ಕೂಡ್ಲಿಗಿ: ‘ಮಾನವ ಕುಲ ಶ್ರೇಷ್ಠವಾದದ್ದು, ಇದಕ್ಕೆ ಜಾತಿಯ ಬಣ್ಣ ಸಲ್ಲದು’ ಎಂದು ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮಿ ಹೇಳಿದರು.
ತಾಲ್ಲೂಕಿನ ವಿರುಪಾಪುರ ಗ್ರಾಮದಲ್ಲಿ ನೂತನ ದೇವಸ್ಥಾನ ಲೋಕಾರ್ಪಣೆ ಹಾಗೂ ಕಳಸಾರೋಹಣ ಕಾರ್ಯಕ್ರಮ, ಅಡ್ಡಪಲ್ಲಕ್ಕಿ ಮಹೋತ್ಸವ ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಅವರು ಮಾತನಾಡಿದರು.
‘ಭಾರತೀಯ ಸಂಸ್ಕೃತಿ ಅತ್ಯಂತ ಶ್ರೇಷ್ಠವಾಗಿದೆ. ಇಲ್ಲಿ ದೇವರುಗಳನ್ನು ವಿಭಿನ್ನ ಸಂಸ್ಕೃತಿಯ ತಳಹದಿಯಲ್ಲಿ ಪೂಜಿಸುತ್ತಾರೆ. ಆದರೆ ಉಪಾಸನೆಯನ್ನು ಭಕ್ತಿ, ಶ್ರದ್ಧೆಯಿಂದ ಮಾಡಿದರೆ ಫಲ ದೊರೆಯುತ್ತದೆ’ ಎಂದು ತಿಳಿಸಿದರು.
ಇದಕ್ಕೂ ಮೊದಲು ಬೆಳಿಗ್ಗೆ ಗ್ರಾಮದ ಬಾಗಿಲಿನಿಂದ ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ಅಡ್ಡಪಲ್ಲಕ್ಕಿ ಮೆರವಣಿಗೆ ಮಾಡಲಾಯಿತು. ಮಹಿಳೆಯರು ಕಳಸ ಹೊತ್ತು ಭಾಗವಹಿಸಿದ್ದರು.
ನಂತರ ಗ್ರಾಮದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತಕ್ಕೆ ಚಾಲನೆ ನೀಡಲಾಯಿತು. ಬಸವಲಿಂಗೇಶ್ವರ ಹಾಗೂ ಮಲಿಯಮ್ಮ ದೇವಸ್ಥಾನಗಳ ಲೋಕಾರ್ಪಣೆ, ಆಂಜನೇಯ ದೇವಸ್ಥಾನಕ್ಕೆ ಕಳಸಾರೋಹಣ ಮಾಡಲಾಯಿತು.
ಕೂಡ್ಲಿಗಿ ಹಿರೇಮಠದ ಪ್ರಶಾಂತಸಾಗರ ಶಿವಾಚಾರ್ಯರು, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.