ಹೊಸಪೇಟೆ: ತಾಲ್ಲೂಕಿನ ಹಂಪಿ ಕಮಲ ಮಹಲ್ ಸ್ಮಾರಕದ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಗಾಯಗೊಳಿಸಿದ್ದ ಚೀನಾ ದೇಶದ ಪ್ರವಾಸಿಗನನ್ನು ಭಾನುವಾರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
‘ಪ್ರವಾಸಿ, ಕಮಲ ಮಹಲ್ ಸ್ಮಾರಕದ ಮೇಲ್ಭಾಗಕ್ಕೆ ಹೋಗಿ ಛಾಯಾಚಿತ್ರ ತೆಗೆಯಲು ಯತ್ನಿಸಿದ್ದಾನೆ. ಅದನ್ನು ಗಮನಿಸಿದ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಭದ್ರತಾ ಸಿಬ್ಬಂದಿ ಎನ್. ಧರ್ಮಣ್ಣ ಎಂಬುವರು ತಡೆಯಲು ಹೋಗಿದ್ದಾರೆ. ಈ ವೇಳೆ ಅವರೊಂದಿಗೆ ವಾಗ್ವಾದ ನಡೆಸಿ, ಕೈಯಲ್ಲಿದ್ದ ಬಂದೂಕು ಕಿತ್ತುಕೊಂಡು ಹಲ್ಲೆ ನಡೆಸಿದ್ದಾನೆ. ಇದರಿಂದ ಧರ್ಮಣ್ಣ ತಲೆಗೆ ಪೆಟ್ಟಾಗಿ ರಕ್ತಸ್ರಾವವಾಗಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಹಂಪಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
’ವಿಷಯ ತಿಳಿದು ಇತರೆ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಬಂದಾಗ ಪ್ರವಾಸಿ ಅಲ್ಲಿಂದ ಓಡಿ ಹೋಗಿ, ಕೆಲಸಮಯ ಗುಡ್ಡದಲ್ಲಿ ಅವಿತುಕೊಂಡಿದ್ದ. ಬಳಿಕ ಶೋಧ ನಡೆಸಿ, ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇನ್ನಷ್ಟೇ ಪ್ರಕರಣ ದಾಖಲಾಗಬೇಕಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.