ADVERTISEMENT

ವಿಜಯನಗರ: ಕಮಲಾಪುರ ಆಸ್ಪತ್ರೆಯಲ್ಲಿ 34 ಆಮ್ಲಜನಕ ಹಾಸಿಗೆ

ಶಶಿಕಾಂತ್ ಎಸ್. ಶೆಂಬೆಳ್ಳಿ
Published 9 ಜುಲೈ 2021, 19:30 IST
Last Updated 9 ಜುಲೈ 2021, 19:30 IST
ಹೊಸಪೇಟೆ ತಾಲ್ಲೂಕಿನ ಕಮಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಿದ ಡಾ. ಯಶಸ್ವಿನಿ ಹಾಗೂ ಫಾರ್ಮಸಿ ಅಧಿಕಾರಿ ಬಸವರಾಜ ತಳಗೇರಿ
ಹೊಸಪೇಟೆ ತಾಲ್ಲೂಕಿನ ಕಮಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಿದ ಡಾ. ಯಶಸ್ವಿನಿ ಹಾಗೂ ಫಾರ್ಮಸಿ ಅಧಿಕಾರಿ ಬಸವರಾಜ ತಳಗೇರಿ   

ಹೊಸಪೇಟೆ (ವಿಜಯನಗರ): ಕೋವಿಡ್‌ ಮೂರನೇ ಅಲೆ ಸಮರ್ಪಕವಾಗಿ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಅದರ ಭಾಗವಾಗಿ ಹೋಬಳಿಯಲ್ಲಿನ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಮುಂದಾಗಿದೆ.

ಇದರ ಮೂಲಕ ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳ ಮೇಲಿನ ಭಾರ ತಗ್ಗಿಸುವುದು ಇದರ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ತಾಲ್ಲೂಕಿನ ಕಮಲಾಪುರ ಪಟ್ಟಣದ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಕೆಲಸ ತ್ವರಿತ ಗತಿಯಲ್ಲಿ ನಡೆಯುತ್ತಿದೆ. 30 ಹಾಸಿಗೆ ಸೌಲಭ್ಯ ಹೊಂದಿರುವ ಈ ಆಸ್ಪತ್ರೆಯಲ್ಲಿ 34 ಆಮ್ಲಜನಕ ಹಾಸಿಗೆಗೆ ವ್ಯವಸ್ಥೆ ಮಾಡುವ ಕೆಲಸ ಭರದಿಂದ ನಡೆಯುತ್ತಿದೆ.

ಆಸ್ಪತ್ರೆಯ ಮೂರು ಕೊಠಡಿಗಳಲ್ಲಿ 34 ಆಮ್ಲಜನಕ ಹಾಸಿಗೆಗೆ ವ್ಯವಸ್ಥೆ ಮಾಡಲು ಯೋಜಿಸಲಾಗಿದೆ. ಮೊದಲ ಹಂತದಲ್ಲಿ ಒಂದು ಕೊಠಡಿಯಲ್ಲಿ ಕೆಲಸ ನಡೆಯುತ್ತಿದೆ. ಕೆಲವು ಭಾಗಗಳಲ್ಲಿ ಕಟ್ಟಡದ ದುರಸ್ತಿ ಕೆಲಸವಾಗಬೇಕಿದೆ. ಅದನ್ನು ಪೂರ್ಣಗೊಳಿಸಿದ ನಂತರ ಇನ್ನುಳಿದ ಎರಡು ಕೊಠಡಿಗಳಲ್ಲೂ ಆಮ್ಲಜನಕ ಹಾಸಿಗೆಗೆ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ.

ADVERTISEMENT

‘ಈ ಹಿಂದೆ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾದಾಗ ಆಮ್ಲಜನಕ ಸೌಲಭ್ಯ ಹೊಂದಿದ ಹಾಸಿಗೆಗಳಿಗೆ ತೀವ್ರ ಕೊರತೆ ಎದುರಾಗಿತ್ತು. ಅದನ್ನು ನೀಗಿಸಲು ಸಣ್ಣ ಆಸ್ಪತ್ರೆಗಳಲ್ಲೂ ಆಮ್ಲಜನಕ ಹಾಸಿಗೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರಿಗೆ ಉತ್ತಮ ಸೌಲಭ್ಯ ಸಿಗಲಿದೆ. ಬಹಳ ವೇಗವಾಗಿ ಕೆಲಸ ನಡೆಯುತ್ತಿದ್ದು, ಇಷ್ಟರಲ್ಲೇ ಪೂರ್ಣಗೊಳ್ಳಲಿದೆ’ ಎಂದು ಆಸ್ಪತ್ರೆಯ ಡಾ. ಯಶಸ್ವಿನಿ ‘ಪ್ರಜಾವಾಣಿ’ಗೆ ತಿಳಿಸಿದರು.

ಹೊಸಪೇಟೆ ನಗರ ಹೊರತುಪಡಿಸಿದರೆ ತಾಲ್ಲೂಕಿನಲ್ಲಿ ಕಮಲಾಪುರ ಪಟ್ಟಣವೂ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ. ಇದರ ಸುತ್ತಮುತ್ತಲಿನ ಗ್ರಾಮಗಳಾದ ಹಂಪಿ, ಕಡ್ಡಿರಾಂಪುರ, ಬುಕ್ಕಸಾಗರ, ವೆಂಕಟಾಪುರ, ಪಾಪಿನಾಯಕನಹಳ್ಳಿ, ಸೀತಾರಾಂ ತಾಂಡಾ ಸೇರಿದಂತೆ ಇತರೆ ಗ್ರಾಮಸ್ಥರು ಈ ಆಸ್ಪತ್ರೆಯನ್ನೇ ಅವಲಂಬಿಸಿದ್ದಾರೆ. ಈ ಆಸ್ಪತ್ರೆ ಮೇಲ್ದರ್ಜೆಗೇರಿದರೆ ಸ್ಥಳೀಯರಿಗೆ ಉತ್ತಮ ವೈದ್ಯಕೀಯ ಸೇವೆ ಸಿಗಲಿದೆ.

‘ಕಮಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಹಾಸಿಗೆ ಸೌಕರ್ಯ ಒದಗಿಸುತ್ತಿರುವುದು ಉತ್ತಮ ವಿಚಾರ. ಕೋವಿಡ್‌ ಹೆಚ್ಚು ಪ್ರಕರಣಗಳು ಬಂದಾಗ ಜನ ಆಮ್ಲಜನಕ ಸಿಗದೇ ಸಾವನ್ನಪ್ಪಿದ್ದರು. ಯಾವುದೇ ಸಂದರ್ಭದಲ್ಲಿ ಮೂರನೇ ಅಲೆ ಬರಬಹುದು. ಅದಕ್ಕೂ ಮುನ್ನವೇ ಎಚ್ಚೆತ್ತುಕೊಂಡು ಸೌಲಭ್ಯ ಕಲ್ಪಿಸುತ್ತಿರುವುದು ಸ್ವಾಗತಾರ್ಹ’ ಎಂದು ಪಟ್ಟಣದ ನಿವಾಸಿಗಳಾದ ರಾಮು, ವಿಶ್ವನಾಥ, ಹುಲುಗಪ್ಪ ತಿಳಿಸಿದ್ದಾರೆ.

**

ಕಮಲಾಪುರ ಆಸ್ಪತ್ರೆಯಲ್ಲಿ ಆಮ್ಲಜನಕ ಹಾಸಿಗೆಗೆ ವ್ಯವಸ್ಥೆ ಮಾಡಿ, ಇದನ್ನು ಬಹುಪಯೋಗಿ ಆಸ್ಪತ್ರೆಯಾಗಿ ಬದಲಿಸಲು ನಿರ್ಧರಿಸಲಾಗಿದೆ.
-ಡಾ. ಯಶಸ್ವಿನಿ, ಕಮಲಾಪುರ ಸರ್ಕಾರಿ ಆಸ್ಪತ್ರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.