ಹೊಸಪೇಟೆ: ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಅನಿರ್ದಿಷ್ಟಾವಧಿ ಧರಣಿಯಲ್ಲಿ ಪಾಲ್ಗೊಂಡು ಮರಳಿದ ಹಾಸ್ಟೆಲ್ ನೌಕರರಿಗೆ ನಗರದ ರೈಲು ನಿಲ್ದಾಣದಲ್ಲಿ ಗುರುವಾರ ಸ್ವಾಗತ ಕೋರಲಾಯಿತು.
ಎಲ್ಲರಿಗೂ ಗುಲಾಬಿ ಹೂ ನೀಡಿ, ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಹಾಸ್ಟೆಲ್ ನೌಕರರ ವೇತನ ಹೆಚ್ಚಿಸುವುದು, ಕೆಲಸ ಕಾಯಂಗೊಳಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೂ. 27ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಕೈಗೊಳ್ಳಲಾಗಿತ್ತು. ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಸರ್ಕಾರ ಬುಧವಾರ ಭರವಸೆ ನೀಡಿತ್ತು. ಇದರಿಂದಾಗಿ ಪ್ರತಿಭಟನಾಕಾರರು ಧರಣಿ ಕೈಬಿಟ್ಟು ಊರಿಗೆ ಹಿಂತಿರುಗಿದ್ದಾರೆ.
‘ಮಳೆ, ಗಾಳಿ, ಚಳಿ ಲೆಕ್ಕಿಸದೆ ತಾಲ್ಲೂಕಿನ ಸುಮಾರು 30ಕ್ಕೂ ಹೆಚ್ಚು ಹಾಸ್ಟೆಲ್ ಸಿಬ್ಬಂದಿ ಧರಣಿಯಲ್ಲಿ ಪಾಲ್ಗೊಂಡಿದ್ದರು. ರಾಜ್ಯದ ವಿವಿಧ ಕಡೆಗಳಿಂದ ಸಾವಿರಾರು ಜನ ಭಾಗವಹಿಸಿದ್ದರು. ಕೊನೆಗೂ ಸರ್ಕಾರ ನಮ್ಮ ಹೋರಾಟಕ್ಕೆ ಮಣಿದು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿರುವುದಕ್ಕೆ ಖುಷಿಯಾಗಿದೆ’ ಎಂದು ಮುಖಂಡ ಜಂಬಯ್ಯ ನಾಯಕ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.