
ಹಗರಿಬೊಮ್ಮನಹಳ್ಳಿ: ‘ಪಟ್ಟಣದಲ್ಲಿ ಮಾರ್ಚ್ 1ರಂದು ಜೆಡಿಎಸ್ ಪಕ್ಷದಿಂದ ಬೃಹತ್ ಜನ ವಿರೋಧಿ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಜೆಡಿಎಸ್ ಶಾಸಕ ಕೆ.ನೇಮರಾಜನಾಯ್ಕ ಹೇಳಿದರು.
ಪಟ್ಟಣದ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಭಾನುವಾರ ಮಾತನಾಡಿದ ಅವರು, ‘ಸಮಾವೇಶದಲ್ಲಿ ನಿಖಿಲ್ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ರಾಜ್ಯ ಸರ್ಕಾರ ಮೂಲಸೌಲಭ್ಯ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಅಭಿವೃದ್ಧಿ ಶೂನ್ಯ ವಿಫಲತೆಯನ್ನು ಮುಚ್ಚಿಕೊಳ್ಳಲು ಸಮಾವೇಶಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ಸರಿಯಾಗಿ ನಿರ್ವಹಿಸುತ್ತಿಲ್ಲ, ವಿಧಾನಸಭಾ ಕ್ಷೇತ್ರದಲ್ಲಿ 17 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅನುದಾನ ನೀಡುವಲ್ಲಿ ಮೀನಾಮೇಷ ಎಣಿಸುತ್ತಿದ್ದಾರೆ. ರೈತರ ಕೃಷಿ ಉಪಕರಣಗಳು ದುಬಾರಿಯಾಗಿವೆ. ಬಡ ರೈತರಿಗೆ ಶಾಶ್ವತ ಪರಿಹಾರ ಕಲ್ಪಿಸುವಂತ ಯೋಜನೆ ಜಾರಿಯಾಗಬೇಕು’ ಎಂದರು.
ವಿಜಯನಗರ ಜಿಲ್ಲಾ ಜೆಡಿಎಸ್ ಪಕ್ಷದ ನೂತನ ಅಧ್ಯಕ್ಷರ ಪದಗ್ರಹಣ ಹಮ್ಮಿಕೊಳ್ಳಲಾಗಿದೆ ಎಂದೂ ತಿಳಿಸಿದರು.
‘ರಾಜ್ಯದಲ್ಲಿ ಗೂಂಡಾ ಸಂಸ್ಕೃತಿ ಹೆಚ್ಚಾಗಿದೆ. ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಶೋಭಾಯಾತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಿದ್ದು ಖಂಡನೀಯ. ಗೃಹ ಸಚಿವರು ಯಾವುದೇ ಒತ್ತಡಕ್ಕೆ ಒಳಗಾಗದೇ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.
‘ಕೆಕೆಆರ್ ಡಿಬಿಗೆ ₹5 ಸಾವಿರ ಕೋಟಿ ಅನುದಾನ ಒದಗಿಸುವ ಆಶ್ವಾಸನೆ ಕೇವಲ ಹಾಳೆಯಲ್ಲಿದೆ, ಅದು ಕಾರ್ಯಗತವಾಗಿಲ್ಲ ಎಂದು ನೇಮರಾಜನಾಯ್ಕ ಲೇವಡಿ ಮಾಡಿದರು. ಕೆಕೆಆರ್ಡಿಬಿ ಸಮಿತಿಯಲ್ಲಿ ವಿರೋಧ ಪಕ್ಷದ ಒಬ್ಬೇ ಒಬ್ಬ ಜನಪ್ರತಿನಿಧಿ ಇಲ್ಲ, ಕೇವಲ ಆಡಳಿತ ಪಕ್ಷದ ಶಾಸಕರನ್ನು ಇರಿಸಿಕೊಂಡು ಹಗಲು ದರೋಡೆ ನಡೆಸಲಾಗುತ್ತಿದೆ’ ಎಂದು ಆರೋಪಿಸಿದರು.
ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಾದಾಮಿ ಮೃತ್ಯುಂಜಯ, ತಾಲ್ಲೂಕು ಘಟಕದ ಅಧ್ಯಕ್ಷ ವೈ. ಮಲ್ಲಿಕಾರ್ಜುನ, ಉಲುವತ್ತಿ ಪಿಕೆಪಿಎಸ್ ಅಧ್ಯಕ್ಷ ಕನ್ನಿಹಳ್ಳಿ ಚಂದ್ರಶೇಖರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.