ADVERTISEMENT

ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹ

ಗಂಗಾಮತ ಸಮಾಜದ ವಿದ್ಯಾರ್ಥಿಗಳಿಗೆ ಪುರಸ್ಕಾರ ೨೬ರಂದು

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2018, 9:57 IST
Last Updated 23 ಸೆಪ್ಟೆಂಬರ್ 2018, 9:57 IST

ಬಳ್ಳಾರಿ: ‘ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಲಾಗುವುದು’ ಎಂದು ಗಂಗಾಮತಸ್ಥರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಮೌಲಾಲಿ ಹೇಳಿದರು.

ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಎಲ್ಲ ಕ್ಷೇತ್ರದಲ್ಲೂ ಹಿಂದುಳಿದಿರುವ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ಮಾತ್ರ ಸಮಗ್ರ ನೆಲೆಯಲ್ಲಿ ಅಭಿವೃದ್ಧಿ ಸಾಧ್ಯ’ ಎಂದರು.

‘ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸೆ.೨೬ರಂದು ಇಲ್ಲಿನ ಗಂಗಾಪರಮೇಶ್ವರಿ ದೇವಸ್ಥಾನದಲ್ಲಿ ಪುರಸ್ಕರಿಸಿ ಪ್ರೋತ್ಸಾಹಿಸಲಿದೆ. ಸಂಘದ ‘ಎಸ್ಸೆಸ್ಸೆಲ್ಸಿ, ಪಿಯುಸಿ, ಸ್ನಾತಕೋತ್ತರ, ವೈದ್ಯಕೀಯ, ಎಂಜಿನಿಯರಿಂಗ್ ಪದವಿ ಪರೀಕ್ಷೆಯಲ್ಲಿ ಶೇ.೭೫ಕ್ಕಿಂತ ಹೆಚ್ಚು ಅಂಕ ಪಡೆದ ೧೨೫ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು’ ಎಂದರು.

ADVERTISEMENT

‘ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ಹೋರಾಟದ ರೂಪುರೇಷೆಗಳನ್ನು ಚರ್ಚಿಸಲಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಹೇಳಿದರು.

‘ಕೇಂದ್ರ ಸಚಿವ ಸಾಧ್ವಿ ನಿರಂಜನ ಜ್ಯೋತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹಾವೇರಿ ಜಿಲ್ಲೆಯ ಅಂಬಿಗರ ಚೌಡಯ್ಯ ಗುರುಪೀಠದ ಶಾಂತ ಭೀಷ್ಮ ಚೌಡಯ್ಯ ಸ್ವಾಮಿ, ಅಲ್ಲಮಪ್ರಭು ಪೀಠದ ಮಲ್ಲಣಪ್ಪ ಸ್ವಾಮಿ, ಮಳವಳ್ಳಿಯ ಬಸಾನಂದ ಸ್ವಾಮಿ, ಅಥಣಿಯ ಮಲ್ಲಿಕಾರ್ಜುನ ಸ್ವಾಮಿ, ಚಿಕ್ಕಸೌದತ್ತಿಯ ಪಾರ್ವತಮ್ಮ ಸಾನಿಧ್ಯ ವಹಿಸಲಿದ್ದಾರೆ. ಸಚಿವರಾದ ಡಿಕೆ.ಶಿವಕಮಾರ ಮತ್ತು ವೆಂಕಟರಾವ್ ನಾಡಗೌಡ ಭಾಗವಹಿಸಲಿದ್ದಾರೆ’ ಎಂದರು.

ಮುಖಂಡರಾದ ಕೆ.ಪಂಪಾಪತಿ, ಕಟ್ಟಿ ವೀರುಪಾಕ್ಷಪ್ಪ, ಎಸ್.ಗಾಳೆಪ್ಪ, ಎಂ.ಸಿದ್ದಪ್ಪ, ಹರಿಶ್ಚಂದ್ರ, ನಾಗರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.