ಸಂಡೂರು: ತಾಲ್ಲೂಕಿನ ಗಣಿ ಬಾಧಿತ ಪ್ರದೇಶಗಳಿಗೆ ಕರ್ನಾಟಕ ಗಣಿಗಾರಿಕೆ ಪರಿಸರ ಪುನಶ್ಚೇತನ ನಿಗಮ (ಕೆಎಂಇಆರ್ಸಿ ) ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಬಿಜ್ಜೂರು ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿ ಅಧಿಕಾರಿಗಳ ಜೊತೆ ಚರ್ಚಿಸಿದರು.
ಕುಮಾರಸ್ವಾಮಿ ದೇವಸ್ಥಾನದಿಂದ ದೇವಗಿರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು, ಸುಬ್ರಯಾನಹಳ್ಳಿ, ಕಮ್ಮತ್ತೂರು, ದೇವಗಿರಿ, ಕಾರ್ತಿಕೇಶ್ವರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ವೀಕ್ಷಣೆ ಮಾಡಿದರು. ಗಣಿ ಬಾಧಿತ ಗ್ರಾಮಗಳ ಬಡಜನರಿಗೆ ಸುಮಾರು 800 ಮನೆಗಳ ವಸತಿ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ದೇವಗಿರಿ ಗ್ರಾಮದ ವ್ಯಾಪ್ತಿಯಲ್ಲಿ 40ಎಕರೆಯ ಜಮೀನನ್ನು ಪರಿಶೀಲಿಸಿದರು.
ಕುಮಾರಸ್ವಾಮಿ ದೇವಸ್ಥಾನದಿಂದ ದೋಣಿಮಲೈ ನಗರದವರೆಗೂ ಸಮಾನಂತರ ರಸ್ತೆಯನ್ನು ನಿರ್ಮಿಸಲು ಸ್ಥಳ ಪರಿಶೀಲನೆ ನಡೆಸಿದರು. ನರಸಿಂಗಾಪುರ, ಭುಜಂಗನಗರ ಗ್ರಾಮಗಳಲ್ಲಿನ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದರು. ಶಾಲೆಗಳಿಗೆ ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ, ನೂತನ ಕೊಠಡಿಗಳ ನಿರ್ಮಾಣ ಸೇರಿದಂತೆ ಸೌಲಭ್ಯಗಳನ್ನು ಕಲ್ಪಿಸಲು ಕ್ರಿಯಾ ಯೋಜನೆ ತಯಾರಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ಎಂಡಿಯವರು ಅಧಿಕಾರಿಗಳ ನೇತೃತ್ವದಲ್ಲಿ ಸಂಡೂರಿನ ಆರಾಧ್ಯ ದೈವ ಕುಮಾರಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯಿತಿ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೇರ್, ಡಿಡಿಪಿಐ ಉಮಾದೇವಿ, ಡಿಸಿಎಫ್ ಬಸವರಾಜ್, ಎಂಜಿನಿಯರ್ಗಳಾದ ಹೇಮರಾಜ್ ನಾಯ್ಕ್, ಕೊಟ್ರೇಶ್ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.