ADVERTISEMENT

ನಾಳೆ ಛಲವಾದಿ ಜನಜಾಗೃತಿ ಸಮಾವೇಶ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌, ಸಚಿವ ಪ್ರಿಯಾಂಕ ಖರ್ಗೆ ಭಾಗಿ

​ಪ್ರಜಾವಾಣಿ ವಾರ್ತೆ
Published 18 ಜನವರಿ 2019, 11:26 IST
Last Updated 18 ಜನವರಿ 2019, 11:26 IST

ಹೊಸಪೇಟೆ: ‘ಛಲವಾದಿ ಜನಜಾಗೃತಿ ಸಮಾವೇಶ ಜ. 20ರಂದು ಬೆಳಿಗ್ಗೆ 10.30ಕ್ಕೆ ನಗರದ ಸಿದ್ಧಿಪ್ರಿಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಕಾರ್ಯಕ್ರಮದ ಪ್ರಧಾನ ಸಂಚಾಲಕ ಸಿ. ಸೋಮಶೇಖರ್‌ ಬಣ್ಣದಮನೆ ತಿಳಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ವಾತಂತ್ರ್ಯ ಲಭಿಸಿದ ನಂತರ ಸಮಾಜದ ಡಾ. ಜಿ. ಪರಮೇಶ್ವರ್‌ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದಾರೆ. ಅದೇ ರೀತಿ ಸಮಾಜದ ಯುವಕರ ಕಣ್ಮಣಿ ಪ್ರಿಯಾಂಕ ಎಂ. ಖರ್ಗೆ ಅವರು ಸಮಾಜ ಕಲ್ಯಾಣ ಸಚಿವರಾಗಿದ್ದು, ಇಬ್ಬರಿಗೂ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು’ ಎಂದು ಮಾಹಿತಿ ನೀಡಿದರು.

‘2018ರ ವಿಧಾನಸಭೆ ಚುನಾವಣೆಯಲ್ಲಿ ಸಮಾಜದ 14 ಜನ ಶಾಸಕರು ಆಯ್ಕೆಯಾಗಿದ್ದಾರೆ. ಎಲ್ಲರನ್ನೂ ಸಮಾರಂಭಕ್ಕೆ ಆಹ್ವಾನಿಸಿ ಸತ್ಕರಿಸಲಾಗುತ್ತಿದೆ. ಕಾರ್ಯಕ್ರಮಕ್ಕೂ ಮುನ್ನ ಡಾ. ಜಿ. ಪರಮೇಶ್ವರ್‌ ಹಾಗೂ ಪ್ರಿಯಾಂಕ ಖರ್ಗೆ ಅವರನ್ನು ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಸಿದ್ಧಿಪ್ರಿಯ ಕಲ್ಯಾಣ ಮಂಟಪದ ವರೆಗೆ ಅಲಂಕರಿಸಿದ ಬೆಳ್ಳಿರಥದಲ್ಲಿ ಮೆರವಣಿಗೆಯಲ್ಲಿ ಕರೆತರಲಾಗುವುದು’ ಎಂದು ವಿವರಿಸಿದರು.

ADVERTISEMENT

‘ವೈದ್ಯಕೀಯ ಶಿಕ್ಷಣ ಸಚಿವ ಈ. ತುಕಾರಾಂ, ಮುಜರಾಯಿ ಮತ್ತು ಕೌಶಲ ಅಭಿವೃದ್ಧಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಭಾಗವಹಿಸುವರು. ಜಿಲ್ಲೆ ಸೇರಿದಂತೆ ಇತರೆ ಭಾಗಗಳಿಂದ ಸಮಾಜದ ಹತ್ತು ಸಾವಿರಕ್ಕೂ ಅಧಿಕ ಜನ ಅಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಮಾರಂಭದ ಕುರಿತು ಈಗಾಗಲೇ ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

‘ಸಮಾಜದ ಸಂಘಟನೆ, ಬೌದ್ಧ ವಿಹಾರ ನಿರ್ಮಾಣ ಸೇರಿದಂತೆ ಹಲವು ವಿಷಯಗಳ ಕುರಿತು ಕಾರ್ಯಕ್ರಮದಲ್ಲಿ ಚರ್ಚೆ ನಡೆಯಲಿವೆ. ಕಾರ್ಯಕ್ರಮದ ಅದ್ದೂರಿ ಆಚರಣೆಗೆ ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಹೇಳಿದರು.

ಸಂಚಾಲಕ ಸಿ.ಡಿ. ಈರಣ್ಣ, ಮುಖಂಡರಾದ ಮಾರುತಿ ಕಾಂಬ್ಳೆ, ಸಿ. ಶಿವಮೂರ್ತಿ, ಎಚ್‌.ಸಿ. ರವಿ, ರಾಮಚಂದ್ರ, ಈಶ್ವರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.