಯಾವುದೇ ಬೆಳವಣಿಗೆ ಆಗಿಲ್ಲ. ಕೂಡಲೇ ಹಣ ಬಿಡುಗಡೆಗೆ ಸರ್ಕಾರ ಮುಂದಾಗಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

‘ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಹೆಸರು ನೋಂದಣಿ ಮಾಡಿಸಿಕೊಂಡ ಎಲ್ಲ ಕಾರ್ಮಿಕರಿಗೆ ಜಿಲ್ಲಾ ಕಾರ್ಮಿಕ ಇಲಾಖೆಯ ಕಚೇರಿ ಮೂಲಕವೇ ಸಹಾಯ ಧನ ಕೊಡಬೇಕು. 60 ವರ್ಷ ಮೀರಿದ ಎಲ್ಲ ಕಾರ್ಮಿಕರಿಗೆ ಪಿಂಚಣಿ ಕೊಡಬೇಕು’ ಎಂದು ಒತ್ತಾಯಿಸಿದ್ದಾರೆ.

ಫೆಡರೇಶನ್‌ ಜಿಲ್ಲಾ ಅಧ್ಯಕ್ಷ ಎನ್‌. ಯಲ್ಲಾಲಿಂಗ, ತಾಲ್ಲೂಕು ಅಧ್ಯಕ್ಷ ಎಂ. ಗೋಪಾಲ್‌, ಕಾರ್ಯದರ್ಶಿ ರಾಮಾಂಜಿನಿ, ಖಜಾಂಚಿ ಬೀಯಮ್ಮ, ಉಮಾ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.