
ಕೂಡ್ಲಿಗಿ: ಪಟ್ಟಣದಲ್ಲಿ ಪ್ರತಿ ವಾರ ವಾರದ ಸಂತೆಯ ವ್ಯಾಪಾರಿಗಳು ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವುದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ.
ಈ ಮೊದಲು ಪಟ್ಟಣದ ಹಳೇ ಸಂತೆ ಮೈದಾನದಲ್ಲಿ ನಡೆಯುತ್ತಿದ್ದ ಸಂತೆಯನ್ನು ಜಾಗದ ಕೊರತೆಯಿಂದ ಬೆಂಗಳೂರು ರಸ್ತೆಯ ಪಕ್ಕದಲ್ಲಿ ಕೊತ್ತಲಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಸೇರಿದ ಜಮೀನಿಗೆ ಸ್ಥಳಾಂತರ ಮಾಡಲಾಯಿತು. ಇಲ್ಲಿ ಪ್ರತಿ ವಾರ ನೂರಾರು ಜನರು ಹಣ್ಣು, ತರಕಾರಿ ಸೇರಿದಂತೆ ವಿವಿಧ ಬಗೆಯ ವಸ್ತುಗಳನ್ನು ಮಾರಾಟ ಮಾಡಲು ಬರುತ್ತಾರೆ. ಇವುಗಳನ್ನು ಕೊಳ್ಳಲು ಸಂಡೂರು, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಕೆಲ ಗ್ರಾಮಗಳು ಸೇರಿದಂತೆ ಕೂಡ್ಲಿಗಿ ಪಟ್ಟಣ ಹಾಗೂ ಸುತ್ತಮುತ್ತಲಿನ ಸಾವಿರಾರು ಜನರು ಬರುತ್ತಾರೆ.
ಇಲ್ಲಿ ಸುಮಾರು 9 ಎಕರೆ ಜಾಗವಿದ್ದರೂ ಅನೇಕ ವ್ಯಾಪಾರಿಗಳು ಪಟ್ಟಣದಿಂದ ರಾಷ್ಟ್ರೀಯ ಹೆದ್ದರಿ-50ಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿನ ಪಂಚಾಚಾರ್ಯ ಕಲ್ಯಾಣ ಮಂಟಪದ ಮುಂದಿನ ಹಳೆ ಬಾವಿಯಿಂದ ಕರ್ನಾಟಕ ಪ್ರಗತಿ ಗ್ರಾಮೀಣ ಬ್ಯಾಂಕ್ ಶಾಖೆಯವರೆಗೆ ಎರಡು ಕಡೆ ಕೆಲ ವ್ಯಾಪಾರಿಗಳು ವಾಹನ ನಿಲ್ಲಿಸಿಕೊಂಡು ವ್ಯಾಪಾರ ಮಾಡಿದರೆ, ಮತ್ತೆ ಕೆಲವರು ಅಂಗಡಿಗಳನ್ನು ಹಾಕಿಕೊಂಡು ಕುಳಿತುಕೊಳ್ಳುತ್ತಾರೆ. ಇದರಿಂದ ವಸ್ತುಗಳನ್ನು ಕೊಂಡು ಕೊಳ್ಳುವವರು ರಸ್ತೆಯಲ್ಲಿ ನಿಲ್ಲುವುದರಿಂದ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ.
ಟಿಪ್ಪರ್, ಲಾರಿ, ಬಸ್ ಸೇರಿದಂತೆ ಭಾರಿ ಗಾತ್ರದ ವಾಹನಗಳು ಈ ರಸ್ತೆಯಲ್ಲಿ ಸಂಚಾರ ಮಾಡುತ್ತಿವೆ. ಇದರಿಂದ ವಾಹನ ಚಾಲನೆಗೆ ತೊದರೆಯಾವುದರ ಜೊತೆಗೆ ಮಕ್ಕಳು, ಮಹಿಳೆಯರು ಹಾಗೂ ವಯೋವೃದ್ಧರು ರಸ್ತೆಯಲ್ಲಿ ಸಂಚರಿಸುವುದಕ್ಕೆ ಹರಸಾಹಸ ಪಡಬೇಕಾದ ಸ್ಥಿತಿ ನಿರ್ಮಾಣವಾಗುತ್ತದೆ. ಅದ್ದರಿಂದ ರಸ್ತೆಯ ಅಕ್ಕ ಪಕ್ಕದಲ್ಲಿ ವ್ಯಾಪಾರ ಮಾಡುವವರನ್ನು ಸಂತೆ ಮೈದಾನಕ್ಕೆ ಕಳುಹಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು ಎಂದು ಸ್ಥಳೀಯರು ಅಗ್ರಹಿಸಿದ್ದಾರೆ.
ಸಂತೆ ಮೈದಾನದಲ್ಲಿ ಸಾಕಷ್ಟು ಜಾಗವಿದ್ದರೂ ಕೆಲವರು ರಸ್ತೆಯ ಅಕ್ಕ ಪಕ್ಕದಲ್ಲಿ ಕುಳಿತು ವ್ಯಾಪಾರ ಮಾಡುತ್ತಾರೆ. ಅವರನ್ನು ಸಂತೆ ಮೈದಾನಕ್ಕೆ ಹೋಗುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು-ಎಚ್. ವೀರಣ್ಣ, ಹೋರಾಟಗಾರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.